Cinema Theatre 
ಸುದ್ದಿಗಳು

ಸಿನಿಮಾ ಟಿಕೆಟ್‌ಗೆ ₹200 ದರ ನಿಗದಿ ನಿಯಮಕ್ಕೆ ತಡೆ ನೀಡಿದ ಕರ್ನಾಟಕ ಹೈಕೋರ್ಟ್‌

“ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025ಕ್ಕೆ ತಡೆ ಕೋರಿರುವ ಮಧ್ಯಂತರ ಕೋರಿಕೆಯನ್ನು ಪುರಸ್ಕರಿಸಲಾಗಿದ್ದು, ಮುಂದಿನ ಆದೇಶದವರೆಗೆ ಇದು ಜಾರಿಯಲ್ಲಿರಲಿದೆ” ಎಂದು ನ್ಯಾಯಾಲಯ ಆದೇಶಿಸಿದೆ.

Bar & Bench

ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂಪಾಯಿ ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ತಡೆ ನೀಡಿದೆ.

ಸೆಪ್ಟೆಂಬರ್ 12ರಿಂದ ಅನ್ವಯವಾಗುವಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025 ಅನ್ನು ಪ್ರಶ್ನಿಸಿ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್‌ನ ಷೇರುದಾರ ಸಂತನು ಪೈ, ಕೀಸ್ಟೋನ್ ಎಂಟರ್ಟೈನ್ಮೆಂಟ್, ವಿ ಕೆ ಫಿಲ್ಮ್ಸ್ ಮತ್ತು ಸಿನಿಪ್ಲೆಕ್ಸ್‌ ಪ್ರೈವೇಟ್‌ ಲಿಮಿಟೆಡ್‌ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ಭಾಗವಾಗಿ ಮಧ್ಯಂತರ ಕೋರಿಕೆಗೆ ಸಂಬಂಧಿಸಿದ ವಿಚಾರಣೆ ನಡೆಸಿ, ಕಾಯ್ದಿರಿಸಿದ ಆದೇಶವನ್ನು ನ್ಯಾಯಮೂರ್ತಿ ರವಿ ಹೊಸಮನಿ ಅವರ ಏಕಸದಸ್ಯ ಪೀಠ ಇಂದು ಪ್ರಕಟಿಸಿತು.

“ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025ಕ್ಕೆ ತಡೆ ಕೋರಿರುವ ಮಧ್ಯಂತರ ಕೋರಿಕೆಯನ್ನು ಪುರಸ್ಕರಿಸಲಾಗಿದ್ದು, ಮುಂದಿನ ಆದೇಶದವರೆಗೆ ಇದು ಜಾರಿಯಲ್ಲಿರಲಿದೆ” ಎಂದು ನ್ಯಾಯಾಲಯ ಆದೇಶಿಸಿದೆ.

ಕಳೆದ ವಿಚಾರಣೆಯಲ್ಲಿ ಮಲ್ಟಿಪ್ಲೆಕ್ಸ್‌ ಅಸೋಸಿಯೇಶನ್‌ ಆಫ್‌ ಇಂಡಿಯಾ ಪರ ಹಿರಿಯ ವಕೀಲ ಮುಕುಲ್‌ ರೋಹಟ್ಗಿ ಅವರು “ಸಿನಿಮಾ ವೀಕ್ಷಕರು ಮತ್ತು ಸಿನಿಮಾ ಪ್ರದರ್ಶಕರ ಆಯ್ಕೆಯ ಹಕ್ಕಿನ ವಿಚಾರ ಇಲ್ಲಿದೆ. ಈ ಹಿಂದೆ ಸರ್ಕಾರವು ಇಂಥದ್ದೇ ಆದೇಶವನ್ನು ಹಿಂಪಡೆದಿತ್ತು. ಈಗ ಮತ್ತದೇ ಆದೇಶವನ್ನು ಹೊರಡಿಸಲಾಗಿದೆ. 2017ರಲ್ಲಿ ರಾಜ್ಯ ಸರ್ಕಾರ ಇಂಥದ್ದೇ ಆದೇಶ ಮಾಡಿತ್ತು. ಈಗ ನಿಯಮಗಳಿಗೆ ತಿದ್ದುಪಡಿ ಮಾಡಿ ಸಿನಿಮಾ ದರ ನಿಗದಿಪಡಿಸಲಾಗಿದ್ದು, ಇತಿಹಾಸ ಮರುಕಳಿಸಿದೆ” ಎಂದಿದ್ದರು.

“ಸಿನಿಮಾ ಹಾಲ್‌ಗಳನ್ನು ರೂಪಿಸಲು ಕೋಟ್ಯಂತರ ರೂಪಾಯಿ ವ್ಯಯಿಸಲಾಗಿದೆ. ಇಂತಿಷ್ಟೇ ಸೀಟುಗಳಿಗೆ ಸೀಮಿತಗೊಳಿಸಿ ಅಗತ್ಯ ಸೌಲಭ್ಯಗಳೊಂದಿಗೆ ಸಿನಿಮಾ ಹಾಲ್‌ಗಳನ್ನು ನಿರ್ಮಿಸಲಾಗಿದೆ. ಇಲ್ಲಿ ಸರ್ಕಾರವು 200 ರೂಪಾಯಿ ಅಥವಾ ಇಂತಿಷ್ಟೇ ದರಕ್ಕೆ ಟಿಕೆಟ್‌ ಮಾರಾಟ ಮಾಡಬೇಕು ಎಂದು ಹೇಳಲಾಗದು. ಕರ್ನಾಟಕ ಸಿನಿಮಾ (ನಿಯಂತ್ರಣ) (ತಿದ್ದುಪಡಿ) ನಿಯಮಗಳು-2025 ಅಡಿ ದರ ನಿಗದಿಯು ಕಾನೂನುಬಾಹಿರ ಕ್ರಮವಾಗಿದೆ” ಎಂದಿದ್ದರು.

ಇತರೆ ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಉದಯ್‌ ಹೊಳ್ಳ, ಧ್ಯಾನ್‌ ಚಿನ್ನಪ್ಪ ಮತ್ತು ಡಿ ಆರ್‌ ರವಿಶಂಕರ್‌ ಅವರು “ಯಾವುದೇ ದತ್ತಾಂಶ ಮತ್ತು ಕಾನೂನಿನ ನೆರವು ಇಲ್ಲದೇ ಸರ್ಕಾರವು ಟಿಕೆಟ್‌ ದರ ಮಿತಿ ಹೇರಿದೆ. ಇದು ಸ್ವೇಚ್ಛೆಯ ಕ್ರಮವಾಗಿದ್ದು, ಅರ್ಜಿದಾರರ ಹಕ್ಕನ್ನು ಕಸಿಯಲಾಗಿದೆ” ಎಂದಿದ್ದರು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಇಸ್ಮಾಯಿಲ್‌ ಜಬೀವುಲ್ಲಾ ಅವರು “ಸಾರ್ವಜನಿಕರ ಹಿತದೃಷ್ಟಿಯಿಂದ ಟಿಕೆಟ್‌ ದರ ನಿಗದಿಪಡಿಸಲಾಗಿದೆ. ಇದನ್ನು ಬಜೆಟ್‌ನಲ್ಲಿ ಸರ್ಕಾರ ಘೋಷಿಸಿತ್ತು. ಸಂವಿಧಾನದ ಅಡಿ ನಿಯಂತ್ರಣ ಕೈಗೊಳ್ಳಲು ಸರ್ಕಾರಕ್ಕೆ ಅವಕಾಶವಿದೆ. ಹೀಗಾಗಿ, ಆಕ್ಷೇಪಾರ್ಹವಾದ ಆದೇಶಕ್ಕೆ ತಡೆ ನೀಡಬಾರದು” ಎಂದು ಕೋರಿದ್ದರು.