Yaduveer Wadiyar and Karnataka HC 
ಸುದ್ದಿಗಳು

ಮೈಸೂರು ಲೋಕಸಭಾ ಕ್ಷೇತ್ರದ ಮರು ಚುನಾವಣೆಗೆ ಕೋರಿಕೆ: ಯದುವೀರ್‌ ಒಡೆಯರ್‌ಗೆ ಹೈಕೋರ್ಟ್‌ ನೋಟಿಸ್‌

ಬಹುಜನ ಸಮಾಜವಾದಿ ಪಕ್ಷದ ನಾಮಪತ್ರ ತಿರಸ್ಕೃತ ಅಭ್ಯರ್ಥಿ ರೇವತಿ ರಾಜ್‌ ಅಲಿಯಾಸ್‌ ಭೀಮಪುತ್ರಿ ರೇವತಿ ರಾಜ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ಜಿ ಪಂಡಿತ್‌ ಅವರ ಏಕಸದಸ್ಯ ಪೀಠವು ನಡೆಸಿತು.

Bar & Bench

ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಅಸಿಂಧುಗೊಳಿಸಿ ಹೊಸದಾಗಿ ಚುನಾವಣೆ ನಡೆಸಲು ಕೋರಿ ಬಹುಜನ ಸಮಾಜವಾದಿ ಪಕ್ಷದ ನಾಮಪತ್ರ ತಿರಸ್ಕೃತ ಅಭ್ಯರ್ಥಿ ರೇವತಿ ರಾಜ್‌ ಅಲಿಯಾಸ್‌ ಭೀಮಪುತ್ರಿ ರೇವತಿ ರಾಜ್ ಸಲ್ಲಿಸಿರುವ ಅರ್ಜಿಯ ಸಂಬಂಧ ಕರ್ನಾಟಕ ಹೈಕೋರ್ಟ್‌ ಸಂಸದ ಯದುವೀರ್‌ ಒಡೆಯರ್‌ ಅವರಿಗೆ ಶುಕ್ರವಾರ ನೋಟಿಸ್‌ ಜಾರಿಗೊಳಿಸಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಎಸ್‌ಪಿ ಪಕ್ಷದಿಂದ ಸ್ಪರ್ಧಿಸಿದ್ದ ತಮ್ಮ ನಾಮಪತ್ರವನ್ನು ಚುನಾವಣಾ ಆಯೋಗ‌ ತಿರಸ್ಕರಿಸುವುಕ್ಕೆ ಆಕ್ಷೇಪಿಸಿ ಹೊಸದಾಗಿ ಚುನಾವಣೆ ನಡೆಸಲು ಕೋರಿ ರೇವತಿ ರಾಜ್‌ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ಜಿ ಪಂಡಿತ್‌ ಅವರ ಏಕಸದಸ್ಯ ಪೀಠವು ನಡೆಸಿತು.

2024ರ ಏಪ್ರಿಲ್ 4ರಂದು ಆಯೋಗಕ್ಕೆ ನಾಮಪತ್ರ ಸಲ್ಲಿಸಲಾಗಿತ್ತು. ಆದರೆ, ನಾಮಪತ್ರದ ಕಲಂ 7, 7(ಎ), 7(ಎ)(ಬಿ) ಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಲ್ಲ. ಆದ ಕಾರಣ ಏಪ್ರಿಲ್ 5ರ ಬೆಳಿಗ್ಗೆ 11 ಗಂಟೆಯ ಒಳಗಾಗಿ ಸರಿಯಾಗಿ ಭರ್ತಿ ಮಾಡಿ ನಾಮಪತ್ರ ಸಲ್ಲಿಸಬೇಕು ಎಂದು ಚುನಾವಣಾಧಿಕಾರಿ ಸೂಚಿಸಿದ್ದರು. ಸೂಕ್ತ ಸಮಯದಲ್ಲಿ ನಾಮಪತ್ರ ಸಲ್ಲಿದ್ದರೂ ತಮ್ಮ ನಾಮಪತ್ರ ತಿರಸ್ಕರಿಸಲಾಗಿದೆ. ಈ ಸಂಬಂಧ ರಾಜ್ಯ ಮಖ್ಯ ಚುನಾವಣಾ ಆಯುಕ್ತರಿಗೆ ಪತ್ರದ ಮೂಲಕ ದೂರು ಸಲ್ಲಿಸಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ತಮ್ಮ ನಾಮಪತ್ರ ತಿರಸ್ಕರಿಸಿದ್ದ ಅಂದಿನ ಚುನಾವಣಾಧಿಕಾರಿ ಕೆ ವಿ ರಾಜೇಂದ್ರ ಅವರ ಆದೇಶವನ್ನು ಬದಿಗೆ ಸರಿಸಬೇಕು. ಯದುವೀರ್‌ ಆಯ್ಕೆ ಅಸಿಂಧುಗೊಳಿಸಿ, ಭಾರತೀಯ ಚುನಾವಣಾ ಆಯೋಗ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಹೊಸದಾಗಿ ಚುನಾವಣೆ ನಡೆಸಲು ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರತಿವಾದಿಯಾಗಿರುವ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ನೋಟಿಸ್‌ ಜಾರಿ ಮಾಡಿದ ನ್ಯಾಯಾಲಯವು ವಿಚಾರಣೆ ಮುಂದೂಡಿತು. ಅರ್ಜಿದಾರರ ಪರವಾಗಿ ವಕೀಲ ಎಚ್‌ ಬಿ ಮಂಜುನಾಥ್‌ ವಾದಿಸಿದರು.