Justice M Nagaprasanna 
ಸುದ್ದಿಗಳು

ವನ್ಯಜೀವಿ ಉತ್ಪನ್ನಗಳ ಹಿಂದಿರುಗಿಸಲು ಸೂಚಿಸಿರುವ ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ

Bar & Bench

ವನ್ಯಜೀವಿಗಳಿಗೆ ಸಂಬಂಧಿಸಿದ ಮತ್ತು ಅವುಗಳ ದೇಹದ ಯಾವುದೇ ಭಾಗ ಅಥವಾ ವಸ್ತುಗಳ ಸಂಗ್ರಹ ಕಾನೂನುಬಾಹಿರವಾಗಿದ್ದು ಅಂತಹ ವಸ್ತುಗಳು ಇದ್ದಲ್ಲಿ ಅವುಗಳನ್ನು ಸ್ಥಳೀಯ ಅರಣ್ಯಾಧಿಕಾರಿಗೆ ಒಪ್ಪಿಸಬೇಕು ಎಂದು ಘೋಷಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಹಾಗೂ ಈ ಸಂಬಂಧ ಅರಣ್ಯಾಧಿಕಾರಿಗಳು ಅರ್ಜಿದಾರರಿಗೆ ನೀಡಿದ್ದ ನೋಟಿಸ್‌ಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮಧ್ಯಂತರ ತಡೆ ನೀಡಿದೆ.

ಅಧಿಸೂಚನೆ ಮತ್ತು ನೋಟಿಸ್‌ ಪ್ರಶ್ನಿಸಿ ಕೊಡಗು ಜಿಲ್ಲೆ ವಿರಾಜಪೇಟೆಯ ಪಿ ಎ ರಂಜಿ ಪೂಣಚ್ಚ ಮತ್ತು ನಾಪೋಕ್ಲುವಿನ ಕೆ ಎ ಕುಟ್ಟಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಒಟ್ಟು ಏಳು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿರುವ ಪೀಠವು ವಿಚಾರಣೆಯನ್ನು ಮಾರ್ಚ್‌ 18ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ: ಹುಲಿ ಉಗುರು ಧರಿಸಿದ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರವು ವನ್ಯಜೀವಿಗಳಿಗೆ ಸಂಬಂಧಿಸಿದ ಮತ್ತು ಅವುಗಳ ದೇಹದ ಯಾವುದೇ ಭಾಗ ಅಥವಾ ಉತ್ಪನ್ನಗಳ ಸಂಗ್ರಹ ವನ್ಯಜೀವಿ ಸಂರಕ್ಷಣಾ ಕಾಯಿದೆ-1972ರ ಅಡಿ ಶಿಕ್ಷಾರ್ಹ ಅಪರಾಧ ಎಂದು 2024ರ ಜನವರಿ 10ರಂದು ಅಧಿಸೂಚನೆ ಹೊರಡಿಸಿತ್ತು.

ಯಾರಾದರೂ ತಮ್ಮ ಬಳಿ ವನ್ಯಜೀವಿಗಳ ದೇಹದ ಭಾಗಗಳನ್ನು ಒಳಗೊಂಡ ವಿಜಯ ಸಂಕೇತದ ಸ್ಮರಣಿಕೆಗಳು ಅಥವಾ ವನ್ಯಜೀವಿಯ ಸಂಸ್ಕರಿತ ಸ್ಮರಣಿಕೆಗಳು ಇದ್ದಲ್ಲಿ ಅವುಗಳನ್ನು ಸಮೀಪದ ಅರಣ್ಯಾಧಿಕಾರಿಗೆ ಒಪ್ಪಿಸಬೇಕು. ಇವುಗಳ ನಿಖರತೆ ಮತ್ತು ಕಾನೂನು ಬದ್ಧತೆಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿತ್ತು.

ಈ ನಿಟ್ಟಿನಲ್ಲಿ ಪ್ರಕರಣದ ಅರ್ಜಿದಾರರಿಗೆ ಮಡಿಕೇರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ನೋಟಿಸ್‌ ನೀಡಿ, ನೀವು ಮುಖ್ಯ ಸಮಾರಂಭಗಳಲ್ಲಿ ಸಾಂಪ್ರದಾಯಿಕ ಉಡುಗೆ–ತೊಡುಗೆ ಜೊತೆಗೆ ಸಾಲು ಸಾಲು ಹುಲಿ ಉಗುರುಗಳನ್ನು ಹೊಂದಿರುವ ಕತ್ತಿಯನ್ನು ನಿಮ್ಮ ಬಳಿ ಹೊಂದಿರುತ್ತೀರಿ. ಈ ಕುರಿತಂತೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು ಅದಕ್ಕೆ ಸಂಬಂಧಿಸಿದ ಛಾಯಾಚಿತ್ರಗಳೂ ನಮ್ಮ ಬಳಿ ಇವೆ. ಆದ್ದರಿಂದ, ನೀವು ಧರಿಸಿರುವ ಹುಲಿ ಉಗುರುಗಳನ್ನು ತಕ್ಷಣವೇ ಅರಣ್ಯ ಇಲಾಖೆ ಕಚೇರಿಗೆ ತಂದು ಒಪ್ಪಿಸಬೇಕು. ನಿಮ್ಮ ಬಳಿ ಹುಲಿ ಉಗುರುಗಳು ಇಲ್ಲವೆಂಬುದೇ ನಿಮ್ಮ ನಿಲುವಾದಲ್ಲಿ ಕಚೇರಿಗೆ ಹಾಜರಾಗಿ ಛಾಯಾಚಿತ್ರಗಳ ಬಗ್ಗೆ ಸ್ಪಷ್ಟನೆ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದರು. ಈ ನೋಟಿಸ್‌ ಮತ್ತು ಸರ್ಕಾರ ಹೊರಡಿಸಿದ ಅಧಿಸೂಚನೆ ಸಂವಿಧಾನದ 14, 19 ಮತ್ತು 21ನೇ ವಿಧಿಯ ಉಲ್ಲಂಘನೆ ಎಂದು ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.