BBMP and Karnataka HC
BBMP and Karnataka HC 
ಸುದ್ದಿಗಳು

ಬಿಬಿಎಂಪಿ ಚುನಾವಣೆ: ಕಾಲಾವಕಾಶ ವಿಸ್ತರಣೆ ಕೋರಿ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಡಿ.14ಕ್ಕೆ ಮುಂದೂಡಿಕೆ

Bar & Bench

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸಲು ಮತ್ತೆ ಮೂರು ತಿಂಗಳ ಕಾಲಾವಕಾಶ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಡಿಸೆಂಬರ್‌ 14ಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮುಂದೂಡಿದೆ.

ಬಿಬಿಎಂಪಿಯ 243 ವಾರ್ಡ್‌ಗಳಿಗೆ ನವೆಂಬರ್ 30ರೊಳಗೆ ಮೀಸಲಾತಿ ನಿಗದಿಪಡಿಸಬೇಕು ಹಾಗೂ ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಬೇಕು ಎಂದು 2022ರ ಸೆಪ್ಟೆಂಬರ್‌ 30ರಂದು ಹೈಕೋರ್ಟ್ ಆದೇಶ ನೀಡಿತ್ತು. ಆದರೆ, ಈ ಆದೇಶ ಪಾಲನೆಗೆ ಮೂರು ತಿಂಗಳ ಕಾಲ ಅವಧಿ ವಿಸ್ತರಿಸುವಂತೆ ಕೋರಿ ನಗರಾಭಿವೃದ್ಧಿ ಇಲಾಖೆ ಇತ್ತೀಚೆಗೆ ಮನವಿ ಸಲ್ಲಿಸಿದ್ದು, ಅದರ ವಿಚಾರಣೆಯನ್ನು ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತ್ತು.

ರಾಜ್ಯ ಚುನಾವಣಾ ಆಯೋಗವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರು ಚುನಾವಣೆ ನಡೆಸಲು ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ನಲ್ಲೂ ಅರ್ಜಿ ಸಲ್ಲಿಸಲಾಗಿದೆ. ಹಾಗೆಯೇ, ಚುನಾವಣೆ ನಡೆಸಲು ಕಾಲಾವಕಾಶ ಕೋರಿರುವ ರಾಜ್ಯ ಸರ್ಕಾರದ ಅರ್ಜಿ ಕುರಿತು ಮಾಹಿತಿ ನೀಡಿ ಆಯೋಗವು ಸುಪ್ರೀಂ ಕೋರ್ಟ್‌ಗೆ ಮೆಮೊ ಸಲ್ಲಿಸಿದೆ. ಅರ್ಜಿಯು ಡಿಸೆಂಬರ್‌ 9ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ಪೀಠದ ಗಮನಕ್ಕೆ ತಂದರು.

ಇದನ್ನು ಪರಿಗಣಿಸಿದ ಪೀಠವು ಸುಪ್ರಿಂ ಕೋರ್ಟ್ ವಿಚಾರಣೆ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂದು ತಿಳಿಸಿ ವಿಚಾರಣೆಯನ್ನು ಡಿಸೆಂಬರ್‌ 14ಕ್ಕೆ ಮುಂದೂಡಿದೆ.

ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ 2022ರ ನವೆಂಬರ್‌ 30ರೊಳಗೆ ಹೊಸದಾಗಿ ಮೀಸಲು ಪಟ್ಟಿ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಸೆಪ್ಟೆಂಬರ್‌ 30ರಂದು ಹೈಕೋರ್ಟ್ ಸೂಚಿಸಿತ್ತು. ಆದರೆ, ಸರ್ಕಾರ ಚುನಾವಣೆ ನಡೆಸಲು ಸಮಯ ವಿಸ್ತರಿಸಲು ಕೋರಿ ಸಕಾರಣವಿಲ್ಲದೆ ಅರ್ಜಿ ಸಲ್ಲಿಸಿರುವುದು ನ್ಯಾಯಸಮ್ಮತವಲ್ಲ. ವಿಧಾನಸಭೆ ಚುನಾವಣೆ ಬರುವುದರಿಂದ 2023ರ ಮೇ ನಂತರ ಚುನಾವಣೆ ನಡೆಸುವ ಉದ್ದೇಶ ಸರ್ಕಾರದ್ದಾಗಿದ್ದು, ಅರ್ಜಿ ವಜಾಗೊಳಿಸಬೇಕು ಎಂದು ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಿರುವ ಆಕ್ಷೇಪಣೆಯಲ್ಲಿ ರಾಜ್ಯ ಚುನಾವಣಾ ಆಯೋಗ ಕೋರಿದೆ.