Ashish Mishra, Lakhimpur Kheri Violence
Ashish Mishra, Lakhimpur Kheri Violence 
ಸುದ್ದಿಗಳು

ಆಶಿಶ್ ಮಿಶ್ರಾ ಜಾಮೀನು ಅರ್ಜಿ: ಅನಿರ್ದಿಷ್ಟ ಸೆರೆವಾಸ ಕೂಡದು ಎಂದ ಸುಪ್ರೀಂ; ಏಕರೂಪ ನ್ಯಾಯಕ್ಕೆ ದವೆ ಆಗ್ರಹ

Bar & Bench

ರೈತರು ಸೇರಿದಂತೆ 8 ಜನರ ಮೇಲೆ ವಾಹನ ಹರಿಸಿ ಅವರ ಸಾವಿಗೆ ಕಾರಣವಾಗಿದ್ದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ಟೇನಿ ಅವರ ಪುತ್ರ ಆಶಿಶ್‌ ಮಿಶ್ರಾ ಭಾಗಿಯಾಗಿದ್ದರು ಎನ್ನಲಾದ ಲಖಿಂಪುರ್‌ ಖೇರಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್‌ ಕಾಯ್ದಿರಿಸಿದೆ [ಆಶಿಶ್ ಮಿಶ್ರಾ ಅಲಿಯಾಸ್‌ ಮೋನು ಮತ್ತು ಉತ್ತರ ಪ್ರದೇಶ ಸರ್ಕಾರ ನಡುವಣ ಪ್ರಕರಣ].

ಪ್ರಕರಣದ ವಿಚಾರಣೆ ಮುಕ್ತಾಯಗೊಳ್ಳಲು 5 ವರ್ಷಗಳು ಬೇಕಾಗಬಹುದು ಅಲ್ಲಿಯವರೆಗೂ ಆರೋಪಿಗಳನ್ನು ಜೈಲಿನಲ್ಲಿರಿಸಲಾಗದು ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆ ಕೆ ಮಹೇಶ್ವರಿ ಅವರಿದ್ದ ಪೀಠ ಇಂದು ನಡೆದ ವಿಚಾರಣೆ ವೇಳೆ ಹೇಳಿತು.

ಇದಕ್ಕೆ ಪ್ರತಿಕ್ರಿಯಿಸಿ ದೂರುದಾರರೊಬ್ಬರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ದುಶ್ಯಂತ್‌ ದವೆ ಹಾಗಿದ್ದರೆ 2020ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಈವರೆಗೂ ಜೈಲಿನಲ್ಲಿರುವ ಆರೋಪಿಗಳು ಸೇರಿದಂತೆ ಎಲ್ಲ ಆರೋಪಿಗಳಿಗೂ ಇದೇ ನ್ಯಾಯವನ್ನು ಏಕರೂಪವಾಗಿ ಅನ್ವಯಿಸಬೇಕು ಎಂದು ಆಗ್ರಹಿಸಿದರು.

ಘಟನೆ ನಡೆದ ಸಂದರ್ಭದಲ್ಲಿ ಆರೋಪಿ ಮಿಶ್ರಾ ಸ್ಥಳದಲ್ಲಿ ಇರಲಿಲ್ಲವಾದ್ದರಿಂದ ಅವರಿಗೆ ಜಾಮೀನು ನೀಡಬೇಕು ಎಂದು ಹಿರಿಯ ನ್ಯಾಯವಾದಿ ಮುಕುಲ್‌ ರೋಹಟ್ಗಿ ಮನವಿ ಮಾಡಿದರು.

ಉತ್ತರ ಪ್ರದೇಶ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಅಡ್ವೊಕೇಟ್ ಜನರಲ್ (ಎಎಜಿ) ಗರಿಮಾ ಪ್ರಸಾದ್‌ ಅವರು ಅಪರಾಧದ ಘೋರ ಸ್ವರೂಪವನ್ನು ಉಲ್ಲೇಖಿಸಿ ಜಾಮೀನು ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ವಾದ ಆಲಿಸಿದ ನ್ಯಾಯಾಲಯ ತೀರ್ಪು ಕಾಯ್ದಿರಿಸಿತು.