Ex-BJP MLC Veeraiah 
ಸುದ್ದಿಗಳು

ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಹಗರಣ: ಬಿಜೆಪಿ ಮುಖಂಡ ವೀರಯ್ಯ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ನಿಯಮಿತದ ನಿಯಮಾವಳಿಗಳಲ್ಲಿ ತುಂಡು ಗುತ್ತಿಗೆಗೆ ಅನುಮತಿ ಇಲ್ಲದೆ ಹೋದರೂ ₹2 ಕೋಟಿ ಮೌಲ್ಯದ ಕೆಲಸಗಳನ್ನು ಟೆಂಡರ್‌ ಕರೆಯದೇ ಗುತ್ತಿಗೆ ನೀಡಬಹುದು ಎನ್ನುವ ರೀತಿಯಲ್ಲಿ ನಿಯಮಿತದ ದಾಖಲೆಗಳನ್ನು ತಿರುಚಲಾಗಿದೆ ಎಂಬ ಆರೋಪ ಮಾಡಲಾಗಿದೆ.

Bar & Bench

ಕರ್ನಾಟಕ ಸರ್ಕಾರದ ಉದ್ದಿಮೆಯಾದ ಡಿ ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿ (ಡಿಡಿಯುಟಿಟಿಎಲ್‌) ನಡೆದಿದೆ ಎನ್ನಲಾದ ₹47.50 ಕೋಟಿ ಅಕ್ರಮ ಆರೋಪ ಸಂಬಂಧ ನಿಗಮದ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಡಿ ಎಸ್‌ ವೀರಯ್ಯ ವಿರುದ್ಧದ ತನಿಖೆ ಮತ್ತು ಆರೋಪ ಪಟ್ಟಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ತಡೆಯಾಜ್ಞೆ ನೀಡಿದೆ.

ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಡಿ ಎಸ್‌ ವೀರಯ್ಯ ಅವರು ಪ್ರಕರಣ ರದ್ದತಿ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರು “ಡಿಡಿಯುಟಿಟಿಎಲ್‌ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಶಂಕರಪ್ಪ ಮತ್ತು ಮಾಜಿ ಅಧ್ಯಕ್ಷ ವೀರಯ್ಯ ಪಿತೂರಿ ನಡೆಸಿ ಕಂಪನಿಯ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದು ಆರೋಪವಾಗಿದೆ. ಈ ಪ್ರಕರಣದಲ್ಲಿ ಪ್ರಾಥಮಿಕ ತನಿಖೆ ನಡೆಸಿಲ್ಲ ಮತ್ತು ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್‌ 17ಎ ಅಡಿ ಅನುಮತಿ ಪಡೆದಿಲ್ಲ. ಪ್ರಾಥಮಿಕ ತನಿಖೆ ನಡೆಸದೆಯೂ ಆರೋಪ ಪಟ್ಟಿಯಲ್ಲಿ ವೀರಯ್ಯ ಅವರನ್ನು ಆರೋಪಿಯನ್ನಾಗಿಸಲಾಗಿದೆ. 2023ರ ಸೆಪ್ಟೆಂಬರ್‌ನಲ್ಲಿ ಅನಾಮಿಕರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಇದಾದ ಬಳಿಕ 9 ತಿಂಗಳು ತನಿಖೆ ನಡೆಸಲಾಗಿದೆ. ಆನಂತರ ಪಿಸಿ ಕಾಯಿದೆ ಸೆಕ್ಷನ್‌ 17ಎ ಅಡಿ ಪೂರ್ವಾನುಮತಿ ಕೋರಿದ್ದು, ಮೊದಲ ಆರೋಪಿ ಶಂಕರಪ್ಪ ವಿರುದ್ಧ ಪೂರ್ವಾನುಮತಿ ದೊರೆತಿದೆ. ಆದರೆ, ವೀರಯ್ಯ ವಿಚಾರದಲ್ಲಿ ಯಾವುದೇ ಪ್ರಕ್ರಿಯೆ ಪಾಲಿಸಿಲ್ಲ” ಎಂದರು.

ವಾದ ಆಲಿಸಿದ ಪೀಠವು “ಅರ್ಜಿದಾರ ವೀರಯ್ಯ ಅವರ ವಿರುದ್ಧದ ಹೆಚ್ಚುವರಿ ತನಿಖೆ ಮತ್ತು ಈಗಾಗಲೇ ಸಲ್ಲಿಕೆ ಮಾಡಲಾಗಿರುವ ಆರೋಪ ಪಟ್ಟಿಗೆ ತಡೆಯಾಜ್ಞೆ ನೀಡಲಾಗಿದೆ” ಎಂದು ಆದೇಶಿಸಿತು. ವಿಚಾರಣೆಯನ್ನು ಡಿಸೆಂಬರ್‌ 19ಕ್ಕೆ ಮುಂದೂಡಿತು.

ಜುಲೈ 25ರಂದು ವೀರಯ್ಯ ಅವರಿಗೆ ಬೆಂಗಳೂರಿನ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ  ಹಿನ್ನೆಲೆ: 2021-23ರ ಅವಧಿಯಲ್ಲಿ ಡಿಡಿಯುಟಿಟಿಎಲ್‌ ಹಣಕಾಸು ದುರ್ಬಳಕೆ ಹಗರಣ ನಡೆದಿದ್ದು, ಮಾಹಿತಿ ಮತ್ತು ಪ್ರಸಾರ ಇಲಾಖೆಯ ಉಪನಿರ್ದೇಶಕ ಎಸ್‌ ಶಂಕರಪ್ಪ ಅವರನ್ನು ಮೊದಲಿಗೆ ಬಂಧಿಸಲಾಗಿತ್ತು. ಶಂಕರಪ್ಪ ಅವರು ಆಗ ಡಿಡಿಯುಟಿಟಿಎಲ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

ಇದರ ಬೆನ್ನಿಗೇ ಜುಲೈ 12ರಂದು ಡಿಡಿಯುಟಿಟಿಎಲ್‌ನ ಮಾಜಿ ಅಧ್ಯಕ್ಷ ವೀರಯ್ಯ ಅವರನ್ನು ಸಿಐಡಿ ಬಂಧಿಸಿತ್ತು. ನಿಯಮಿತದ ನಿಯಮಾವಳಿಗಳಲ್ಲಿ ತುಂಡು ಗುತ್ತಿಗೆಗೆ ಅನುಮತಿ ಇಲ್ಲದೆ ಹೋದರೂ ₹2 ಕೋಟಿ ಮೌಲ್ಯದ ಕೆಲಸಗಳನ್ನು ಟೆಂಡರ್‌ ಕರೆಯದೇ ಗುತ್ತಿಗೆ ನೀಡಬಹುದು ಎನ್ನುವ ರೀತಿಯಲ್ಲಿ ನಿಯಮಿತದ ದಾಖಲೆಗಳನ್ನು ತಿರುಚಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೆ, ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರಿಗೂ ಪೂರ್ಣ ಹಣ ಬಿಡುಗಡೆ ಮಾಡಲಾಗಿತ್ತು ಎನ್ನಲಾಗಿತ್ತು.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯಿದೆ ಅಡಿ ಸರ್ಕಾರದ ಯಾವುದೇ ನಿಗಮವು ಐದು ಲಕ್ಷಕ್ಕೂ ಹೆಚ್ಚು ಮೌಲ್ಯದ ಗುತ್ತಿಗೆ ಕೆಲಸವನ್ನು ಟೆಂಡರ್‌ ಮೂಲಕ ನಡೆಸಬೇಕು ಎಂದಿದೆ. ಇದಕ್ಕೆ ವಿರುದ್ಧವಾಗಿ ಗುತ್ತಿಗೆ ನೀಡಲಾಗಿದೆ ಎಂಬುದು ಆರೋಪವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯು 765 ಕಡತಗಳನ್ನು ಜಪ್ತಿ ಮಾಡಿದ್ದು, 380 ಬ್ಯಾಂಕ್‌ ಖಾತೆಗಳಿಗೆ ಸಂಬಂಧಿಸಿದ 450 ಪುಟಗಳ ದತ್ತಾಂಶವನ್ನು ವಿಶ್ಲೇಷಿಸಿದೆ ಎನ್ನಲಾಗಿದೆ. ವೀರಯ್ಯ ಅವರು 2008ರಿಂದ 2018ರವರೆಗೆ ಬಿಜೆಪಿಯಿಂದ ವಿಧಾನ ಪರಿಷತ್‌ ಸದಸ್ಯರಾಗಿದ್ದರು.

ಡಿಡಿಯುಟಿಟಿಎಲ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ ಸಿ ಎನ್‌ ಶಿವಪ್ರಕಾಶ್‌ ಅವರು ಕಡತಗಳನ್ನು ಪರಿಶೀಲಿಸಿದಾಗ ಹಗರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ ಠಾಣೆಗೆ ದೂರು ನೀಡಿದ್ದರು. ಇದರ ಭಾಗವಾಗಿ ಐಪಿಸಿ ಸೆಕ್ಷನ್‌ಗಳಾದ 120ಬಿ (ಕ್ರಿಮಿನಲ್‌ ಪಿತೂರಿ), 409 (ಸಾರ್ವಜನಿಕ ಅಧಿಕಾರಿಯಿಂದ ನಂಬಿಕೆ ದ್ರೋಹ), 420 (ವಂಚನೆ), 465  ಮತ್ತು 468 (ವಂಚಿಸುವ ದೃಷ್ಟಿಯಿಂದ ನಕಲಿ ಕೃತ್ಯ) ಅಡಿ ಪ್ರಕರಣ ದಾಖಲಾಗಿತ್ತು. ಆನಂತರ ಪ್ರಕರಣವನ್ನು ಸರ್ಕಾರವು ಸಿಐಡಿಗೆ ವರ್ಗಾಯಿಸಿತ್ತು.