B Z Zameer Ahmed Khan
B Z Zameer Ahmed Khan Congress MLA
ಸುದ್ದಿಗಳು

ಆದಾಯ ಮೀರಿದ ಆಸ್ತಿ ಗಳಿಕೆ: ಎಫ್‌ಐಆರ್‌ ರದ್ದತಿ ಕೋರಿರುವ ಶಾಸಕ ಜಮೀರ್‌ ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Bar & Bench

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ತಮ್ಮ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವಂತೆ ಕೋರಿ ಕಾಂಗ್ರೆಸ್‌ ಶಾಸಕ ಬಿ ಝಡ್ ಜಮೀರ್ ಅಹಮದ್ ಖಾನ್ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿದೆ.

ಜಮೀರ್ ಅಹಮದ್ ಖಾನ್ ಸಲ್ಲಿಸಿರುವ ಮಧ್ಯಂತರ ಅರ್ಜಿ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿದೆ.

ಜಮೀರ್ ಪರ ವಕೀಲ ಇಸ್ಮಾಯಿಲ್ ಜಬೀವುಲ್ಲಾ ಅವರು ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಎಫ್‌ಐಆರ್ ದಾಖಲಿಸುವ ಮುನ್ನ ತನಿಖಾ ಸಂಸ್ಥೆ ಪ್ರಾಥಮಿಕ ವಿಚಾರಣೆ ನಡೆಸುವುದು ಕಡ್ಡಾಯ. ಈ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಎಸಿಬಿ ನೇರವಾಗಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದೆ ಎಂದರು.

ಅಲ್ಲದೆ, ಅರ್ಜಿದಾರರು ಆದಾಯ ಮೀರಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇಡಿ) ವರದಿ ಸಲ್ಲಿಸಿತ್ತು. ಆ ವರದಿ ಆಧರಿಸಿ ಎಸಿಬಿ ಎಫ್‌ಐಆರ್ ದಾಖಲಿಸಿದೆ. ಇದು ಕಾನೂನು ಬಾಹಿರ ಕ್ರಮ. ಆದ್ದರಿಂದ, ಎಸಿಬಿ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಕೋರಿದರು.

ಇದನ್ನು ಅಲ್ಲಗಳೆದ ಲೋಕಾಯುಕ್ತ ಪರ ವಕೀಲರು, ಅಕ್ರಮವಾಗಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವ ಮುನ್ನ ಪ್ರಾಥಮಿಕ ವಿಚಾರಣೆ ನಡೆಸುವ ಅಗತ್ಯವೇನೂ ಇಲ್ಲ. ಹೀಗಾಗಿ, ಎಸಿಬಿಯು ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕ್ರಮ ಕಾನೂನುಬದ್ಧವಾಗಿದ್ದು, ತಡೆ ನೀಡಬಾರದು ಎಂದು ಕೋರಿದರು.

ಪ್ರಕರಣದ ಹಿನ್ನೆಲೆ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ದಾಳಿ ನಡೆಸಿದ್ದ ಎಸಿಬಿಯು 2022ರ ಮೇನಲ್ಲಿ ಎಫ್‌ಐಆರ್ ದಾಖಲಿಸಿತ್ತು. ಶಾಸಕರು ಆದಾಯ ಮೀರಿ 87 ಕೋಟಿ ರೂಪಾಯಿ ಹೆಚ್ಚುವರಿ ಆಸ್ತಿ ಗಳಿಸಿರುವ ಅಂಶ ದಾಳಿ ವೇಳೆ ಪತ್ತೆಯಾಗಿದೆ ಎಂದು ಎಸಿಬಿ ತಿಳಿಸಿತ್ತು.

ಇದರಿಂದ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದ ಜಮೀರ್ ಅಹಮದ್‌ ಖಾನ್ ಅವರು ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿದ್ದರು. ಹಾಗೆಯೇ, ಅರ್ಜಿ ಇತ್ಯರ್ಥವಾಗುವರೆಗೆ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಮುಂದೆ ಎಸಿಬಿ ರಚನೆಯನ್ನು ಹೈಕೋರ್ಟ್ ರದ್ದುಪಡಿಸಿತ್ತು. ಇದರಿಂದಾಗಿ ಎಸಿಬಿ ದಾಖಲಿಸಿದ ಪ್ರಕರಣಗಳನ್ನು ಲೋಕಾಯುಕ್ತ ಸಂಸ್ಥೆ ಮುಂದುವರಿಸುತ್ತಿದೆ.