Kannada, NEP-2020 and Karnataka HC
Kannada, NEP-2020 and Karnataka HC 
ಸುದ್ದಿಗಳು

[ಕನ್ನಡ ಕಡ್ಡಾಯ] ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಹೈಕೋರ್ಟ್‌ ಆದೇಶ

Bar & Bench

ರಾಜ್ಯದ ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಮಾಡುವಂತೆ ಕೋರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕರ್ನಾಟಕ ಹೈಕೋರ್ಟ್‌ಗೆ ಸೋಮವಾರ ಮಧ್ಯಂತರ ಅರ್ಜಿ ಸಲ್ಲಿಸಿದೆ.

ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಡ್ಡಾಯ ಕಲಿಕೆಯ ಆದೇಶವನ್ನು ವಿರೋಧಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ, ಶ್ರೀ ಹಯಗ್ರೀವಾ ಟ್ರಸ್ಟ್‌, ವ್ಯೋಮಾ ಲಿಂಗ್ವಿಸ್ಟಿಕ್‌ ಲ್ಯಾಬ್ಸ್‌ ಫೌಂಡೇಶನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿ ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡಿರುವ ಭಾಷೆಯನ್ನು ಅಧ್ಯಯನ ಮುಂದುವರಿಸಲು ಸ್ವತಂತ್ರರು ಎಂದು ಆದೇಶ ಮಾಡಬೇಕು ಎಂದು ಕೋರಿ ಶಿವಕುಮಾರ್‌ ಕೆ ಜಿ ಸೇರಿದಂತೆ ಆರು ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಮತ್ತು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪರ ವಕೀಲರು ಮಧ್ಯಂತರ ಅರ್ಜಿ ಸಲ್ಲಿಸಿರುವ ವಿಚಾರ ಪ್ರಸ್ತಾಪಿಸಿದರು. ಪ್ರಾಧಿಕಾರವು ರಾಜ್ಯ ಸರ್ಕಾರದ ನಿಲುವನ್ನು ಬೆಂಬಲಿಸಲಾಗುವುದು. ಆದ್ದರಿಂದ ಕನ್ನಡ ಕಲಿಕೆ ಕಡ್ಡಾಯ ಆದೇಶದ ಅನುಷ್ಠಾನಕ್ಕೆ ನೀಡಿರುವ ತಡೆಯಾಜ್ಞೆ ತೆರವು ಮಾಡಬೇಕು ಎಂದು ಕೋರಿದರು.

ಅದಕ್ಕೆ ಪ್ರತಿಕ್ರಿಯಿಸಿದ ಪೀಠವು ಪ್ರಾಧಿಕಾರದ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ ಕಾಲಾವಕಾಶ ನೀಡಿ ವಿಚಾರಣೆಯನ್ನು ಸೆಪ್ಟೆಂಬರ್ ತಿಂಗಳಿಗೆ ಮುಂದೂಡಿತು.

2021ರ ಡಿಸೆಂಬರ್‌ 6ರಂದು ಮಧ್ಯಂತರ ಆದೇಶ ಮಾಡಿದ್ದ ಪೀಠವು ರಾಜ್ಯದಲ್ಲಿ ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯ ಮಾಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.