ಮಹಿಳಾ ಕುಸ್ತಿಪಟುಗಳು ತಮ್ಮ ವಿರುದ್ಧ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ಬಿಜೆಪಿ ನಾಯಕ ಬ್ರಿಜ್ ಭೂಷಣ್ ಶರಣ್ ಸಿಂಗ್ ಸಲ್ಲಿಸಿದ ಅರ್ಜಿಗೆ ದೆಹಲಿ ಹೈಕೋರ್ಟ್ ಗುರುವಾರ ಆಕ್ಷೇಪ ವ್ಯಕ್ತಪಡಿಸಿದೆ.
ಆಗಸ್ಟ್ 2024 ರಲ್ಲಿ ಅರ್ಜಿ ಸಲ್ಲಿಸಲಾಗಿದ್ದು ಇದುವರೆಗೆ ಯಾವುದೇ ವಾದ ಮಂಡನೆಯಾಗಿಲ್ಲ ಎಂದು ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ತಿಳಿಸಿದರು.
ಯಾಕೆ ವಾದ ಮಂಡನೆ ಮಾಡಿಲ್ಲ? ನೀವೇ ಅರ್ಜಿ ಸಲ್ಲಿಸಿದ್ದರೂ ಇದುವರೆಗೆ ಒಂದು ಬಾರಿಯೂ ವಾದ ಮಂಡಿಸಿಲ್ಲ” ಎಂದು ಬ್ರಿಜ್ ಭೂಷಣ್ ಪರ ವಕೀಲರನ್ನು ಉದ್ದೇಶಿಸಿ ಹೇಳಿತು. ಹಿರಿಯ ವಕೀಲರು ಲಭ್ಯವಿಲ್ಲದ ಕಾರಣ ಪ್ರಕರಣ ಮುಂದೂಡುವಂತೆ ಸಿಂಗ್ ಪರ ವಕೀಲರು ಮನವಿ ಮಾಡಿದ ಹಿನ್ನೆಲೆಯಲ್ಲಿ ಪೀಠ ಈ ವಿಚಾರ ಪ್ರಸ್ತಾಪಿಸಿತು.
ಪ್ರಕರಣವನ್ನು ಏಪ್ರಿಲ್ 21ಕ್ಕೆ ಮುಂದೂಡಿದ ಪೀಠ ಇದೇ ವೇಳೆ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಯಾವುದೇ ತಡೆ ಇಲ್ಲ ಎಂದು ಅದು ಸ್ಪಷ್ಟಪಡಿಸಿತು.
ಮಾಜಿ ಸಂಸದ ಮತ್ತು ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ಭೂಷಣ್ ಸಿಂಗ್ ವಿರುದ್ಧ ಒಟ್ಟು ಆರು ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಕುಸ್ತಿಪಟುಗಳು ಸುಪ್ರೀಂ ಕೋರ್ಟ್ ಮೊರೆ ಹೋದ ನಂತರ ದೆಹಲಿ ಪೊಲೀಸರು ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಬಳಿಕ ಐಪಿಸಿ ಸೆಕ್ಷನ್ 354 (ಆತ್ಮಹತ್ಯೆ), 354 ಎ (ಲೈಂಗಿಕವಾಗಿ ಬಣ್ಣ ಬಳಿದ ಟೀಕೆಗಳು), 354 ಡಿ (ಹಿಂಬಾಲಿಸುವುದು) ಮತ್ತು 506(1) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿತ್ತು.
ಎಫ್ಐಆರ್ ಮಾತ್ರವಲ್ಲದೆ ತಮ್ಮ ವಿರುದ್ಧ ಆರೋಪ ನಿಗದಿಪಡಿಸಿದ ವಿಚಾರಣಾ ನ್ಯಾಯಾಲಯದ ಆದೇಶ ಸೇರಿದಂತೆ ಸಂಪೂರ್ಣ ವಿಚಾರಣೆ ರದ್ದುಗೊಳಿಸಬೇಕು ಎಂದು ಸಿಂಗ್ ಅವರು ತಮ್ಮ ಅರ್ಜಿಯಲ್ಲಿ ಕೋರಿದ್ದರು.
ಪ್ರಕರಣವನ್ನು ಸಂಕ್ಷಿಪ್ತವಾಗಿ ಆಲಿಸಿದ ಹೈಕೋರ್ಟ್ ದೂರುದಾರ ಕುಸ್ತಿಪಟುಗಳು ಸಲ್ಲಿಸಿದ ಉತ್ತರವನ್ನು ದಾಖಲಿಸಲಾಗುವುದು ಎಂದು ಹೇಳಿದೆ. ಪ್ರಕರಣದ ಸಂಪೂರ್ಣ ಸ್ಥಿತಿಯನ್ನು ಪರಿಶೀಲಿಸಲು ಕೆಳನ್ಯಾಯಾಲಯದ ದಾಖಲೆಗಳನ್ನು ಕೂಡ ಅದು ಕೋರಿದೆ.