Karnataka HC and election 
ಸುದ್ದಿಗಳು

ಜಿ ಪಂ, ತಾ ಪಂ ಚುನಾವಣೆ: ಜನವರಿವರೆಗೆ ಮತ್ತೆ ಕಾಲಾವಕಾಶ ಕೋರಿದ ಸರ್ಕಾರ

ಕಳೆದೊಂದು ವರ್ಷದಿಂದ ಮೀಸಲಾತಿ ನಿಗದಿ ನನೆಗುದಿಗೆ ಬಿದ್ದಿದೆ. ಈಗ ಮತ್ತೇ ಜನವರಿ ತನಕ ಸರ್ಕಾರ ಕಾಲಾವಕಾಶ ಕೇಳುತ್ತಿದೆ. ಅದಕ್ಕಾದರೂ ಬದ್ಧರಾಗಿರುವಂತೆ ಸರ್ಕಾರದ ಹೇಳಿಕೆಯನ್ನು ನ್ಯಾಯಾಲಯ ದಾಖಲಿಸಿಕೊಳ್ಳಬೇಕು ಎಂದ ಆಯೋಗ.

Bar & Bench

ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಅಂತಿಮಗೊಳಿಸಲು ಕರ್ನಾಟಕ ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರವು ಮಂಗಳವಾರ ಮತ್ತೆ ಕಾಲಾವಕಾಶ ಕೇಳಿದೆ.

ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ 12 ವಾರಗಳಲ್ಲಿ ಮೀಸಲಾತಿ ಅಂತಿಮಗೊಳಿಸಲಾಗುವುದು ಎಂದು 2023 ಡಿಸೆಂಬರ್ 19ಕ್ಕೆ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಲಿಖಿತ ಭರವಸೆ ನೀಡಿತ್ತು. ನ್ಯಾಯಾಲಯಕ್ಕೆ ಕೊಟ್ಟ ಭರವಸೆಯಂತೆ ಸರ್ಕಾರ ನಡೆದುಕೊಂಡಿಲ್ಲ ಎಂದು ಆಕ್ಷೇಪಿಸಿ ಸ್ವತಃ ರಾಜ್ಯ ಚುನಾವಣಾ ಆಯೋಗವು ಸರ್ಕಾರದ ವಿರುದ್ಧ ಹೂಡಿರುವ ನ್ಯಾಯಾಂಗ ನಿಂದನೆ ಅರ್ಜಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕಸದಸ್ಯ ಪೀಠ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು 2023ರಲ್ಲಿ ಸಲ್ಲಿಸಲಾದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು “ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಮೀಸಲಾತಿ ಅಂತಿಮಗೊಳಿಸಲು ನಾಲ್ಕು ವಾರ ಕಾಲಾವಕಾಶಬೇಕು. ಕನಿಷ್ಠ ಜನವರಿ ಮೊದಲ ವಾರದವರೆಗೆ ಸಮಯ ನೀಡಬೇಕು. ಕೊಡಗು ಜಿಲ್ಲೆಯ ಕ್ಷೇತ್ರ ಪುನರ್‌ ವಿಂಗಡಣೆ ವಿಳಂಬವಾಗಿದ್ದರಿಂದ ಎಲ್ಲಾ ಜಿಲ್ಲೆಗಳ ಮೀಸಲಾತಿ ನಿಗದಿಗೆ ತಡವಾಗಿದೆ. ಮೀಸಲಾತಿ ಸಿದ್ದಪಡಿಸಿ ಸರ್ಕಾರಕ್ಕೆ ರವಾನಿಸಲಾಗಿದೆ. ಶೀಘ್ರದಲ್ಲೇ ಕರಡು ಮೀಸಲಾತಿ ಹೊರಡಿಸಿ, ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಲಾಗುವುದು. ಬಳಿಕ ಮೀಸಲಾತಿ ಪಟ್ಟಿಯನ್ನು ಮುಂದಿನ ಕ್ರಮಕ್ಕಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಕಳಿಸಿಕೊಡಲಾಗುವುದು” ಎಂದರು.

ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರು “ಚುನಾವಣೆ ಈಗಾಗಲೇ ಬಹಳ ವಿಳಂಬವಾಗಿದೆ. ಕಳೆದೊಂದು ವರ್ಷದಿಂದ ಮೀಸಲಾತಿ ನಿಗದಿ ನನೆಗುದಿಗೆ ಬಿದ್ದಿದೆ. ಈಗ ಮತ್ತೆ ಜನವರಿ ತನಕ ಸರ್ಕಾರ ಕಾಲಾವಕಾಶ ಕೇಳುತ್ತಿದೆ. ಅದಕ್ಕಾದರೂ ಬದ್ಧರಾಗಿರುವಂತೆ ಸರ್ಕಾರದ ಹೇಳಿಕೆಯನ್ನು ನ್ಯಾಯಾಲಯ ದಾಖಲಿಸಿಕೊಳ್ಳಬೇಕು” ಎಂದು ಮನವಿ ಮಾಡಿದರು.
ಕಾಲಾವಕಾಶ ನೀಡುವ ಬಗ್ಗೆ ಡಿಸೆಂಬರ್ 12ರ ವಿಚಾರಣೆಯ ದಿನದಂದು ನಿರ್ಧರಿಸಲಾಗುವುದು ಹೇಳಿತು.