Karnataka HC, B S Yediyurappa, Minister S T Somashekhar and B Y Vijayendra
Karnataka HC, B S Yediyurappa, Minister S T Somashekhar and B Y Vijayendra 
ಸುದ್ದಿಗಳು

ಭ್ರಷ್ಟಾಚಾರ ಪ್ರಕರಣ: ಬಿಎಸ್‌ವೈ, ಕುಟುಂಬ ಸದಸ್ಯರು, ಸಚಿವ ಸೋಮಶೇಖರ್‌ ವಿರುದ್ಧ ತನಿಖೆಗೆ ವಿಶೇಷ ನ್ಯಾಯಾಲಯದ ಆದೇಶ

Bar & Bench

ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿ ಎಸ್‌ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್‌ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳನ್ನು ನಗದು ಮತ್ತು ಶೆಲ್‌ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೋಲೀಸರಿಗೆ ಆದೇಶ ಮಾಡಿದೆ.

ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಅವರು 2021ರ ಜೂನ್‌ನಲ್ಲಿ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ ಜಯಂತ್‌ಕುಮಾರ್‌ ಅವರು ತನಿಖೆ ನಡೆಸಿ, ನವೆಂಬರ್‌ 2ರ ಒಳಗೆ ಅಂತಿಮ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದ್ದಾರೆ.

ಆರೋಪಿಗಳ ವಿರುದ್ದ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ಸೆಕ್ಷನ್‌ಗಳಾದ 7, 8, 9, 10 ಮತ್ತು 13, ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಾದ 383, 384, 415, 418, 420, 34 ಮತ್ತು 120ಬಿ ಅಡಿಯ ಅಪರಾಧಗಳಿಗೆ ಸಂಬಂಧಿಸಿದಂತೆ ಸಿಆರ್‌ಪಿಸಿ ಸೆಕ್ಷನ್‌ 156(3)ರ ಅಡಿ ತನಿಖೆ ನಡೆಸಲು ಬೆಂಗಳೂರಿನ ಲೋಕಾಯುಕ್ತ ಪೊಲೀಸ್‌ ಇನ್‌ಸ್ಪೆಕ್ಟರ್‌ಗೆ ನ್ಯಾಯಾಲಯವು ಆದೇಶಿಸಿದೆ. ಅಲ್ಲದೇ, ವಿಚಾರಣೆಯನ್ನು ನವೆಂಬರ್‌ 2ಕ್ಕೆ ಮುಂದೂಡಿದೆ.

ಈಚೆಗೆ ಕರ್ನಾಟಕ ಹೈಕೋರ್ಟ್‌, ವಿಶೇಷ ತನಿಖಾ ದಳದಿಂದ (ಎಸ್‌ಐಟಿ) ತನಿಖೆಗೆ ಆಗ್ರಹಿಸಿ ಅಬ್ರಹಾಂ ಸಲ್ಲಿಸಿದ್ದ ಮನವಿಯನ್ನು ಭಾಗಶಃ ಎತ್ತಿ ಹಿಡಿದಿತ್ತು. ರಾಜ್ಯಪಾಲರಿಂದ ಅಗತ್ಯ ಪೂರ್ವನುಮತಿ ಪಡೆದಿಲ್ಲ ಎಂದು ಯಡಿಯೂರಪ್ಪ ಮತ್ತು ಇತರರ ವಿರುದ್ದದ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿತ್ತು. ಈ ಆದೇಶವನ್ನು ಹೈಕೋರ್ಟ್ ಬದಿಗೆ ಸರಿಸಿತ್ತು. ಅಲ್ಲದೇ, ಯಡಿಯೂರಪ್ಪ ಮತ್ತು ಇತರರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರನ್ನು ಮರುಪರಿಗಣಿಸಲು ಹೈಕೋರ್ಟ್‌ ಆದೇಶ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ತನಿಖೆಗೆ ಆದೇಶಿಸಿದೆ.

ಯಡಿಯೂರಪ್ಪ, ಪುತ್ರ ಬಿ ವೈ ವಿಜಯೇಂದ್ರ, ಶಶಿಧರ ಮರಡಿ, ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರ ಅಳಿಯ ಸಂಜಯ್‌ ಶ್ರೀ, ಚಂದ್ರಕಾಂತ್‌ ರಾಮಲಿಂಗಂ, ಅಂದಿನ ಬಿಡಿಎ ಅಧ್ಯಕ್ಷ ಹಾಗೂ ಹಾಲಿ ಸಹಕಾರ ಸಚಿವ ಎಸ್‌ ಟಿ ಸೋಮಶೇಖರ್‌, ಐಎಎಸ್‌ ಅಧಿಕಾರಿ ಡಾ. ಜಿ ಸಿ ಪ್ರಕಾಶ್‌, ಕೆ ರವಿ, ಯಡಿಯೂರಪ್ಪ ಅವರ ಅಳಿಯ ವಿರೂಪಾಕ್ಷಪ್ಪ‌ ಯಮಕನಮರಡಿ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ.

ಯಡಿಯೂರಪ್ಪ ಮತ್ತು ಸೋಮಶೇಖರ್‌ ವಿರುದ್ಧದ ತನಿಖೆಗೆ ಅನುಮತಿ ಕೋರಿ ಅಬ್ರಹಾಂ ಅವರು ರಾಜ್ಯಪಾಲರು ಮತ್ತು ವಿಧಾನಸಭೆ ಸ್ಪೀಕರ್‌ಗೆ ಮನವಿ ಸಲ್ಲಿಸಿದ್ದರು. 2021ರ ಜೂನ್‌ 24ರಂದು ರಾಜ್ಯಪಾಲರು ಅನುಮತಿ ನಿರಾಕರಿಸಿದ್ದರು. ಇದನ್ನು ಆಧರಿಸಿ, 2021ರ ಜುಲೈ 8ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಖಾಸಗಿ ದೂರನ್ನು ವಜಾ ಮಾಡಿದ್ದನ್ನು ನೆನಯಬಹುದಾಗಿದೆ.