High Court of Karnataka
High Court of Karnataka 
ಸುದ್ದಿಗಳು

ಬಂದೂಕು ಹಿಂದಿರುಗಿಸುವಂತೆ ಅಧಿಕೃತ ಪರವಾನಗಿದಾರರು ಕೋರಿದರೆ ಕ್ರಮಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

Bar & Bench

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯ ಪಾಲನೆಗೆ ಅನುಗುಣವಾಗಿ ಸರ್ಕಾರದ ಸುಪರ್ದಿಗೆ ಒಪ್ಪಿಸಲಾಗಿರುವ ಬಂದೂಕು ಹಿಂದಿರುಗಿಸುವಂತೆ ಕೋರಿ ಅಧಿಕೃತ ಪರವಾನಗಿದಾರರು ಮನವಿ ಸಲ್ಲಿಸಿದರೆ, ಅಂತಹ ಮನವಿಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಡ್ವೊಕೇಟ್‌ ಜನರಲ್ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಐವರನಾಡು ಗ್ರಾಮದ ಕೃಷಿಕ ಕೆ ವಿ ಪ್ರಸಾದ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.

ಅರ್ಜಿದಾರರ ಮನವಿಗೆ ಸಂಬಂಧಿಸಿದಂತೆ ಉತ್ತರಿಸಿದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ ಶೆಟ್ಟಿ ಅವರು ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಿದೆ. ಇದರ ಅನುಸಾರ ಪರವಾನಗಿ ಹೊಂದಿದ ಆಯುಧಗಳನ್ನು ಸುಪರ್ದಿಗೆ ಒಪ್ಪಿಸಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಗತ್ಯ ಇರುವವರಿಗೆ ಇದರಿಂದ ವಿನಾಯಿತಿ ನೀಡಬಹುದಾಗಿದೆ. ಆದರೆ, ಇದನ್ನು ಆಯಾ ಜಿಲ್ಲಾಧಿಕಾರಿಗಳೇ ನಿರ್ಧರಿಸಲಿದ್ದಾರೆ ಎಂದರು.

ಇದನ್ನು ದಾಖಲಿಸಿಕೊಂಡ ಪೀಠವು ಅರ್ಜಿದಾರರು ಮನವಿ ಸಲ್ಲಿಸಿದರೆ, ಎರಡು ದಿನಗಳಲ್ಲಿ ಸೂಕ್ತ ಆದೇಶ ಹೊರಡಿಸಿ ಎಂದು ಸೂಚಿಸಿತು. ಪ್ರಕರಣದ ಪ್ರತಿವಾದಿಗಳಾದ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸುಳ್ಯ ತಾಲ್ಲೂಕು ತಹಶೀಲ್ದಾರ್, ಬೆಳ್ಳಾರೆ ಪೊಲೀಸ್‌ ಠಾಣೆಯ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ, ವಿಚಾರಣೆ ಮುಂದೂಡಿತು.

ಪ್ರಕರಣದ ವಿವರಣೆ: ಕೃಷಿಕನಾಗಿರುವ ತನಗೆ ಜೀವ ರಕ್ಷಣೆ ಮತ್ತು ಕೃಷಿ ಚಟುವಟಿಕೆ ವೇಳೆ ವನ್ಯಪ್ರಾಣಿಗಳಿಂದ ಆತ್ಮರಕ್ಷಣೆ ಮಾಡಿಕೊಳ್ಳಲು ಬಂದೂಕಿನ ಅಗತ್ಯವಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತಮ್ಮ ಬಂದೂಕನ್ನು ತನ್ನ ಸುಪರ್ದಿಗೆ ಪಡೆದಿದೆ. ಆಯುಧ ಸುಪರ್ದಿಗೆ ಪಡೆಯುವ ಆದೇಶದಿಂದ ವಿನಾಯಿತಿ ನೀಡುವಂತೆ ಕೋರಲಾದ ಮನವಿಯನ್ನು ತಿರಸ್ಕರಿಸಲಾಗಿದೆ. ಇದು ಸಹಜ ನ್ಯಾಯತ‌ತ್ವ ಹಾಗೂ ಸಂವಿಧಾನದ 14, 16 ಮ‌ತ್ತು 21ನೇ ವಿಧಿಗಳಿಗೆ ವಿರುದ್ಧವಾಗಿದೆ. ಆದ್ದರಿಂದ, ಸರ್ಕಾರ ಈ ಸಂಬಂಧ 2024ರ ಮಾರ್ಚ್‌ 26ರಂದು ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿದಾರರ ಪರ ಕೆ ರವಿಶಂಕರ್ ವಾದಿಸಿದರು.