Opposition Leader Siddaramaiah
Opposition Leader Siddaramaiah Twitter
ಸುದ್ದಿಗಳು

ಕೋವಿಡ್‌ ನಿಯಮಾವಳಿ ಉಲ್ಲಂಘನೆ: ಸಿದ್ದರಾಮಯ್ಯಗೆ ಸಮನ್ಸ್‌ ಜಾರಿ ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

Bar & Bench

ಮೇಕೆದಾಟು ಯೋಜನೆಗಾಗಿ ರಾಮನಗರದಿಂದ ಪಾದಯಾತ್ರೆ ಕೈಗೊಳ್ಳುವ ಮೂಲಕ ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ‌ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿದೆ.

ರಾಮನಗರದ ಗ್ರಾಮೀಣ ಠಾಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಸೇರಿದಂತೆ 29 ಮಂದಿಯ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣದ ವಿಚಾರಣೆಯನ್ನು ಹಾಲಿ, ಮಾಜಿ ಶಾಸಕರು ಹಾಗೂ ಸಂಸದರಿಗೆ ಸಂಬಂಧಿಸಿದ ಮ್ಯಾಜಿಸ್ಟ್ರೇಟ್‌ ವಿಚಾರಣೆ ನಡೆಸಲು ಸ್ಥಾಪಿಸಲಾಗಿರುವ 42ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶೆ ಪ್ರೀತ್‌ ಜೆ ಅವರು ನಡೆಸಿದರು.

ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದು, ಮೇ 24ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಲಾಗಿದೆ.

ಸಾಂಕ್ರಾಮಿಕ ರೋಗಗಳ ಕಾಯಿದೆಯ 5(3)ಎ, 143, 149, 290, 336, 141 ಅಡಿ ಪ್ರಕರಣ ದಾಖಲಾಗಿದೆ. ಡಿ ಕೆ ಶಿವಕುಮಾರ್‌, ಸಿದ್ದರಾಮಯ್ಯ ಅವರಲ್ಲದೇ ಸಂಸದ ಡಿ ಕೆ ಸುರೇಶ್‌, ಮಾಜಿ ಸಂಸದ ಧ್ರುವನಾರಾಯಣ್, ಮಾಜಿ ಸಚಿವರಾದ ಟಿ ಬಿ ಜಯಚಂದ್ರ, ಅಭಯ್‌ ಚಂದ್ರ ಜೈನ್‌, ಶರಣಪ್ರಕಾಶ್‌ ಪಾಟೀಲ್‌, ಕಿಮ್ಮನೆ ರತ್ನಾಕರ್‌, ಕೃಷ್ಣ ಬೈರೇಗೌಡ, ಪ್ರಿಯಾಂಕ್‌ ಖರ್ಗೆ, ಪುಟ್ಟರಂಗ ಶೆಟ್ಟಿ, ಎಚ್‌ ಆಂಜನೇಯ, ಶಾಸಕಿ ಅಂಜಲಿ ನಿಂಬಾಳ್ಕರ್‌, ಪರಿಷತ್‌ ಸದಸ್ಯರಾದ ದಿನೇಶ್‌ ಗೂಳೀಗೌಡ, ಸಲೀಂ ಅಹ್ಮದ್‌, ರವಿ ಎಸ್‌, ಮುಖಂಡರಾದ ಕೆ ವೈ ನಂಜೇಗೌಡ, ಬಿ ಆರ್‌ ಯಾವಗಲ್‌, ಕೆ ರಾಜು, ಡಾ. ರವೀಂದ್ರ, ಕುಸುಮಾ, ಮೊಹಮ್ಮದ್‌ ನಲಪಾಡ್‌,‌ ಇಕ್ಬಾಲ್ ಹುಸೇನ್‌, ಕೆ ಸಿ ವೀರೇಗೌಡ, ಬಿ ಪಿ ಮಂಜೇಗೌಡ, ಪಾರ್ವತಮ್ಮ ಅವರನ್ನು ಆರೋಪಿಗಳನ್ನಾಗಿಸಲಾಗಿದೆ.