Kiren Rijiju, Mediation
Kiren Rijiju, Mediation 
ಸುದ್ದಿಗಳು

ಕೇಂದ್ರ ಸರ್ಕಾರವು ಮಧ್ಯಸ್ಥಿಕೆಗೆ ನೂತನ ಕಾನೂನು ಜಾರಿಗೊಳಿಸಲಿದೆ: ಕಾನೂನು ಸಚಿವ ಕಿರೆಣ್‌ ರಿಜಿಜು

Bar & Bench

ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ನೂತನ ಮಧ್ಯಸ್ಥಿಕೆ ಮಸೂದೆ ಮಂಡಿಸಲು ಕೇಂದ್ರ ಸರ್ಕಾರವು ಸಿದ್ಧತೆ ಮಾಡಿಕೊಂಡಿದೆ ಎಂದು ಕೇಂದ್ರ ಕಾನೂನು ಸಚಿವ ಕಿರೆಣ್‌ ರಿಜಿಜು ಶನಿವಾರ ಹೇಳಿದ್ದಾರೆ. ಭಾರತವನ್ನು ಮಧ್ಯಸ್ಥಿಕೆ ಕೇಂದ್ರವನ್ನಾಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದೂ ರಿಜಿಜು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪ್ರಸ್ತಾವಿತ ನೂತನ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಶಿಲಾನ್ಯಾಸ ಸಮಾರಂಭದಲ್ಲಿ ರಿಜಿಜು ಮಾತನಾಡಿದರು.

“ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ನಾವು ಮಧ್ಯಸ್ಥಿಕೆ ಮಸೂದೆಯನ್ನು ಮಂಡಿಸಲಿದ್ದೇವೆ. ಈ ಸಂಬಂಧ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ” ಎಂದು ರಿಜಿಜು ಭಾಷಣದ ವೇಳೆ ತಿಳಿಸಿದರು. "ಭಾರತವನ್ನು ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರವನ್ನಾಗಿಸುವ ಉದ್ದೇಶ ಹೊಂದಿದ್ದೇವೆ" ಎಂದು ಅವರು ಹೇಳಿದರು.

ಇದೇ ವೇಳೆ, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು, ಕಾನೂನು ಕಾಲೇಜುಗಳು ಮತ್ತು ಕಾನೂನು ತಜ್ಞರ ಜೊತೆ ಕೆಲಸ ಮಾಡಲು ಕೇಂದ್ರ ಸರ್ಕಾರ ಉತ್ಸುಕವಾಗಿದೆ ಎಂದು ಅವರು ತಿಳಿಸಿದರು.

“ಭಾರತದ ನ್ಯಾಯಾಂಗ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶವನ್ನು ನಾವು ಹೊಂದಿದ್ದು, ನ್ಯಾಯಾಂಗವನ್ನು ಬಲಿಷ್ಠವಾಗಿಸಲು ಕ್ರಮ ಕೈಗೊಳ್ಳಲಾಗುವುದು” ಎಂದರು. ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಮೂರ್ತಿಗಳೊಂದಿಗೆ ಉತ್ತಮ ಸಂಬಂಧ ಹೊಂದುವ ಇರಾದೆಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದರು.