Santro Ravi
Santro Ravi 
ಸುದ್ದಿಗಳು

ಸ್ಯಾಂಟ್ರೋ ರವಿ ಪ್ರಕರಣ: ಕಸ್ಟಡಿಗೆ ಪಡೆಯಲು ಪೊಲೀಸರು ವಿಫಲ; ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೋರ್ಟ್ ಸೂಚನೆ

Bar & Bench

ಪತ್ನಿಯ ಮೇಲೆ ಹಲ್ಲೆ, ಬಲಾತ್ಕಾರ ನಡೆಸಿ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಬಂಧಿತನಾಗಿರುವ ಹಾಗೂ ಹಲವು ರಾಜಕಾರಣಿಗಳ ಜೊತೆ ನಿಕಟ ಸಂಪರ್ಕ ಸಾಧಿಸಿ, ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಹಲವು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪಕ್ಕೆ ಗುರಿಯಾಗಿರುವ ಕೆ ಎಸ್‌ ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೊ ರವಿಯನ್ನು ವಿಚಾರಣೆಗಾಗಿ ಪೊಲೀಸ್‌ ವಶಕ್ಕೆ ಪಡೆಯುವ ಪ್ರಯತ್ನ ವಿಫಲವಾಗಿದೆ. ಮೈಸೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜನವರಿ 25ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಎರಡು ದಿನಗಳ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಸ್ಯಾಂಟ್ರೊ ರವಿಯನ್ನು ಪೊಲೀಸರು ಇಂದು ಮೈಸೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗುರುರಾಜ್‌ ಸೋಮಕ್ಕಲವರ್‌ ಅವರ ಮುಂದೆ ಹಾಜರುಪಡಿಸಿದರು. ಈ ವೇಳೆ ಪೊಲೀಸ್ ಕಸ್ಟಡಿಗೆ ಪಡೆಯಲು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಪೊಲೀಸರಿಗೆ ಸೂಚಿಸಿದ ನ್ಯಾಯಾಲಯವು ರವಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿತು.

ಈ ಮಧ್ಯೆ, ಸ್ಯಾಂಟ್ರೊ ರವಿಗೆ ಸಂಬಂಧಿಸಿದ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲು ನಿರ್ದೇಶಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಗುಜರಾತ್‌ನ ಸ್ಥಳೀಯ ಪೊಲೀಸರ ನೆರವಿನಿಂದ ಕಳೆದ ಶುಕ್ರವಾರ ಬಂಧಿಸಲ್ಪಟ್ಟಿದ್ದ‌ ರವಿಯನ್ನು ಮೈಸೂರಿಗೆ ಕರೆ ತಂದಿದ್ದ ಪೊಲೀಸರು ಶನಿವಾರ ಮೈಸೂರಿನ ವಾಣಿ ವಿಲಾಸ ಮೊಹಲ್ಲಾದಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದ್ದರು. ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದ ನ್ಯಾಯಾಧೀಶರು ರವಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದರು.

ಸ್ಯಾಂಟ್ರೊ ರವಿಯ ಎರಡನೇ ಪತ್ನಿ ಎನ್ನಲಾದ ಡಿ ಆರ್‌ ರಶ್ಮಿ ಅವರು ನೀಡಿದ ದೂರಿನ ಆಧಾರದಲ್ಲಿ ಆತನ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಜನವರಿ 2ರಂದು ಪ್ರಕರಣ ದಾಖಲಾಗಿದೆ. ರವಿ ವಿರುದ್ಧ ವರದಕ್ಷಿಣೆ ನಿಷೇಧ ಕಾಯಿದೆ ಸೆಕ್ಷನ್‌ 3, ಪರಿಶಿಷ್ಟ ಜಾತಿ ಮತ್ತು ಪಂಗಡಗಳು (ದೌರ್ಜನ್ಯ ನಿಯಂತ್ರಣ) ತಿದ್ದುಪಡಿ ಸುಗ್ರೀವಾಜ್ಞೆ -2014ರ ಸೆಕ್ಷನ್‌ಗಳಾದ 3(1)(ಆರ್‌), 3(1)(ಎಸ್‌), 3(1)(ಡಬ್ಲ್ಯು) (ಐ), 3(2)(5ಎ) ಹಾಗೂ ಐಪಿಸಿ ಸೆಕ್ಷನ್‌ಗಳಾದ 506, 498ಎ, 504, 376, 270, 313, 323 ಅಡಿ ಪ್ರಕರಣ ಎಫ್‌ಐಆರ್‌ ದಾಖಲಿಸಲಾಗಿದೆ.