BJP MLA Munirathna and Bengaluru City Civil Court 
ಸುದ್ದಿಗಳು

ಅತ್ಯಾಚಾರ ಪ್ರಕರಣ ಹಿಂಪಡೆಯಲು ಸಂತ್ರಸ್ತೆಗೆ ಬೆದರಿಕೆ: ಶಾಸಕ ಮುನಿರತ್ನಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾ ಕೆ ಬಿ ಶಿವಪ್ರಸಾದ್ ಪುರಸ್ಕರಿಸಿದ್ದಾರೆ.

Bar & Bench

ಅತ್ಯಾಚಾರ ಪ್ರಕರಣವನ್ನು ಹಿಂಪಡೆಯುವಂತೆ ಸಂತ್ರಸ್ತೆಗೆ ಬೆದರಿಕೆ ಹಾಕಿ ಒತ್ತಡ ಹೇರಿದ ಆರೋಪ ಸಂಬಂಧ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ ಬಿ ಶಿವಪ್ರಸಾದ್ ಪುರಸ್ಕರಿಸಿದ್ದಾರೆ.

Judge Shivaprasad KB

ಅರ್ಜಿಯ ಕುರಿತು ಮುಂದಿನ ವಿಚಾರಣೆವರೆಗೆ ಅರ್ಜಿದಾರರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಮುನಿರತ್ನರನ್ನು ಬಂಧಿಸಿದರೆ ಮಾಡಿದರೆ, ಎರಡು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್‌ ಮತ್ತು ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತಾ ಖಾತರಿ ಪಡೆದು ಬಿಡುಗಡೆ ಮಾಡಬೇಕು ಎಂದು ರಾಜರಾಜೇಶ್ವರಿ ನಗರ ಠಾಣಾ ಪೊಲೀಸರಿಗೆ ನ್ಯಾಯಾಲಯವು ನಿರ್ದೇಶಿಸಿದೆ.

ಅಲ್ಲದೆ, ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್‌ ಸಾಕ್ಷಿಗೆ ಬೆದರಿಕೆವೊಡ್ಡಬಾರದು. ಸಾಕ್ಷ್ಯಧಾರಗಳನ್ನು ತಿರುಚಲು ಯತ್ನಿಸಬಾರದು. ಯಾವುದೇ ರೀತಿಯಿಂದಲೂ ಸಾಕ್ಷಿಯನ್ನು ಸಂಪರ್ಕಿಸಬಾರದು. ಪೊಲೀಸರು ತನಿಖೆಗೆ ಕರೆದರೆ ತಪ್ಪದೇ ಹಾಜರಾಗಬೇಕು. ಆ ಮೂಲಕ ತನಿಖೆಗೆ ಸಹಕರಿಸಬೇಕು. ನ್ಯಾಯಾಲಯದ ವಿಚಾರಣಾ ವ್ಯಾಪ್ತಿ ಮೀರಿ ಹೊರ ಗೆ ಹೋಗಬಾರದು ಎಂದು ಮುನಿರತ್ನಗೆ ಅವರಿಗೆ ಕೋರ್ಟ್‌ ಷರತ್ತು ವಿಧಿಸಿದೆ.

ಹಾಗೆಯೇ, ಅರ್ಜಿ ಸಂಬಂಧ ರಾಜರಾಜೇಶ್ವರಿ ನಗರ ಠಾಣಾ ಪೋಲಿಸರಿಗೆ ನೋಟಿಸ್‌ ಜಾರಿಗೊಳಿಸಿ ಸೆಪ್ಟೆಂಬರ್ 15ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಹಾಜರಾಗಿ, ಅರ್ಜಿದಾರರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

ಪ್ರಕರಣದ ಹಿನ್ನೆಲೆ: 36 ವರ್ಷದ ಸಂತ್ರಸ್ತ ಮಹಿಳೆಯು ಸೆ.9ರಂದು ರಾತ್ರಿ ಆರ್‌ ಆರ್ ನಗರ ಪೊಲೀಸರಿಗೆ ದೂರು ನೀಡಿ, ಈ ಹಿಂದೆ ರವಿ ಶಂಕರ್ ಎಂಬ ವ್ಯಕ್ತಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದೆ. ಇದೀಗ ಆ ಅತ್ಯಾಚಾರ ಪ್ರಕರಣವನ್ನು ಹಿಂಪಡೆಯುವಂತೆ ಶಾಸಕ ಮುನಿರತ್ನ ಹಾಗೂ ಮೂವರು ಪೊಲೀಸ್‌ ಅಧಿಕಾರಿಗಳು ಸೇರಿ ಎಂಟು ಮಂದಿ ತಮ್ಮನ್ನು ಬೆದರಿಸಿ, ಮಾನಸಿಕವಾಗಿ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಆರ್‌ ಆರ್ ನಗರ ಪೊಲೀಸರು ಶಾಸಕ ಮುನಿರತ್ನ ಸೇರಿದಂತೆ ಎಂಟು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಶಾಸಕ ಮುನಿರತ್ನ ನ್ಯಾಯಾಲಯದ ಮೊರೆ ಹೋಗಿದ್ದರು.