ಆನ್ಲೈನ್ ಆಫ್ಲೈನ್ ಬೆಟ್ಟಿಂಗ್ ಆರೋಪದ ಸಂಬಂಧ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಬಂಧಿತರಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಅಲಿಯಾಸ್ ಪಪ್ಪಿ ವಿರುದ್ಧ ಜಾರಿ ನಿರ್ದೇಶನಾಲಯವು ಇಂದು ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿ ಅಜಯ್ ಕುಮಾರ್ ವೈದ್ಯ ಅವರು ಶನಿವಾರ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಅವರ ಮುಂದೆ ಹಾಜರಾಗಿ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಪಪ್ಪಿ ಅವರ ವಿರುದ್ಧ ಮಾತ್ರ ಇ ಡಿಯು ಆರೋಪ ಪಟ್ಟಿ ಸಲ್ಲಿಸಿರುವುದಾಗಿ ಗೊತ್ತಾಗಿದೆ.
ಆಗಸ್ಟ್ 23ರಂದು ಬಂಧಿತರಾಗಿದ್ದ ವೀರೇಂದ್ರ ಪಪ್ಪಿ ಇಂದಿಗೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಚೆಗೆ ಕನಕಪುರದ ಹಾರೋಹಳ್ಳಿಯಲ್ಲಿ ಬಾಕಿ ಇರುವ ಎಫ್ಐಆರ್ ಪ್ರೆಡಿಕೇಟ್ ಅಪರಾಧಕ್ಕೆ (ಅಕ್ರಮಗಳಿಕೆಗೆ ಕಾರಣವಾದ ಮೂಲ ಅಪರಾಧ) ಪೂರಕವಾಗಿದೆ ಎಂದು ಹೇಳಿದ್ದ ಕರ್ನಾಟಕ ಹೈಕೋರ್ಟ್ ಪಪ್ಪಿ ಅವರ ಬಂಧನ ಕಾನೂನುಬಾಹಿರ ಎಂದು ಹೇಳಲು ನಿರಾಕರಿಸಿತ್ತು.