<div class="paragraphs"><p>Karnataka High Court</p></div>

Karnataka High Court

 
ಸುದ್ದಿಗಳು

ಬೀದಿ ಪ್ರಾಣಿಗಳ ಕಲ್ಯಾಣ, ಗೋಶಾಲೆಗಳಿಗಾಗಿ ಯೋಜನೆ ಜಾರಿಯಲ್ಲಿದೆಯೇ ಎಂದು ಸರ್ಕಾರಕ್ಕೆ ಹೈಕೋರ್ಟ್‌ ಪ್ರಶ್ನೆ

Bar & Bench

ಬೀದಿ ಪ್ರಾಣಿಗಳ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರವು ಯಾವುದಾದರೂ ಯೋಜನೆಯನ್ನು ಜಾರಿಗೊಳಿಸಿದೆಯೇ ಎಂಬುದನ್ನು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ.

ಹೈಕೋರ್ಟ್‌ ಕಾನೂನು ಸೇವೆಗಳ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

“ಬೀದಿ ಪ್ರಾಣಿಗಳನ್ನು ರಕ್ಷಿಸಲು ಮತ್ತು ಅವುಗಳಿಂದ ರೈತರ ಬೆಳೆ ರಕ್ಷಿಸುವ ಉದ್ದೇಶಕ್ಕಾಗಿ ಪ್ರತಿ ತಾಲ್ಲೂಕಿನಲ್ಲಿ ಗೋಶಾಲೆಗಳನ್ನು ತೆರೆಯುವ ಉದ್ದೇಶವನ್ನು ಸರ್ಕಾರ ಹೊಂದಿದೆಯೇ” ಎಂದು ಪೀಠವು ಪ್ರಶ್ನಿಸಿದೆ.

“ಬಿಡಾಡಿ ಪ್ರಾಣಿಗಳು ರೈತರ ಬೆಳೆಗಳನ್ನು ನಾಶ ಮಾಡುತ್ತವೆ. ಹೀಗಾಗಿ, ಸರ್ಕಾರ ಯೋಜನೆ ಜಾರಿಗೊಳಿಸುವ ಅಗತ್ಯವಿದೆ. ಒಂದು ಕಡೆ ಗೋ ಸಂರಕ್ಷಣೆ ಮಾಡಬೇಕು ಎಂದು ಹೇಳಲಾಗುತ್ತದೆ. ಈ ಪ್ರಾಣಿಗಳ ರಕ್ಷಣೆ ಅಗತ್ಯವಾಗಿದ್ದು, ಅವುಗಳನ್ನು ರಕ್ಷಿಸಲು ಏನು ಮಾಡಲಾಗುತ್ತಿದೆ” ಎಂದು ಪೀಠವು ಮೌಖಿಕವಾಗಿ ಪ್ರಶ್ನಿಸಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲೆ ಎಚ್‌ ವಾಣಿ ಅವರು “ಬಿಡಾಡಿ ಪ್ರಾಣಿಗಳ ಕಲ್ಯಾಣಕ್ಕಾಗಿ ಯಾವುದಾದರೂ ಯೋಜನೆ ಇದೆಯೇ ಎಂಬುದನ್ನು ಪರಿಶೀಲಿಸುತ್ತೇನೆ” ಎಂದರು.

ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು. ಈಗಾಗಲೇ ಇರುವ ಗೋಶಾಲೆಗಳಿಗೆ ಮೇವು, ನೀರು, ಸೂಕ್ತ ಸ್ಥಳ ಮತ್ತು ಆರೋಗ್ಯ ಸೌಲಭ್ಯ ಕಲ್ಪಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.