Bombay High Court, Badlapur Minor Assault 
ಸುದ್ದಿಗಳು

ಬದಲಾಪೂರ್ ಲೈಂಗಿಕ ದೌರ್ಜನ್ಯ: ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆ ಆರಂಭಿಸಿದ ಬಾಂಬೆ ಹೈಕೋರ್ಟ್

ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ಡೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರಿದ್ದ ವಿಭಾಗೀಯ ಪೀಠ ಗುರುವಾರ ಬೆಳಿಗ್ಗೆ 10.30ಕ್ಕೆ ಪ್ರಕರಣದ ವಿಚಾರಣೆ ಆರಂಭಿಸಿದೆ.

Bar & Bench

ಮುಂಬೈ ಸಮೀಪದ ಥಾಣೆಯ ಬದಲಾಪೂರ್  ಶಿಶುವಿಹಾರಕ್ಕೆ ತೆರಳಿದ್ದ ಇಬ್ಬರು ಎಳೆಯ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್‌ ಬುಧವಾರ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದ್ದು ಇಂದು (ಗುರುವಾರ) ಪ್ರಕರಣದ ವಿಚಾರಣೆ ಆರಂಭಿಸಿದೆ [ಹೈಕೋರ್ಟ್‌ ಸ್ವಯಂ ಪ್ರೇರಿತ ಮೊಕದ್ದಮೆ ಮತ್ತು ಮಹಾರಾಷ್ಟ್ರ ಸರ್ಕಾರ ನಡುವಣ ಪ್ರಕರಣ]

ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ಡೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರಿದ್ದ ವಿಭಾಗೀಯ ಪೀಠ ಗುರುವಾರ ಬೆಳಿಗ್ಗೆ 10.30ಕ್ಕೆ ಪ್ರಕರಣದ ವಿಚಾರಣೆ ಆರಂಭಿಸಿದೆ.

ಕಳೆದ ವಾರ ಬದಲಾಪೂರದ ಶಾಲೆಯೊಂದರಲ್ಲಿ ಶಿಶುವಿಹಾರಕ್ಕೆ ತೆರಳಿದ್ದ ಇಬ್ಬರು ಎಳೆಯ ಹೆಣ್ಣುಮಕ್ಕಳ ಮೇಲೆ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ವರದಿಯಾಗಿದೆ.

ಆಗಸ್ಟ್‌ 13 ರಂದು ಶಿಶುವಿಹಾರದ ಶೌಚಾಲಯದಲ್ಲಿ ಘಟನೆ ನಡೆದಿದ್ದು ಆಗಸ್ಟ್‌ 16 ರಂದು ಪೋಷಕರು ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ದೂರು ನೀಡಿದ 11 ಗಂಟೆಗಳ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಕ್ಕಳ ಕುಟುಂಬ ತಿಳಿಸಿದೆ.

ಆಗಸ್ಟ್ 17 ರಂದು ಇಬ್ಬರು ಪುಟ್ಟ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 23 ವರ್ಷದ ಶಾಲಾ ಅಟೆಂಡರ್ ಅಕ್ಷಯ್ ಶಿಂಧೆ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆತನ ಪೊಲೀಸ್ ಕಸ್ಟಡಿ ಅವಧಿಯನ್ನು ಸ್ಥಳೀಯ ನ್ಯಾಯಾಲಯ ಆಗಸ್ಟ್ 26ರವರೆಗೆ ವಿಸ್ತರಿಸಿದೆ.

ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಹಲವು ಪ್ರತಿಭಟನೆಗಳು ನಡೆದಿವೆ. ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದೆ.