ಅರವಿಂದ್ ಕೇಜ್ರಿವಾಲ್ ಮತ್ತು ಇ ಡಿ
ಅರವಿಂದ್ ಕೇಜ್ರಿವಾಲ್ ಮತ್ತು ಇ ಡಿ ಅರವಿಂದ್ ಕೇಜ್ರಿವಾಲ್ (ಎಫ್ ಬಿ)
ಸುದ್ದಿಗಳು

ಅಬಕಾರಿ ನೀತಿ ಪ್ರಕರಣ: ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

Bar & Bench

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ ಡಿ) ತನ್ನನ್ನು ಬಂಧಿಸಿರುವುದನ್ನು ಮತ್ತು ವಿಚಾರಣಾ ನ್ಯಾಯಾಲಯ ಇ ಡಿ ವಶಕ್ಕೆ ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ವಿಚಾರವನ್ನು ʼಬಾರ್‌ ಅಂಡ್‌ ಬೆಂಚ್‌ʼಗೆ ದೃಢಪಡಿಸಿರುವ ಕೇಜ್ರಿವಾಲ್‌ ಅವರ ವಕೀಲರ ತಂಡ ಪ್ರಕರಣವನ್ನು ತುರ್ತು ವಿಚಾರಣೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡುವುದಾಗಿ ತಿಳಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಬಂಧಿಸಲಾಗಿದ್ದು, ಮಾರ್ಚ್ 28ರವರೆಗೆ ಇ ಡಿ ವಶಕ್ಕೆ ನೀಡಲಾಗಿತ್ತು.

ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಕೇಜ್ರಿವಾಲ್ ಪ್ರಮುಖ ಸಂಚುಕೋರ ಎಂದು ಇ ಡಿ ಆರೋಪಿಸಿತ್ತು.

2021-22ರ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಆಗಸ್ಟ್ 17, 2022ರಂದು ಮೊದಲಿಗೆ ಪ್ರಕರಣ ದಾಖಲಿಸಿಕೊಂಡಿತ್ತು. ಜುಲೈ 20, 2022ರಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸಿಬಿಐ ಪ್ರಕರಣ ದಾಖಲಿಸಿತ್ತು. 

ನೀತಿ ರೂಪಿಸುವ ಹಂತದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಸೇರಿದಂತೆ ಎಎಪಿ ನಾಯಕರು, ಅಪರಿಚಿತ ಮತ್ತು ಅನಾಮಧೇಯ ಖಾಸಗಿ ವ್ಯಕ್ತಿಗಳೊಂದಿಗೆ ಸೇರಿ ಕ್ರಿಮಿನಲ್ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಹಾಗೂ ಎಎಪಿ ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್‌ ಈಗಾಗಲೇ ಸೆರೆವಾಸ ಅನುಭವಿಸುತ್ತಿದ್ದಾರೆ. ಮತ್ತೊಂದೆಡೆ ಇದೇ ಪ್ರಕರಣದಲ್ಲಿ ಭಾರತ ರಾಷ್ಟ್ರ ಸಮಿತಿ ಶಾಸಕಿ ಮತ್ತು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಪುತ್ರಿ ಕೆ ಕವಿತಾ ಅವರನ್ನು ಇ ಡಿ ಬಂಧಿಸಿದೆ.