ಅಗ್ನಿ ಸುರಕ್ಷತಾ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಳ್ಳದಿದ್ದರೂ ಎಂ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿದ ಬೆಂಗಳೂರು ವಿದ್ಯುತ್ ಸರಬರಾಜು ಸಂಸ್ಥೆಯನ್ನು (ಬೆಸ್ಕಾಂ) ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಹೈಕೋರ್ಟ್, ಈ ತಪ್ಪಿಗೆ ಸಂಪೂರ್ಣವಾಗಿ ಬೆಸ್ಕಾಂ ಅನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದೆ.
ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಸಂಬಂಧ ಬೆಸ್ಕಾಂ ಜಾರಿಗೊಳಿಸಿರುವ ನೋಟಿಸ್ ಪ್ರಶ್ನಿಸಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ವಿಚಾರಣೆಗೆ ನಡೆಸಿತು.
ಅರ್ಜಿದಾರರ ಪರ ವಕೀಲರು “ಬೆಸ್ಕಾಂ ನೋಟಿಸ್ ನೀಡಿ, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಕೆಲವೊಂದು ಬೆಳವಣಿಗೆಗಳು ನಡೆದಿವೆ. ಜೂನ್ 12ಕ್ಕೆ ಬೆಸ್ಕಾಂನಿಂದ ವಿದ್ಯುತ್ ಸಂಪರ್ಕ ಕಡಿತದ ನೋಟಿಸ್ ಕೊಟ್ಟು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಅದನ್ನು ಪ್ರಶ್ನಿಸಿ ಜೂನ್ 17ಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಅದೇ ದಿನ ವಿದ್ಯುತ್ ಸಂಪರ್ಕ ಮರುಸ್ಥಾಪಿಸಲಾಗಿದೆ” ಎಂದರು.
ಇದನ್ನು ಪರಿಶೀಲಿಸಿದ ಪೀಠವು “ಅಗ್ನಿ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಂಡಿಲ್ಲ ಎಂಬ ಕಾರಣಕ್ಕೆ ವಿದ್ಯುತ್ ಸಂಪರ್ಕ ಕಡಿತದ ನೋಟಿಸ್ ಕೊಟ್ಟು, ಸಂಪರ್ಕವನ್ನೂ ಕಡಿತಗೊಳಿಸಲಾಗಿತ್ತು. ಆದರೆ, ಅಗ್ನಿ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಂಡಿಲ್ಲ ಎಂದು ಗೊತ್ತಿದ್ದರೂ ವಿದ್ಯುತ್ ಸಂಪರ್ಕ ಕೊಟ್ಟಿದ್ದು ಹೇಗೆ? ಈ ವಿಚಾರದಲ್ಲಿ ಬೆಸ್ಕಾಂ ಸಂಸ್ಥೆಯನ್ನೇ ಸಂಪೂರ್ಣ ಹೊಣೆ ಮಾಡಲಾಗುವುದು” ಎಂದು ಎಚ್ಚರಿಸಿತು.
ಅದಕ್ಕೆ ಬೆಸ್ಕಾಂ ಪರ ವಕೀಲ ಲಿಖಿತ್ ಅವರು “ಕೆಎಸ್ಸಿಎ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ವಿದ್ಯುತ್ ಸಂಪರ್ಕ ನೀಡಲಾಗಿದೆ. ಪುನಾ ಸಂಪರ್ಕ ಕಡಿತಗೊಳಿಸಲಾಗುವುದು” ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಆಗ ಪೀಠವು “ಅಗ್ನಿ ಸುರಕ್ಷತಾ ನಿರಾಕ್ಷೇಣಾ ಪತ್ರ ಸರ್ಕಾರ ನೀಡಬೇಕು. ಸರ್ಕಾರವನ್ನು ಕೇಳದೇ ನಿಮ್ಮಷ್ಟಕ್ಕೆ ನೀವೇ ವಿದ್ಯುತ್ ಸಂಪರ್ಕ ಕೊಟ್ಟರೆ ನ್ಯಾಯಾಲಯ ಸುಮ್ಮನಿರಲ್ಲ. ಈಗಾಗಲೇ ಆಗಿರುವ ಅನಾಹುತ ಸಾಕಷ್ಟಿದೆ. ಮತ್ತೇ ಏನಾದರೂ ಅವಘಡ ಸಂಭವಿಸಿದರೆ ಯಾರು ಹೊಣೆ? ಅಗ್ನಿ ಸುರಕ್ಷತಾ ಕ್ರಮ ಅಳವಡಿಸಿಕೊಳ್ಳದಿದ್ದರೆ ಕ್ರೀಡಾಂಗಣ ಕತ್ತಲಲ್ಲಿ ಇರಲಿ ಬಿಡಿ. ಇರುವ ಆಯ್ಕೆ ಒಂದೇ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ವಿದ್ಯುತ್ ಸಂಪರ್ಕ ಪಡೆದುಕೊಳ್ಳಬೇಕು ಅಷ್ಟೇ. ಅಪಾಯಗಳ ವಿಚಾರದಲ್ಲಿ ಶೂನ್ಯ ಸಹನೆ ಬೇಕು” ಎಂದು ತೀಕ್ಷ್ಣವಾಗಿ ಹೇಳಿತು.
ಕೆಎಸ್ಸಿಎ ಪರ ವಕೀಲರು “ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬಲವಂತದ ಕ್ರಮ ಕೈಗೊಳ್ಳದಂತೆ ಬೆಸ್ಕಾಂ, ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಸೂಚಿಸಬೇಕು” ಮನವಿ ಮಾಡಿದರು.
ಆಗ ಪೀಠವು “ಈ ವಿಚಾರದಲ್ಲಿ ನ್ಯಾಯಾಲಯ ಏನನ್ನೂ ಹೇಳುವುದಿಲ್ಲ. ವಿದ್ಯುತ್ ಸಂಪರ್ಕ ಕಡಿತಗೊಳಿಸುವುದಾಗಿ ಬೆಸ್ಕಾಂ ಪರ ವಕೀಲರು ಮೌಖಿಕ ಭರವಸೆ ನೀಡಿದ್ದಾರೆ. ಅದಕ್ಕೆ, ಮೊದಲು ಸರ್ಕಾರವನ್ನು ಕೇಳಿ, ಒಂದೊಮ್ಮೆ ಸರ್ಕಾರ ಹೇಳಿದರೆ ಆಯಿತು. ಇಲ್ಲದಿದ್ದರೆ ಆಗಿರುವ ತಪ್ಪಿಗೆ ನಿಮ್ಮನ್ನೇ (ಬೆಸ್ಕಾಂ) ಹೊಣೆ ಮಾಡಲಾಗುವುದು” ಎಂದು ಪೀಠ ಎಚ್ಚರಿಕೆ ನೀಡಿತು.
ವಾದ-ಪ್ರತಿವಾದ ಆಲಿಸಿದ ಪೀಠವು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ, ಬೆಸ್ಕಾಂ ಸಹಾಯಕ ಕಾರ್ಯಕಾರ ಎಂಜಿನಿಯರ್, ಅಗ್ನಿ ಸುರಕ್ಷತೆ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರಿಗೆ ನೋಟಿಸ್ಗೊಳಿಸಿ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿತು.
ಅಗ್ನಿ ಸುರಕ್ಷತೆ ಮತ್ತು ತುರ್ತು ಸೇವೆಗಳ ಇಲಾಖೆಯ 2023ರ ಮೇ 11ರ ಸಲಹಾ ಪತ್ರದಲ್ಲಿ ಸೂಚಿಸಲಾದ ಅಗ್ನಿ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಳ್ಳದಿರುವುದರಿಂದ 2011ರ ಜುಲೈ 7ರಂದು ಕೆಎಸ್ಸಿಎಗೆ ಕಲ್ಪಿಸಿದ್ದ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು ಎಂದು ಅಗ್ನಿ ಸುರಕ್ಷತೆ ಮತ್ತು ತುರ್ತು ಸೇವೆಗಳ ಇಲಾಖೆ ಮಹಾ ನಿರ್ದೇಶಕರು 2025ರ ಜೂನ್ 10ರಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದರು. ಅದರಂತೆ, ಜೂನ್ 12ರಂದು ಬೆಸ್ಕಾಂ ಕೆಎಸ್ಸಿಎಗೆ ವಿದ್ಯುತ್ ಸಂಪರ್ಕ ಕಡಿತದ ನೋಟಿಸ್ ಜಾರಿಗೊಳಿಸಿತ್ತು.