ಅರವಿಂದ್ ಕೇಜ್ರಿವಾಲ್ ಮತ್ತು ತಿಹಾರ್ ಜೈಲು 
ಸುದ್ದಿಗಳು

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ಗೆ ಏಪ್ರಿಲ್ 15ರ ತನಕ ನ್ಯಾಯಾಂಗ ಬಂಧನ ವಿಧಿಸಿದ ದೆಹಲಿ ನ್ಯಾಯಾಲಯ

Bar & Bench

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಅಧಿನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ದೆಹಲಿ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.

ರೌಸ್ ಅವೆನ್ಯೂ ನ್ಯಾಯಾಲಯ ಸಂಕೀರ್ಣದಲ್ಲಿರುವ ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ರೂಪುಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಕಾವೇರಿ ಬವೇಜಾ ಈ ನಿರ್ದೇಶನ ನೀಡಿದ್ದಾರೆ.

ಜೈಲಿನಲ್ಲಿ ಭಗವದ್ಗೀತೆ, ರಾಮಾಯಣ ಹಾಗೂ ನೀರಜಾ ಚೌಧರಿ ಅವರ ಕೃತಿ ಹೌ ಪ್ರೈಮ್‌ ಮಿನಿಸ್ಟರ್ಸ್‌ ಡಿಸೈಡ್‌ ಎಂಬ ಮೂರು ಕೃತಿಗಳನ್ನು ಓದಲು ಕೇಜ್ರಿವಾಲ್ ಅವರಿಗೆ ಅವಕಾಶ ನೀಡುವಂತೆ ಅವರ ಪರ ವಕೀಲರು ಅರ್ಜಿ ಸಲ್ಲಿಸಿದರು. ಜೊತೆಗೆ ವಿಶೇಷ ಆಹಾರ ಸೇವನೆಗೆ ಮತ್ತು ಧಾರ್ಮಿಕ ಲಾಕೆಟ್ ಧರಿಸಲು ಅನುಮತಿ ಕೋರಿದರು.

ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಬಂಧಿಸಲಾಗಿತ್ತು. ಆ ಮೂಲಕ ದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಹಾಲಿ ಮುಖ್ಯಮಂತ್ರಿಯೊಬ್ಬರನ್ನು ಜೈಲಿಗೆ ಕಳುಹಿಸಲಾಗಿತ್ತು. ಬಿಆರ್‌ಎಸ್‌ ಪಕ್ಷದ ನಾಯಕಿ ಕೆ ಕವಿತಾ, ಎಎಪಿ ನಾಯಕರಾದ ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಕೂಡ ಹಗರಣದಲ್ಲಿ ಆರೋಪಿಗಳಾಗಿದ್ದಾರೆ.

ಇ ಡಿ ಕಸ್ಟಡಿ ಅವಧಿ ಇಂದು ಕೊನೆಗೊಳ್ಳಲಿದ್ದ ಹಿನ್ನೆಲೆಯಲ್ಲಿ ಕೇಜ್ರಿವಾಲ್‌ ಅವರನ್ನು ರೌಸ್‌ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಜಾರಿ ನಿರ್ದೇಶನಾಲಯದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಸಿ ಎಂ ಕೇಜ್ರಿವಾಲ್‌ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಹೇಳಿದರು.

ಆದರೆ "ನ್ಯಾಯಾಂಗ ಬಂಧನದ ಅರ್ಜಿಗೆ ಸಂಬಂಧಿಸಿದಂತೆ ಈ ವಾದ ಎಷ್ಟು ಪ್ರಸ್ತುತ" ಎಂದು ನ್ಯಾಯಾಲಯ ಪ್ರಶ್ನಿಸಿತು.

ನಂತರದ ಹಂತದಲ್ಲಿ ಕೇಜ್ರಿವಾಲ್‌ ಅವರನ್ನು ಇ ಡಿ ವಶಕ್ಕೆ ನೀಡುವಂತೆ ಕೇಳುತ್ತಿರುವುದಾಗಿ ರಾಜು ಪ್ರತಿಕ್ರಿಯಿಸಿದರು.

ತಮ್ಮ ಬಂಧನ ಹಾಗೂ ವಿಚಾರಣಾ ನ್ಯಾಯಲಯ ತಮ್ಮನ್ನು ಇ ಡಿ ವಶಕ್ಕೆ ಒಪ್ಪಿಸಿದ್ದ ಆದೇಶ ಪ್ರಶ್ನಿಸಿ ಕೇಜ್ರಿವಾಲ್‌ ಅವರು ಸಲ್ಲಿಸಿದ್ದ ಅರ್ಜಿಗೆ ದೆಹಲಿ ಹೈಕೋರ್ಟ್‌ ಮಧ್ಯಂತರ ಪರಿಹಾರ ನೀಡಲು ಕಳೆದ ಬುಧವಾರ ನಿರಾಕರಿಸಿತ್ತು. ಅಲ್ಲದೆ ಏಪ್ರಿಲ್ 2ರೊಳಗೆ ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಇ ಡಿಗೆ ಸೂಚಿಸಿತ್ತು.