ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ತನಿಖಾ ನೆಪದಲ್ಲಿ ಸಿಐಡಿ ಪೊಲೀಸರು ನೀಡಿದ ಕಿರುಕುಳದಿಂದ ಮನನೊಂದು ವಕೀಲೆ ಎಸ್ ಜೀವಾ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವಿವರ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ನಿರ್ದೇಶಿಸಿದೆ.
ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ತಮ್ಮ ವಿರುದ್ಧ ಸಿದ್ದಾಪುರ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಎಸ್ ಜೀವಾ 2023ರ ಆಗಸ್ಟ್ 24ರಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. 2024ರ ನವೆಂಬರ್ 13ರಂದು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಜೀವಾ ಅವರು ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳ ಮುಂದೆ ನವೆಂಬರ್ 14ರಂದು ಹಾಜರಾಗಿ ತನಿಖೆಗೆ ಸಹಕಾರ ನೀಡಬೇಕು. ವಿಚಾರಣಾ ಪ್ರಕ್ರಿಯೆಯನ್ನು ವಿಡಿಯೋಗ್ರಾಫ್ ಮಾಡಿ, ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶಿಸಿತ್ತು.
ಆದರೆ, ನವೆಂಬರ್ 22ರಂದು ಮುಂಜಾನೆ ಜೀವಾ ಅವರು ತಮ್ಮ ಮನೆಯಲ್ಲಿ ನೇಣುಬಿಗಿದುಕೊಡು ಆತ್ಮಹತ್ಯೆಗೆ ಶರಣಾಗಿದ್ದರು. ಈ ಘಟನೆಯನ್ನು ಖಂಡಿಸಿರುವ ಬೆಂಗಳೂರು ವಕೀಲರ ಸಂಘವು ಜೀವಾ ಅವರ ಪರವಾಗಿ ಮಧ್ಯಂತರ ಅರ್ಜಿ ಸಲ್ಲಿಸಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿ ಆದೇಶಿಸಬೇಕು ಎಂದು ಕೋರಿದೆ.
ಈ ಮಧ್ಯಂತರ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಪ್ರಕರಣ ಕುರಿತ ತನಿಖೆಯ ಸಮಗ್ರ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರಿಗೆ ಸೂಚಿಸಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿತು.
ಇದಕ್ಕೂ ಮುನ್ನ, ಬೆಂಗಳೂರು ವಕೀಲರ ಸಂಘದ ಪರ ಅದರ ಅಧ್ಯಕ್ಷರಾದ ಹಿರಿಯ ವಕೀಲ ವಿವೇಕ್ ಎಸ್. ಸುಬ್ಬಾರೆಡ್ಡಿ ಅವರು “ಪೊಲೀಸರ ಕಿರುಕುಳ ತಾಳಲಾರದೆ ವಕೀಲೆ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮುನ್ನ ಜೀವಾ 11 ಪುಟಗಳ ಮರಣ ಉಯಿಲು ಬರೆದಿದ್ದಾರೆ. ಸಿಐಡಿ ತನಿಖಾಧಿಕಾರಿಯು ಜೀವಾ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು” ಎಂದು ಕೋರಿದರು.
ಮಧ್ಯಂತರ ಅರ್ಜಿಯಲ್ಲಿ ಪ್ರಮಾಣ ಪತ್ರ ಸಲ್ಲಿಸಿರುವ ಬೆಂಗಳೂರು ವಕೀಲರ ಸಂಘದ ಆಧ್ಯಕ್ಷರು, “ಜೀವಾ ಅವರು ವಕೀಲರಾಗಿದ್ದರು. ಹೈಕೋರ್ಟ್ ನಿರ್ದೇಶನದ ಮೇರೆಗೆ ಸಿಐಡಿಯ ಡಿವೈಎಸ್ಪಿ ಕನಕಲಕ್ಷ್ಮಿ ಮುಂದೆ ಜೀವಾ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆ ನಂತರ ಮನೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ 11 ಪುಟಗಳ ಮರಣ ಉಯಿಲು ಬರೆದಿದ್ದಾರೆ. ಸಹೋದರಿಗೆ ಪ್ರತ್ಯೇಕವಾಗಿ 2 ಪುಟಗಳ ಪತ್ರ ಬರೆದಿದ್ದಾರೆ. ಅದರಲ್ಲಿ ತನಿಖಾಧಿಕಾರಿ ತಮಗೆ ಕಿರುಕುಳ ನೀಡಿದ್ದಾರೆ. ಅದರಿಂದ ತೀವ್ರ ಅವಮಾನವಾಗಿದ್ದು, ಈ ನೋವು ತಾಳಲಾರದೆ ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದಾಗಿ ವಿವರಿಸಿದ್ದಾರೆ.
ಮರಣ ಉಯಿಲು ಆಧರಿಸಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಕನಕಲಕ್ಷ್ಮಿ ಅವರು ಹಿರಿಯ ಪೊಲೀಸ್ ಅಧಿಕಾರಿಯಾಗಿದ್ದು, ತನ್ನ ಅಧೀನ ಅಧಿಕಾರಿಗಳ ಮೇಲೆ ಪ್ರಭಾವ ಬೀರಬಹುದು. ರಾಜ್ಯ ಪೊಲೀಸರು ತನಿಖೆ ನಡೆಸಿದರೆ ಕನಕಲಕ್ಷ್ಮಿ ತಮ್ಮ ರಕ್ಷಣೆಗೆ ಹಾಗೂ ತನಿಖೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬಹುದು. ಆದ್ದರಿಂದ, ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಆದೇಶಿಸಬೇಕು ಎಂದು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.