BBMP and Karnataka HC
BBMP and Karnataka HC 
ಸುದ್ದಿಗಳು

ಅನಧಿಕೃತ ಹೋರ್ಡಿಂಗ್‌ಗಳು ನಾಯಿಕೊಡೆಗಳಂತೆ ಹಬ್ಬಿವೆ ಎಂದ ಹೈಕೋರ್ಟ್‌; ಸಮಗ್ರ ವರದಿ ಸಲ್ಲಿಸಲು ಬಿಬಿಎಂಪಿಗೆ ಕಡೆಯ ಅವಕಾಶ

Bar & Bench

ಬೆಂಗಳೂರಿನಲ್ಲಿ ನಾಯಿಕೊಡೆಗಳಂತೆ ಅನಧಿಕೃತ ಹೋರ್ಡಿಂಗ್‌ಗಳು ತಲೆ ಎತ್ತುತ್ತಿರುವುದರಿಂದ ಸಾರ್ವಜನಿಕರು ಅದರಲ್ಲೂ ಮುಖ್ಯವಾಗಿ ಬೆಂಗಳೂರಿನ ಜನತೆ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್‌ ಮಂಗಳವಾರ ಅಸಮಾಧಾನ ಹೊರಹಾಕಿದೆ.

ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ತಡೆಯಲು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಮಾಯಿಗೇಗೌಡ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಂ.ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

“ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆ ಹೆಚ್ಚುತ್ತಿದೆ. ಈ ಬೆಳವಣಿಗೆಯು ಪಾಲಿಕೆ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸೂಕ್ತವಾಗಿ ನಿಭಾಯಿಸುತ್ತಿಲ್ಲ ಹಾಗೂ ಸಂಪೂರ್ಣ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡುವಂತೆ ಮಾಡಿರುವುದಾಗಿ ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಅವರ ವಾದವು ನ್ಯಾಯಸಮ್ಮತವಾಗಿದ್ದು, ಜಾಹೀರಾತು ಹಾವಳಿಯಿಂದ ಸಾರ್ವಜನಿಕರು ಮತ್ತು ನಿರ್ದಿಷ್ಟವಾಗಿ ಬೆಂಗಳೂರಿಗರಿಗೆ ತುಂಬಾ ತೊಂದರೆಯಾಗುತ್ತಿದೆ” ಎಂದು ಪೀಠ ಬಿಬಿಎಂಪಿ ಅಧಿಕಾರಿಗಳ ಕಾರ್ಯವೈಖರಿಗೆ ಚಾಟಿ ಬೀಸಿತು.

“ಬೆಂಗಳೂರಿನಲ್ಲಿ ಅನಧಿಕೃತ ಚುನಾವಣಾ ಹೋರ್ಡಿಂಗ್‌, ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳು ನಾಯಿಕೊಡೆಗಳಂತೆ ತಲೆ ಎತ್ತುತ್ತಿವೆ. ಇದು ಸುಗಮ ಸಂಚಾರಕ್ಕೆ ಅಡಚಣೆ ಉಂಟುಮಾಡುವುದಲ್ಲದೇ, ಬಹಳಷ್ಟು ಅನನುಕೂಲತೆ ಸೃಷ್ಟಿಸುತ್ತಿವೆ. ಈ ಪರಿಸ್ಥಿತಿ ತಡೆಯುವ ನಿಟ್ಟಿನಲ್ಲಿ ಬಿಬಿಎಂಪಿ ಕಾರ್ಯೋನ್ಮುಖವಾಗಬೇಕು. ಆ ಕುರಿತು ಬಿಬಿಎಂಪಿ ಸಮಗ್ರ ವರದಿಯನ್ನು ಮೂರು ವಾರದಲ್ಲಿ ಸಲ್ಲಿಸಬೇಕು. ಇದು ಬಿಬಿಎಂಪಿಗೆ ನೀಡುತ್ತಿರುವ ಕಡೆಯ ಅವಕಾಶ” ಎಂದು ಪೀಠ ವಿಚಾರಣೆಯನ್ನು ಅಕ್ಟೋಬರ್‌ 11ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ಮೆಮೊ ಸಲ್ಲಿಸಿ, 2023ರ ಆಗಸ್ಟ್‌ 30ರಿಂದ ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆಗಳ ಕುರಿತು 701 ಪ್ರಕರಣಗಳನ್ನು ದಾಖಲಿಸಲಾಗಿದೆ. 2022ರಲ್ಲಿ 76, 2021ರಲ್ಲಿ 19, 2020ರಲ್ಲಿ 120 ಪ್ರಕರಣಗಳು ದಾಖಲಾಗಿವೆ. ಒಟ್ಟಾರೆ ಪ್ರಕರಣಗಳ ಪೈಕಿ 164 ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ. 17 ಪ್ರಕರಣಗಳು ಇತ್ಯರ್ಥಗೊಂಡಿದ್ದು, 132 ಪ್ರಕರಣಗಳು ವಿಲೇವಾರಿಗೆ ಬಾಕಿಯಿವೆ. 2023ರ ಆಗಸ್ಟ್‌ ತಿಂಗಳ ಒಂದರಲ್ಲೇ 327 ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ವರದಿ ಸಲ್ಲಿಸಿ, ಕರ್ನಾಟಕ ಮುಕ್ತ ಪ್ರದೇಶದ ವಿರೂಪ ತಡೆ ಕಾಯಿದೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಿ ನಗರದ ಎಲ್ಲಾ ವಲಯಗಳ ಉಪ ಪೊಲೀಸ್‌ ಆಯುಕ್ತರು, ಸಹಾಯಕ ಪೊಲೀಸ್‌ ಆಯುಕ್ತರು, ಠಾಣೆಗಳ ಇನ್ಸ್‌ಪೆಕ್ಟರ್‌ಗಳಿಗೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು 2023ರ ಆಗಸ್ಟ್‌ 23ರಂದು ನಿರ್ದೇಶಿಸಿದ್ದಾರೆ. ಗಸ್ತು ಮಾಡುವ ವೇಳೆ ಅನಧಿಕೃತ ಜಾಹೀರಾತು ಅಳವಡಿಸುತ್ತಿರುವುದು ಕಂಡು ಬಂದಲ್ಲಿ, ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ದಾಖಲಿಸಿದೆ.

ಮುಂದುವರೆದು, ಎಲ್ಲಾ ಸ್ಥಳಗಳನ್ನು ಪರಿಶೀಲಿಸಿ ಹೆಚ್ಚಿನ ಪ್ರಕರಣ ದಾಖಲಿಸಬೇಕು. ಅದಕ್ಕಾಗಿ ಬಿಬಿಎಂಪಿ ಅಧಿಕಾರಿಗಳ ನೆರವು ಪಡೆದು ಕ್ರಮ ಜರುಗಿಸಬೇಕು. ಅದಾಗ್ಯೂ ಮುಂದಿನ ದಿನಗಳಲ್ಲಿ ಅನಧಿಕೃತ ಜಾಹೀರಾತು ಫಲಕಗಳು ಅಳವಡಿಸಿರುವುದು ಕಂಡುಬಂದರೆ ಸಂಬಂಧಪಟ್ಟ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಿ, ಮುಂದಿನ ಇಲಾಖಾ ಶಿಸ್ತು ಕ್ರಮಕ್ಕೆ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ವರದಿ ಕಳುಹಿಸಿಕೊಡುವಂತೆ ಎಲ್ಲಾ ಸಹಾಯಕ ಪೊಲೀಸ್‌ ಆಯುಕ್ತರಿಗೆ ನಿರ್ದೇಶಿಸಲಾಗಿದೆ ಎಂದು ವಿವರಿಸಿದೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಮತ್ತು ವಕೀಲ ಜಿ ಆರ್‌ ಮೋಹನ್‌ ಅವರು ಬಿಬಿಎಂಪಿ ತನ್ನ ಕರ್ತವ್ಯದಲ್ಲಿ ವಿಫಲವಾಗಿದೆ ಎಂದು ಪೀಠದ ಗಮನಸೆಳೆದರು.