farmer CM Basavaraj Bommai and Bengaluru City civil court 
ಸುದ್ದಿಗಳು

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳ ವಿರುದ್ಧ ಮಧ್ಯಂತರ ಪ್ರತಿಬಂಧಕಾದೇಶ

Bar & Bench

ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಯಾವುದೇ ತೆರನಾದ ಮಾನಹಾನಿ ಹೇಳಿಕೆ ಸುದ್ದಿ ಪ್ರಕಟ/ಪ್ರಸಾರ ಮಾಡದಂತೆ ವಕೀಲ ಕೆ ಎನ್‌ ಜಗದೀಶ್‌ ಮತ್ತು ಮಾಧ್ಯಮ ಸಂಸ್ಥೆಗಳ ವಿರುದ್ಧ ಬೆಂಗಳೂರಿನ ಸತ್ರ ನ್ಯಾಯಾಲಯವು ಬುಧವಾರಕ್ಕೆ ಏಕಪಕ್ಷೀಯ ಮಧ್ಯಂತರ ಪ್ರತಿಬಂಧಕಾದೇಶ ಮಾಡಿದೆ.

ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಸಲ್ಲಿಸಿರುವ ಮೂಲ ದಾವೆಯ ಭಾಗವಾಗಿ ಸಲ್ಲಿಕೆಯಾಗಿರುವ ಮಧ್ಯಂತರ ಅರ್ಜಿಗೆ ಸಂಬಂಧಿಸಿದಂತೆ 8ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ವಾಣಿ ಎ. ಶೆಟ್ಟಿ ಅವರು ಇಂದು ಆದೇಶ ಮಾಡಿದ್ದಾರೆ.

“ಪ್ರತಿವಾದಿಗಳಿಗೆ ಸಂಬಂಧಿಸಿದ ಯಾವುದೇ ವ್ಯಕ್ತಿಗಳು ಮುಂದಿನ ವಿಚಾರಣೆಯವರೆಗೆ ಫಿರ್ಯಾದಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಮಾನಹಾನಿ ಉಂಟು ಮಾಡುವ ಸುದ್ದಿ ಪ್ರಸಾರ, ಪ್ರಕಟ ಮತ್ತು ಹಂಚಿಕೆ ಮಾಡಬಾರದು. 48ನೇ ಪ್ರತಿವಾದಿಯಾಗಿರುವ ʼಎಕ್ಸ್‌ʼ ಬೊಮ್ಮಾಯಿ ಅವರಿಗೆ ಸಂಬಂಧಿಸಿದ ಎರಡು ಟ್ವೀಟ್‌ಗಳನ್ನು 24 ಗಂಟೆಯ ಒಳಗೆ ತೆಗೆದು ಹಾಕಬೇಕು. ಫಿರ್ಯಾದಿ ಬೊಮ್ಮಾಯಿ ಅವರು ನಾಗರಿಕ ಪ್ರಕ್ರಿಯಾ ಸಂಹಿತೆ ನಿಯಮಗಳನ್ನು ಅನುಪಾಲಿಸಬೇಕು. ಏಕಪಕ್ಷೀಯ ಮಧಂತರ ಪ್ರತಿಬಂಧಕಾದೇಶ ಮಾಡಲಾಗಿದ್ದು, ಮಧ್ಯಂತರ ಅರ್ಜಿಗೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ನೋಟಿಸ್‌ ಮತ್ತು ಸಮನ್ಸ್‌ ಜಾರಿ ಮಾಡಲಾಗಿದೆ” ಎಂದು ಆದೇಶದಲ್ಲಿ ದಾಖಲಿಸಲಾಗಿದೆ.

ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್‌ 9ಕ್ಕೆ ಮುಂದೂಡಲಾಗಿದೆ.