Senior Advocate Kiran S Javali
Senior Advocate Kiran S Javali 
ಸುದ್ದಿಗಳು

ಜಯಲಲಿತಾ ವಸ್ತುಗಳ ವಿಲೇವಾರಿ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಕಿರಣ್ ಜವಳಿ ನೇಮಕ

Bar & Bench

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಂತರ ರೂಪಾಯಿ ಬೆಲೆಬಾಳುವ ವಸ್ತುಗಳ ವಿಲೇವಾರಿಗೆ ಕಾನೂನು ಪ್ರಕ್ರಿಯೆ ನಡೆಸಲು ರಾಜ್ಯ ಸರ್ಕಾರಿ ಅಭಿಯೋಜಕರಾದ ಕಿರಣ್ ಎಸ್. ಜವಳಿ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರಾಗಿ ರಾಜ್ಯ ಸರ್ಕಾರ ನೇಮಿಸಿದೆ.

ಜಯಲಲಿತಾ ವಿರುದ್ಧದ ಪ್ರಕರಣವನ್ನು ವಿಚಾರಣೆ ನಡೆಸಿದ್ದ ಬೆಂಗಳೂರಿನ ವಿಶೇಷ ನ್ಯಾಯಾಲಯ (ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ) ಬರೆದ ಪತ್ರ ಆಧರಿಸಿ ರಾಜ್ಯ ಕಾನೂನು ಇಲಾಖೆ ಅಧೀನ ಕಾರ್ಯದರ್ಶಿ ಆದಿನಾರಾಯಣ ಅವರು ಮಾರ್ಚ್‌ 27ರಂದು ಆದೇಶ ಹೊರಡಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ನಗರದ ವಿಶೇಷ ನ್ಯಾಯಾಲಯವು ಜಯಲಲಿತಾಗೆ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 100 ಕೋಟಿ ರೂಪಾಯಿ ದಂಡ ವಿಧಿಸಿ 2014ರ ಸೆಪ್ಟೆಂಬರ್‌ 27ರಂದು ಆದೇಶಿಸಿತ್ತು. ಜಪ್ತಿ ಮಾಡಲಾದ ಜಯಲಲಿತಾ ಅವರ ಬೆಲೆಬಾಳುವ ವಸ್ತುಗಳನ್ನು ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು.

ಆರ್‌ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು 2022ರ ಆಗಸ್ಟ್‌ 12ರಂದು ನಗರದ ಸಿಟಿ ಸಿವಿಲ್ ನ್ಯಾಯಾಲಯದ ಮಾಹಿತಿ ಹಕ್ಕು ಅಧಿಕಾರಿಗೆ ಮಾಹಿತಿ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿ, ಜಪ್ತಿ ಮಾಡಿರುವ ಜಯಲಲಿತಾ ಅವರಿಗೆ ಸೇರಿದ ವಸ್ತುಗಳ ವಿಲೇವಾರಿ ಬಗ್ಗೆ ಮಾಹಿತಿ ಕೋರಿದ್ದರು. ಆದರೆ, ಮಾಹಿತಿ ನೀಡಲು ನಿರಾಕರಿಸಿದ ಮಾಹಿತಿ ಹಕ್ಕು ಅಧಿಕಾರಿ, 2022ರ ಸೆಪ್ಟೆಂಬರ್‌ 7ರಂದು ಆ ಅರ್ಜಿ ತಿರಸ್ಕರಿಸಿದ್ದರು. ಇದರಿಂದ ಪ್ರಥಮ ಮೇಲ್ಮನವಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಮೇಲ್ಮನವಿ ಪ್ರಾಧಿಕಾರ ಹೊರಡಿಸಿದ ಆದೇಶ ಪರಿಗಣಿಸಿ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಲು ತಿಳಿಸಿ ಸರ್ಕಾರಕ್ಕೆ ವಿಶೇಷ ನ್ಯಾಯಾಲಯ ಪತ್ರ ಬರೆದಿತ್ತು.

ಏನೆಲ್ಲಾ ವಸ್ತುಗಳಿವೆ?: 7,040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರ ಖಚಿತ ಆಭರಣಗಳು, 700 ಕೆ ಜಿ ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜೆರೇಟರ್, 10 ಟಿ ವಿ ಸೆಟ್, 8 ವಿಸಿಆರ್, 1 ವಿಡಿಯೊ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೊ ಡೆಕ್, 24 ಟೂ-ಇನ್ ಒನ್ ಟೇಪ್‌ ರೇಕಾರ್ಡರ್, 1,040 ವಿಡಿಯೊ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂಪಾಯಿ ನಗದು ಸೇರಿದಂತೆ ಹಲವು ವಸ್ತುಗಳು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು. ಅವುಗಳನ್ನು ವಿಲೇವಾರಿ ಮಾಡಬೇಕಿದೆ.