Praveen Togadia and Karnataka HC
Praveen Togadia and Karnataka HC 
ಸುದ್ದಿಗಳು

ಉಡುಪಿಯಲ್ಲಿ ನಡೆದಿದ್ದ ಹಿಂದೂ ಸಮಾಜೋತ್ಸವಕ್ಕೆ ಪ್ರವೀಣ್‌ ತೊಗಾಡಿಯಾಗೆ ನಿರ್ಬಂಧ: ಅರ್ಜಿ ವಜಾ ಮಾಡಿದ ಹೈಕೋರ್ಟ್‌

Bar & Bench

ಹಿಂದೂ ಸಮಾಜೋತ್ಸವದಲ್ಲಿ ಭಾಗಿಯಾಗುವುದನ್ನು ತಡೆಯುವ ನಿಟ್ಟಿನಲ್ಲಿ ಏಳು ದಿನಗಳ ಕಾಲ ಉಡುಪಿ ಜಿಲ್ಲೆಯ ವ್ಯಾಪ್ತಿಗೆ ಪ್ರವೇಶಿಸದಂತೆ ಹಾಗೂ ಸಾರ್ವಜನಿಕ ಸಭೆ ಅಥವಾ ಸಮಾರಂಭದಲ್ಲಿ ಭಾಗವಹಿಸದಂತೆ 2015ರಲ್ಲಿ ಉಡುಪಿ ಜಿಲ್ಲಾಡಳಿತ ಮಾಡಿದ್ದ ನಿಷೇಧಾಜ್ಞೆ ಪ್ರಶ್ನಿಸಿ ವಿಶ್ವ ಹಿಂದೂ ಪರಿಷತ್‌ನ ಕಾರ್ಯಾಧ್ಯಕ್ಷ ಪ್ರವೀಣ್‌ ಭಾಯ್‌ ತೊಗಾಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಈಚೆಗೆ ವಜಾ ಮಾಡಿದೆ.

ಗುಜರಾತ್‌ನ ತೊಗಾಡಿಯಾ ಮತ್ತು ಉಡುಪಿಯ ಬೈಕಾಡಿ ಸುಪ್ರಸಾದ್‌ ಶೆಟ್ಟಿ ಅವರು ಸಲ್ಲಿಸಿರುವ ಅರ್ಜಿಯು ನಿರರ್ಥವಾಗಿದೆ ಎಂದು ಹೇಳಿ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ನೇತೃತ್ವದ ಏಕಸದಸ್ಯ ಪೀಠವು ಅರ್ಜಿ ವಜಾ ಮಾಡಿದೆ.

ಸಿಆರ್‌ಪಿಸಿ ಸೆಕ್ಷನ್‌ 144(3)ರ ಅಡಿ ಉಡುಪಿಯ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಯವರು  2015ರ ಮಾರ್ಚ್‌ 7-13ರವರೆಗೆ ತೊಗಾಡಿಯಾ ಜಿಲ್ಲೆಗೆ ಪ್ರವೇಶಿಸುವುದಕ್ಕೆ ನಿಷೇಧ ವಿಧಿಸಿ ಮಾರ್ಚ್‌ 6ರಂದು ಆದೇಶ ಮಾಡಿದ್ದರು. 2015ರ ಮಾರ್ಚ್‌ 9ರಂದು ನಿಗದಿಯಾಗಿದ್ದ ಹಿಂದೂ ಸಮಾಜೋತ್ಸವದಲ್ಲಿ ಭಾಗಿಯಾಗುವುದನ್ನು ತಡೆಯುವ ನಿಟ್ಟಿನಲ್ಲಿ ತೊಗಾಡಿಯಾಗೆ ನಿರ್ಬಂಧ ವಿಧಿಸಲಾಗಿತ್ತು. ಪ್ರಚೋದನಾಕಾರಿ ಭಾಷಣದ ಮೂಲಕ ಕೋಮು ಶಾಂತಿಗೆ ಧಕ್ಕೆ ಉಂಟು ಮಾಡಿ, ಕಾನೂನು ಮತ್ತು ಸುವ್ಯವಸ್ಥೆ ಕದಡುವ ಸಾಧ್ಯತೆಯಿಂದ ಭೇಟಿಗೆ ನಿರ್ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದರು.

ಇದನ್ನು ಪ್ರಶ್ನಿಸಿ ತೊಗಾಡಿಯಾ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಿದ್ದ ಪೀಠವು ಆದೇಶಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು. ಈಗ “ಉಡುಪಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಯವರು 2015ರಲ್ಲಿ ಆದೇಶ ಮಾಡಿದ್ದು, ಅದು ಮುಗಿದು ಹೋಗಿದೆ. ಹೀಗಾಗಿ, ಈ ಅರ್ಜಿಯನ್ನು ಪರಿಗಣಿಸುವ ಅಗತ್ಯವಿಲ್ಲ” ಎಂದು ಪೀಠ ಹೇಳಿದೆ.