Karnataka High Court 
ಸುದ್ದಿಗಳು

ಕರ್ನಾಟಕ ನೌಕರರ ರಾಜ್ಯ ವಿಮಾ ಸೊಸೈಟಿಯ ಸಿಂಧುತ್ವದ ಪ್ರಶ್ನೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿತು.

Bar & Bench

ಕಾರ್ಮಿಕ ರಾಜ್ಯ ವಿಮಾ ಯೋಜನೆಯ ವೈದ್ಯಕೀಯ ಸೇವೆಗಳ ಇಲಾಖೆಯು ರೂಪಿಸಿರುವ ಕರ್ನಾಟಕ ನೌಕರರ ರಾಜ್ಯ ವಿಮಾ ಸೊಸೈಟಿಯ ಕಾನೂನು ಬದ್ಧತೆ ಮತ್ತು ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.

ಕಾರ್ಮಿಕ ರಾಜ್ಯ ವಿಮಾ ಯೋಜನೆಯ ವೈದ್ಯಕೀಯ ಸೇವೆಗಳ ಇಲಾಖೆಯ ಆಯುಕ್ತಾಲಯದ ಕಚೇರಿಯಲ್ಲಿ ಎಫ್‌ಡಿಎ ಆಗಿ ಸೇವೆ ಸಲ್ಲಿಸುತ್ತಿರುವ ಡಿ ವಿ ದೊರೈ ರಾಯನ ಗೌಡ ಎಂಬುವರು ಸೇರಿದಂತೆ ರಾಜ್ಯದ ವಿವಿಧ ಇಎಸ್ಐ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 160 ಮಂದಿ ನೌಕರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ವಾದ ಆಲಿಸಿದ ಪೀಠವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾರ್ಮಿಕ ರಾಜ್ಯ ವಿಮಾ ಯೋಜನೆಯ ವೈದ್ಯಕೀಯ ಸೇವೆಗಳ ಇಲಾಖೆಯ ಆಯುಕ್ತರು, ಇಎಸ್ಐ ನಿಗಮ, ಇಎಸ್ಐ ಸೊಸೈಟಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಬುಧವಾರಕ್ಕೆ (ಅಕ್ಟೋಬರ್‌ 29) ಮುಂದೂಡಿತು. ಅರ್ಜಿದಾರರ ಪರ ಹಿರಿಯ ವಕೀಲ ಡಿ ಆರ್ ರವಿಶಂಕರ್ ವಾದ ಮಂಡಿಸಿದರು.