Siddique Kappan
Siddique Kappan 
ಸುದ್ದಿಗಳು

ಪಿಎಂಎಲ್ಎ ಪ್ರಕರಣದಲ್ಲಿ ಕೇರಳ ಮೂಲದ ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಅಲಾಹಾಬಾದ್ ಹೈಕೋರ್ಟ್ ಜಾಮೀನು

Bar & Bench

ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ (ಪಿಎಂಎಲ್‌ಎ) ಜಾರಿ ನಿರ್ದೇಶನಾಲಯ (ಇ ಡಿ) ಹೂಡಿದ್ದ ಪ್ರಕರಣದಲ್ಲಿ ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಅಲಾಹಾಬಾದ್ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.

ನ್ಯಾಯಮೂರ್ತಿ ದಿನೇಶ್ ಕುಮಾರ್ ಸಿಂಗ್ ಅವರು ಜಾಮೀನು ಆದೇಶ ಪ್ರಕಟಿಸಿದ್ದಾರೆ. ಕಪ್ಪನ್‌ ಪರವಾಗಿ ವಕೀಲರಾದ ಇಶಾನ್ ಬಾಘೆಲ್ ಮತ್ತು ಮೊಹಮ್ಮದ್ ಖಾಲಿದ್ ವಾದ ಮಂಡಿಸಿದ್ದರು.

ಹಾಥ್‌ರಸ್‌ನಲ್ಲಿ ನಡೆದಿದ್ದ 19 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವರದಿಗೆಂದು ತೆರಳಿದ್ದ ಮಲಯಾಳಂ ಸುದ್ದಿ ಜಾಲತಾಣ ʼಅರಿಮುಖಂʼ ವರದಿಗಾರ ಮತ್ತು ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟದ (ಕೆಯುಡಬ್ಲ್ಯುಜೆ) ದೆಹಲಿ ಘಟಕದ ಕಾರ್ಯದರ್ಶಿ ಕಪ್ಪನ್ ಹಾಗೂ ಇತರ ಮೂವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿ (ಯುಎಪಿಎ) ಹಾಗೂ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ (ಪಿಎಂಎಲ್‌ಎ) ಪ್ರಕರಣ ದಾಖಲಿಸಿದ್ದರು.

ಕಪ್ಪನ್ ಹಾಗೂ ಇತರ ಆರು ಆರೋಪಿಗಳ ವಿರುದ್ಧ ಕಾಯಿದೆಯ ಸೆಕ್ಷನ್ 3 (ಹಣ ವರ್ಗಾವಣೆ ಅಪರಾಧ) ಮತ್ತು ಸೆಕ್ಷನ್‌ 4ರಡಿ (ಹಣ ವರ್ಗಾವಣೆ ಶಿಕ್ಷೆ) ಜಿಲ್ಲಾ ನ್ಯಾಯಾಧೀಶ ಸಂಜಯ್ ಶಂಕರ್ ಪಾಂಡೆ ಅವರು ಡಿಸೆಂಬರ್ 8ರಂದು ಆರೋಪ ನಿಗದಿಪಡಿಸಿದ್ದರು. ಅಕ್ಟೋಬರ್ 31ರಂದು, ಲಖನೌದ ಸೆಷನ್ಸ್ ನ್ಯಾಯಾಲಯ ಪಿಎಂಎಲ್‌ಎ ಪ್ರಕರಣದಲ್ಲಿ ಕಪ್ಪನ್‌ ಅವರಿಗೆ ಜಾಮೀನು ನಿರಾಕರಿಸಿತ್ತು.

ಇನ್ನು ಯುಎಪಿಎ ಅಡಿ ಉತ್ತರ ಪ್ರದೇಶ ಪೊಲೀಸರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 2022 ರಲ್ಲಿ ಕಪ್ಪನ್ ಅವರಿಗೆ ಜಾಮೀನು ನೀಡಿತ್ತು.