Allahabad High Court with Gyanvapi Mosque
Allahabad High Court with Gyanvapi Mosque 
ಸುದ್ದಿಗಳು

ಜ್ಞಾನವಾಪಿ ಸಮೀಕ್ಷೆ ಪ್ರಶ್ನಿಸಿದ್ದ ಮನವಿ: ತೀರ್ಪು ಕಾಯ್ದಿರಿಸಿದ ಅಲಾಹಾಬಾದ್ ಹೈಕೋರ್ಟ್; ಮುಂದುವರೆದ ಮಧ್ಯಂತರ ತಡೆ

Bar & Bench

ಜ್ಞಾನವಾಪಿ ಮಸೀದಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಅವಕಾಶ ನೀಡಿದ ವಾರಣಾಸಿ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮುಸ್ಲಿಂ ಪಕ್ಷಕಾರರು ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ಕಾಯ್ದಿರಿಸಿದೆ.

ಅವರು ಕಕ್ಷಿದಾರರ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಪ್ರೀತಿಂಕರ್‌ ದಿವಾಕರ್ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ವಿಧಿಸಿರುವ ಮಧ್ಯಂತರ ತಡೆಯಾಜ್ಞೆಯನ್ನು ಆಗಸ್ಟ್ 3ರವರೆಗೆ ವಿಸ್ತರಿಸಲಾಗುವುದು ಎಂದರು.

ಜುಲೈ 21ರಂದು ವಾರಣಾಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎ ಕೆ ವಿಶ್ವೇಶ ಅವರು ಎಎಸ್‌ಐ ಸಮೀಕ್ಷೆಗೆ ಅನುಮತಿ ನೀಡಿದ್ದರು.

ನಂತರ ಮುಸ್ಲಿಂ ಪಕ್ಷಕಾರರು ಇದರ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಜುಲೈ 26ರವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿತ್ತು. ಜೊತೆಗೆ ಜಿಲ್ಲಾ ನ್ಯಾಯಾಧೀಶರ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಮುಸ್ಲಿಂ ಪಕ್ಷಕಾರರಿಗೆ ಸೂಚಿಸಿತ್ತು. ಬಳಿಕ ಮುಸ್ಲಿಂ ಪಕ್ಷಕಾರರು ಹೈಕೋರ್ಟ್‌ಗೆ ಪ್ರಸ್ತುತ ಅರ್ಜಿ ಸಲ್ಲಿಸಿದ್ದರು.

ಜ್ಞಾನವಾಪಿ ಮಸೀದಿಯು ಹಿಂದೂ ದೇವಾಲಯ ಎಂದು ಹಿಂದೂ ಭಕ್ತರು ಪ್ರತಿಪಾದಿಸಿದ್ದರು. ಮಸೀದಿಯೊಳಗೆ  ಪೂಜೆ ಮಾಡುವ ಹಕ್ಕು ಕೋರಿ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು.