ಕೇಂದ್ರ ಸರ್ಕಾರ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್ಇಎಲ್) ಬೆಂಗಳೂರಿನ ಆವರಣದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಬಿಎಚ್ಇಎಲ್ ಆಡಳಿತ ಮಂಡಳಿಗೆ ಕರ್ನಾಟಕ ಹೈಕೋರ್ಟ್ ಬುಧವಾರ ನೋಟಿಸ್ ಜಾರಿಗೊಳಿಸಿದೆ.
ಬಿಎಚ್ಇಎಲ್ ನೌಕರರ ಕನ್ನಡ ಸಂಘ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠದ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠವು ಬಿಎಚ್ಇಎಲ್ ಮುಖ್ಯ ಆಡಳಿತಾಧಿಕಾರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಗುರುವಾರಕ್ಕೆ (ಅಕ್ಟೋಬರ್ 30) ಮುಂದೂಡಿತು.
ಇದಕ್ಕೂ ಮೊದಲು, ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕಳೆದ 42 ವರ್ಷಗಳಿಂದ ಬಿಎಚ್ಇಎಲ್ ಆವರಣದಲ್ಲಿ ಕನ್ನಡ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಇದಕ್ಕೆ ಪ್ರತಿ ವರ್ಷ ಆಡಳಿತ ಮಂಡಳಿ ಆರ್ಥಿಕ ನೆರವು ನೀಡುತ್ತಾ ಬಂದಿದೆ. ಆದರೆ, ಈ ಬಾರಿ ನಮ್ಮ ಮನವಿಯನ್ನು ಪರಿಗಣಿಸಲಾಗಿಲ್ಲ. ನವೆಂಬರ್ 1 ರಂದು ಬಿಎಚ್ಇಎಲ್ ಅವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ, ಕನ್ನಡ ಧ್ವಜಾರೋಹಣಕ್ಕೆ ಅನುಮತಿ ನೀಡಬೇಕು ಹಾಗೂ ಅದಕ್ಕೆ ಬೇಕಾದ ಅನುದಾನವನ್ನು ಮಂಜೂರು ಮಾಡಲು ಆಡಳಿತ ಮಂಡಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿದರು.
ಇದಕ್ಕೆ ಬಿಎಚ್ಇಎಲ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ಅಲ್ಲಿ ಎರಡು ಸಂಘಗಳಿವೆ. ಈಗ ಅರ್ಜಿ ಸಲ್ಲಿಸಿರುವ ಸಂಘವು 2019ರಿಂದ ನೋಂದಣಿ ನವೀಕರಣ ಮಾಡಿಸಿಲ್ಲ. ವರ್ಷ ವರ್ಷ ಆರ್ಥಿಕ ವಹಿವಾಟಿನ ಲೆಕ್ಕ ಸಹ ಕೊಡುತ್ತಿಲ್ಲ ಎಂದು ಪೀಠಕ್ಕೆ ತಿಳಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠವು ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.