Election 
ಸುದ್ದಿಗಳು

ಗ್ರಾಮ ಪಂಚಾಯಿತಿ ಚುನಾವಣೆ: ಅಂತಿಮ ಮೀಸಲಾತಿ ಅಧಿಸೂಚನೆ ಕೋರಿದ ಆಯೋಗ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಸಕಾಲದಲ್ಲಿ ಚುನಾವಣೆ ನಡೆಸಲು ಆಯೋಗಕ್ಕೆ ಅನುಕೂಲವಾಗಲು ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಚುನಾವಣಾ ಆಯೋಗ ಕೋರಿದೆ.

Bar & Bench

ಮುಂದಿನ ವರ್ಷ ಜನವರಿಯಲ್ಲಿ ಅವಧಿ ಮುಗಿಯಲಿರುವ ರಾಜ್ಯದ 5,950 ಗ್ರಾಮ ಪಂಚಾಯಿತಿಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸಲು ಪೂರಕವಾಗಿ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ನೋಟಿಸ್ ಜಾರಿಗೊಳಿಸಿದೆ

ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ಪೀಠವು ಜನವರಿಯಲ್ಲಿ ಗ್ರಾಮ ಪಂಚಾಯಿತಿಗಳ ಅವಧಿ ಮುಗಿಯಲಿದೆ. ಅವುಗಳಿಗೆ ಸಕಾಲದಲ್ಲಿ ಚುನಾವಣೆ ನಡೆಯಬೇಕು. ಚುನಾವಣೆ ನಡೆಯಲು ಮೀಸಲಾತಿ ನಿಗದಿಯಾಗಬೇಕು. ಒಟ್ಟು ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸದ ಹೊರತು ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಚುನಾವಣಾ ಆಯೋಗಕ್ಕೆ ಸಾಧ್ಯವಿಲ್ಲ. ಇದೊಂದು ಗಂಭೀರ ವಿಷಯವಾಗಿದ್ದು, ಸರ್ಕಾರದಿಂದ ಅಗತ್ಯ ಮಾಹಿತಿಗಳನ್ನು ಪಡೆದು ಎರಡು ವಾರಗಳಲ್ಲಿ ನ್ಯಾಯಾಲಯಕ್ಕೆ ತಿಳಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿತು.

ಅಲ್ಲದೇ, ಅರ್ಜಿ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಿತು.

ರಾಜ್ಯದ ಗ್ರಾಮ ಪಂಚಾಯಿಗಳಿಗೆ 2020ರಲ್ಲಿ ಚುನಾವಣೆ ನಡೆದಿತ್ತು. ಅವುಗಳ ಅವಧಿ ಮುಂದಿನ ವರ್ಷ ಜನವರಿಯಲ್ಲಿ ಮುಕ್ತಾಯವಾಗಲಿದೆ. ಮುಂದಿನ ಅವಧಿಗೆ ಹೊಸದಾಗಿ ಚುನಾವಣೆ ನಡೆಸಬೇಕಾದರೆ ಮೀಸಲಾತಿ ನಿಗದಿಯಾಗಬೇಕು. ಗ್ರಾಮ ಪಂಚಾಯಿತಿಗಳಿಗೆ ಮೀಸಲಾತಿ ನಿಗದಿಪಡಿಸಬೇಕಾಗಿರುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಮುಂದುವರೆದು, ಚುನಾವಣೆ ನಡೆಸುವುದು ರಾಜ್ಯ ಚುನಾವಣಾ ಆಯೋಗದ ಹೊಣೆಗಾರಿಕೆಯಾಗಿದೆ. ಮೀಸಲಾತಿ ಅಂತಿಮಗೊಳ್ಳುವ ತನಕ ಚುನಾವಣಾ ದಿನಾಂಕ ಘೋಷಿಸಲು ಸಾಧ್ಯವಿಲ್ಲ. ಆದ್ದರಿಂದ ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ, ನ್ಯಾಯಾಲಯದ ಮೊರೆ ಹೋಗಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.