BBMP and Karnataka HC 
ಸುದ್ದಿಗಳು

ಗ್ರೇಟರ್‌ ಬೆಂಗಳೂರು ಕಾಯಿದೆ ಸಾಂವಿಧಾನಿಕ ಸಿಂಧುತ್ವ: ರಾಜ್ಯ ಸರ್ಕಾರ, ಬಿಬಿಎಂಪಿಗೆ ನೋಟಿಸ್‌ ಜಾರಿಗೊಳಿಸಿದ ಹೈಕೋರ್ಟ್‌

ಹಿರಿಯ ವಕೀಲ ಎಂ ಬಿ ನರಗುಂದ್‌ ಅವರು “2015ರಲ್ಲಿ ಕೊನೆಯ ಬಾರಿಗೆ ಬಿಬಿಎಂಪಿಗೆ ಚುನಾವಣೆ ನಡೆದಿತ್ತು. ಹತ್ತು ವರ್ಷದಿಂದ ಚುನಾವಣೆ ನಡೆದಿಲ್ಲ. ಸಂವಿಧಾನದ 74ನೇ ವಿಧಿಯಡಿ ತಿದ್ದುಪಡಿಯನ್ನು ಪ್ರಶ್ನಿಸಿದ್ದೇವೆ” ಎಂದರು.

Bar & Bench

ಗ್ರೇಟರ್ ಬೆಂಗಳೂರು ಆಡಳಿತ (ಜಿಬಿಜಿ) ಕಾಯಿದೆ-2025 ಅನ್ನು ಸಂವಿಧಾನ ಬಾಹಿರ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರ್ಕಾರ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್‌ ಸೋಮವಾರ ನೋಟಿಸ್‌ ಜಾರಿಗೊಳಿಸಿದೆ.

ಸಿನಿಮಾ ನಿರ್ದೇಶಕ ಟಿ ಎಸ್ ನಾಗಭರಣ, ಜಿ ಮಂಜುನಾಥ ರಾಜು ಮತ್ತು ಜಿ ಎಸ್‌ ರೇಣುಕ ಪ್ರಸಾದ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಎಂ ಬಿ ನರಗುಂದ್‌ ಅವರು “2015ರಲ್ಲಿ ಕೊನೆಯ ಬಾರಿಗೆ ಬಿಬಿಎಂಪಿಗೆ ಚುನಾವಣೆ ನಡೆದಿತ್ತು. ಹತ್ತು ವರ್ಷದಿಂದ ಚುನಾವಣೆ ನಡೆದಿಲ್ಲ. ಸಂವಿಧಾನದ 74ನೇ ವಿಧಿಯಡಿ ತಿದ್ದುಪಡಿಯನ್ನು ಪ್ರಶ್ನಿಸಿದ್ದೇವೆ” ಎಂದರು.

ವಾದ ಆಲಿಸಿದ ಪೀಠವು ಅಡ್ವೊಕೇಟ್‌ ಜನರಲ್‌, ಬಿಬಿಎಂಪಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿಗೊಳಿಸಿ, ಆಕ್ಷೇಪಣೆ ಮತ್ತು ಪ್ರತ್ಯುತ್ತರ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ಸೆಪ್ಟೆಂಬರ್‌ 1ಕ್ಕೆ ಮುಂದೂಡಿತು.

“ಬೆಂಗಳೂರಿನ ಆಡಳಿತ ಮತ್ತು ನಿರ್ವಹಣೆಯನ್ನು ನೇರವಾಗಿ ತನ್ನ ಹತೋಟಿಗೆ ತೆಗೆದುಕೊಳ್ಳುವ ಹುನ್ನಾರದಿಂದ ಸರ್ಕಾರ ಈ ಪ್ರಾಧಿಕಾರ ರಚನೆ ಮಾಡಿದೆ. ಇದರಿಂದ, ಚುನಾಯಿತರಲ್ಲದ ವ್ಯಕ್ತಿಗಳಿಗೆ ಹೆಚ್ಚಿನ ಅಧಿಕಾರ ಸಿಗಲಿದೆ. ಇದು ಅಧಿಕಾರ ವಿಕೇಂದ್ರೀಕರಣ ಮತ್ತು ಸ್ಥಳೀಯ ಸರ್ಕಾರಗಳ ಬಲವರ್ಧನೆಯ ತತ್ವಕ್ಕೆ ಪೆಟ್ಟುಕೊಡಲಿದೆ” ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

“ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯು ಸಂವಿಧಾನದ 74ನೇ ತಿದ್ದುಪಡಿಗೆ ವಿರುದ್ಧವಾಗಿದ್ದು, ಇದನ್ನು ಸಂವಿಧಾನ ಬಾಹಿರ ಎಂದು ಘೋಷಿಸುವ ಮೂಲಕ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು” ಎಂದು ಅರ್ಜಿದಾರರು ಕೋರಿದ್ದಾರೆ.