ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಾನು ನೀಡಿದ್ದ ಸಮನ್ಸ್ಗೆ ಸ್ಪಂದಿಸದ ಆರೋಪದಡಿ ಹೂಡಲಾಗಿದ್ದ ಎರಡು ಪ್ರಕರಣಗಳಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.
ರೌಸ್ ಅವೆನ್ಯೂ ನ್ಯಾಯಾಲಯದ ಅಡಿಷನಲ್ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪರಾಸ್ ದಲಾಲ್ ಅವರು ಈ ಆದೇಶ ಹೊರಡಿಸಿದ್ದು, ತೀರ್ಪಿನ ವಿವರವಾದ ಪ್ರತಿ ಇನ್ನಷ್ಟೇ ಪ್ರಕಟವಾಗಬೇಕಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯ ಸೆಕ್ಷನ್ 50ರ ಅಡಿಯಲ್ಲಿ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ಗಳಿಗೆ ಪ್ರತಿಕ್ರಿಯಿಸಿಲ್ಲ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇ ಡಿ ಫೆಬ್ರವರಿ 2024ರಲ್ಲಿ ಕೇಜ್ರಿವಾಲ್ ವಿರುದ್ಧ ನ್ಯಾಯಾಲಯಕ್ಕೆ ದೂರು ಸಲ್ಲಿಸಿತ್ತು. ಹಗರಣದ ತನಿಖೆಗೆ ಸಂಬಂಧಿಸಿ ವಿವಿಧ ದಿನಾಂಕಗಳಲ್ಲಿ ಐದು ಸಮನ್ಸ್ ಜಾರಿಗೊಳಿಸಲಾಗಿದ್ದರೂ, ಕೇಜ್ರಿವಾಲ್ ಅವರು ಕೇಂದ್ರ ಸಂಸ್ಥೆಯ ಮುಂದೆ ಹಾಜರಾಗಿರಲಿಲ್ಲ.
2021–22ರ ದೆಹಲಿ ಅಬಕಾರಿ ನೀತಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿ, ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರ ದೂರಿನ ಮೇರೆಗೆ, ಸಿಬಿಐ ಜುಲೈ 20, 2022ರಂದು ಮೊಕದ್ದಮೆ ದಾಖಲಿಸಿತ್ತು. ಇದರ ಆಧಾರದ ಮೇಲೆ ಆಗಸ್ಟ್ 17, 2022ರಂದು ಸಿಬಿಐ ಎಫ್ಐಆರ್ ಹೂಡಿತ್ತು. ನಂತರ ಆಗಸ್ಟ್ 22, 2022ರಂದು ಜಾರಿ ನಿರ್ದೇಶನಾಲಯ ಹಣ ವರ್ಗಾವಣೆ ನೆಲೆಯಿಂದಲೂ ಪ್ರತ್ಯೇಕ ಪ್ರಕರಣ ದಾಖಲಿಸಿತು. ಈ ಪ್ರಕರಣದ ಪ್ರಮುಖ ಆರೋಪಿಯಾಗಿ ಕೇಜ್ರಿವಾಲ್ ಅವರನ್ನು ನಂತರ ಬಂಧಿಸಲಾಗಿದ್ದು, ಅಂತಿಮವಾಗಿ ಸುಪ್ರೀಂ ಕೋರ್ಟ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿತ್ತು.