ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಬಜೆಟ್ನಲ್ಲಿ ಅನುದಾನ ಹಂಚಿಕೆ ಮಾಡಿರುವುದನ್ನು ಟೀಕಿಸಿ ಎಕ್ಸ್ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವುದಕ್ಕೆ ಸುದ್ದಿ ನಿರೂಪಕ ರಾಹುಲ್ ಶಿವಶಂಕರ್ ವಿರುದ್ದ ದಾಖಲಾಗಿದ್ದ ಕೋಮು ದ್ವೇಷ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಪತ್ರಕರ್ತ ರಾಹುಲ್ ಶಿವಶಂಕರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಇಂದು ಪ್ರಕಟಿಸಿತು. ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.
“ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಜೆಟ್ ಭಾಷಣ ಮತ್ತು ಮಾಧ್ಯಮಗಳ ವರದಿಯನ್ನು ಪರಿಶೀಲಿಸಿದ ನಂತರ ಟ್ವೀಟ್ ಮಾಡಲಾಗಿದೆ. ಸರ್ಕಾರದ ಬೊಕ್ಕಸಕ್ಕೆ ದೊಡ್ಡಮಟ್ಟದಲ್ಲಿ ಆದಾಯ ತರುವ ದೇವಾಲಯಗಳಿಗೆ ಅನುದಾನವನ್ನು ಏಕೆ ಹಂಚಿಕೆ ಮಾಡಲಾಗಿಲ್ಲ. ಇತರೆ ಧಾರ್ಮಿಕ ಪ್ರಾರ್ಥನಾ ಸ್ಥಳಗಳಿಗೆ ಹೆಚ್ಚಿನ ಅನುದಾನ ಹಂಚಿಕೆ ಮಾಡಿರುವುದು ಏಕೆ ಎಂದು ಪ್ರಶ್ನಿಸಲಾಗಿತ್ತು. ಇದು ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ವಿಚಾರವಾಗುವುದಿಲ್ಲ. ಇದು ದ್ವೇಷ ಹರಡುವ ಪ್ರಶ್ನೆ ಎಂದಾದರೆ ಪತ್ರಕರ್ತರು ಅಥವಾ ಯಾವುದೇ ವ್ಯಕ್ತಿ ಧರ್ಮಕ್ಕೆ ಸಂಬಂಧಿಸಿದಂತೆ ಈ ದೇಶದಲ್ಲಿ ಪ್ರಶ್ನೆ ಕೇಳಲಾಗದ ಸ್ಥಿತಿ ನಿರ್ಮಾಣವಾಗಲಿದೆ” ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.
ಪ್ರಕರಣದ ಹಿನ್ನೆಲೆ: ಮಂಗಳೂರಿನ ವಕ್ಫ್ ಆಸ್ತಿಗಳು ಮತ್ತು ಹಜ್ ಭವನ ಹಾಗೂ ಕ್ರಿಶ್ಚಿಯನ್ ಸಮುದಾಯಗಳ ಪ್ರಾರ್ಥನಾ ಸ್ಥಳಗಳಿಗೆ ರಾಜ್ಯ ಸರ್ಕಾರವು ಬಜೆಟ್ನಲ್ಲಿ ಅನುದಾನ ಹಂಚಿಕೆ ಮಾಡಿರುವುದರ ಸಂಬಂಧ ರಾಹುಲ್ ಶಿವಶಂಕರ್ ಎಕ್ಸ್ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಸಂಬಂಧ ಕೋಲಾರದ ಕೌನ್ಸಿಲರ್ ಎನ್ ಅಂಬರೀಷ್ ಅವರು ರಾಹುಲ್ ಶಿವಶಂಕರ್ ಅವರಿಗೆ ಕೋಮು ದ್ವೇಷ ಹರಡುವ ಚಾಳಿಯಿದೆ ಎಂದು ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್ 153ಎ ಮತ್ತು 505 ಅಡಿ ಪ್ರಕರಣ ದಾಖಲಿಸಲಾಗಿದೆ.