Acting Chief Justice Alok Aradhe and Justice S Vishwajith Shetty, Karnataka High Court
Acting Chief Justice Alok Aradhe and Justice S Vishwajith Shetty, Karnataka High Court 
ಸುದ್ದಿಗಳು

ಶ್ರೀಲಂಕಾ ಪ್ರಜೆಗಳ ಅಕ್ರಮ ಬಂಧನ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್‌ ನೋಟಿಸ್‌

Bar & Bench

ಮಾನವ ಕಳ್ಳಸಾಗಾಣಿಕೆಯ ಸಂತ್ರಸ್ತರಾದ ಶ್ರೀಲಂಕಾದ 38 ಮಂದಿ ಪ್ರಜೆಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಬಂಧನದಲ್ಲಿಟ್ಟಿರುವುದಕ್ಕೆ ಆಕ್ಷೇಪಿಸಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಕೆಎಸ್‌ಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿ ಎಚ್ ಶಶಿಧರ್ ಶೆಟ್ಟಿ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು. ಪ್ರತಿವಾದಿಗಳಾದ ಗೃಹ ಇಲಾಖೆ, ರಾಷ್ಟ್ರೀಯ ತನಿಖಾ ದಳ (ಎನ್‌ಐಎ), ರಾಜ್ಯ ಗೃಹ ಇಲಾಖೆ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೊಳಿಸಿತು.

ಪರಪ್ಪನ ಅಗ್ರಹಾರದಲ್ಲಿರುವ ಶ್ರೀಲಂಕಾ ಪ್ರಜೆಗಳನ್ನು ತಕ್ಷಣವೇ ಬಂಧನ ಕೇಂದ್ರಕ್ಕೆ (ಡಿಟೆನ್ಷನ್ ಸೆಂಟರ್‌) ಸ್ಥಳಾಂತರಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿಬೇಕು. ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ತನಕ ಅವರನ್ನು ಇರಿಸಲು ರಾಜ್ಯದಲ್ಲಿ ಮೂಲಸೌಕರ್ಯ ಹೊಂದಿದ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಹಾಗೂ ಹೈಕೋರ್ಟ್ ನಿಗದಿಪಡಿಸಿದ ಕಾಲಮಿತಿಯಲ್ಲಿ ರಾಜ್ಯದಲ್ಲಿರುವ ಎಲ್ಲ ಅಕ್ರಮ ವಲಸಿಗರನ್ನು ಗಡಿಪಾರು ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು. ಎನ್‌ಐಎ ವಿಶೇಷ ನ್ಯಾಯಾಲಯ 2021ರ ಅಕ್ಟೋಬರ್‌ 30ರಂದು ನೀಡಿರುವ ಆದೇಶದ ಪ್ರಕಾರ ಬೆಂಗಳೂರಿನಲ್ಲಿ ಬಂಧನ ಕೇಂದ್ರ ಸ್ಥಾಪಿಸುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಆದೇಶಿಸಬೇಕು. ಶ್ರೀಲಂಕಾದ 38 ಮಂದಿ ಪ್ರಜೆಗಳ ಹೇಳಿಕೆಯನ್ನು ತ್ವರಿತವಾಗಿ ದಾಖಲಿಸಿಕೊಳ್ಳಲು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರಕರಣದ ಹಿನ್ನೆಲೆ: ಮಂಗಳೂರು ನಗರದ ಸೀಪೋರ್ಟ್ ಅತಿಥಿ ಗೃಹದಲ್ಲಿ ಶ್ರೀಲಂಕಾದ 25 ಪ್ರಜೆಗಳು ಪಾಸ್‌ಪೋರ್ಟ್ ಮತ್ತಿತರ ದಾಖಲೆಗಳಿಲ್ಲದೆ ಅನೇಕ ದಿನಗಳಿಂದ ವಾಸವಾಗಿದ್ದಾರೆ ಎಂಬ ಮಾಹಿತಿ ಆಧರಿಸಿ ಮಂಗಳೂರು ದಕ್ಷಿಣ ಪೊಲೀಸರು 2021ರ ಜೂನ್‌ 10ರಂದು ಅವರ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳು, ಪಾಸ್‌ಪೋರ್ಟ್ ಕಾಯಿದೆ, ವಿದೇಶಿಯರ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿದ್ದರು.

ಆದರೆ, ಅವರು ಅಕ್ರಮವಾಗಿ ಭಾರತಕ್ಕೆ ನುಸಳಿದವರಲ್ಲ. ಕೆನಡಾದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಏಜೆನ್ಸಿಯೊಂದು ಇವರನ್ನು ಕಳ್ಳಸಾಗಾಣಿಕೆ ಮಾಡಲು ಪ್ರಯತ್ನಿಸಿತ್ತು ಎನ್ನಲಾಗಿದೆ. ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಎಫ್‌ಐಆರ್ ದಾಖಲಾದ ಶ್ರೀಲಂಕಾ ಪ್ರಜೆಗಳ ಹೆಸರನ್ನು ಆರೋಪ ಪಟ್ಟಿಯಿಂದ ಕೈಬಿಟ್ಟು, ಅವರನ್ನು ಸೆಂಟ್ರಲ್ ಜೈಲಿನಿಂದ ಬಂಧನ ಕೇಂದ್ರಗಳಿಗೆ ಸ್ಥಳಾಂತರಿಸುವಂತೆ 2021ರ ಅಕ್ಟೋಬರ್‌ 30ರಂದು ನ್ಯಾಯಾಲಯ ಆದೇಶಿಸಿತ್ತು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಇತ್ತೀಚೆಗೆ ಕಾರಾಗೃಹಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಎಫ್‌ಐಆರ್ ದಾಖಲಿಸಿದ್ದ 25 ಮಂದಿ ಸೇರಿ ಒಟ್ಟು 38 ಶ್ರೀಲಂಕಾ ಪ್ರಜೆಗಳನ್ನು ಅಕ್ರಮವಾಗಿ ಬಂಧಿಸಿಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ. ಇದು ಎನ್‌ಐಎ ವಿಶೇಷ ನ್ಯಾಯಾಲಯದ ಆದೇಶ ಮತ್ತು ಮಾನವಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.