Ananth Kumar Hegde & Karnataka HC 
ಸುದ್ದಿಗಳು

ಬಿಜೆಪಿ ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ವಿರುದ್ಧದ ಕೋಮು ದ್ವೇಷ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಹಿಂದೂಪರ ಸಂಘಟನೆಗಳ ಒಕ್ಕೂಟ ಸ್ವಾತಂತ್ರ್ಯ ಸೇನಾನಿಗಳಾದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಅವರ ಸ್ಮರಣಾರ್ಥ ಹಮ್ಮಿಕೊಂಡ ಬಲಿದಾನ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಚೋದನಕಾರಿ ಭಾಷೆ ಮಾಡಿದ ಆರೋಪದ

Bar & Bench

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ 2026ರ ಮಾರ್ಚ್ 23ರಂದು ಸ್ಥಳೀಯ ಹಿಂದೂಪರ ಸಂಘಟನೆಗಳ ಒಕ್ಕೂಟ ಸ್ವಾತಂತ್ರ್ಯ ಸೇನಾನಿಗಳಾದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಅವರ ಸ್ಮರಣಾರ್ಥ ಹಮ್ಮಿಕೊಂಡ ಬಲಿದಾನ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಮಾಜಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ದಾಖಲಾದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.

ಘಟನೆ ಸಂಬಂಧ ತಮ್ಮ ವಿರುದ್ಧ ಮದ್ದೂರು ಠಾಣಾ ಪೊಲೀಸರು ಮಾರ್ಚ್ 23ರಂದು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ದೂರು ಹಾಗೂ ಅದರ ಸಂಬಂಧ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಅನಂತಕುಮಾರ್ ಹೆಗಡೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ಪೀಠವು ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿತು. ಅಲ್ಲದೆ, ಅರ್ಜಿ ಸಂಬಂಧ ಮದ್ದೂರು ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಸುಯೋಗ್ ಹೆರಳೆ ವಕಾಲತ್ತು ವಹಿಸಿದ್ದರೆ, ಹಿರಿಯ ವಕೀಲ ಎಂ ಅರುಣ್ ಶ್ಯಾಮ್ ವಾದ ಮಂಡಿಸಿದರು.