ವಿವಾಹ ವಿಚ್ಚೇದನ ಕೋರಿಕೆ ಪ್ರಕರಣದ ವಿಚಾರಣೆಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು ಎಂದು ಕೋರಲಾಗಿದ್ದ ಪತಿಯ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ವಜಾಗೊಳಿಸಿದೆ.
ಪತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಡಾ. ಚಿಲ್ಲಕೂರು ಸುಮಲತಾ ಅವರ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಇಂತಹ ಪ್ರಕರಣಕ್ಕೆ ಕಟ್ಟುನಿಟ್ಟಿನ ಗಡುವು ವಿಧಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
“ಸಾಕ್ಷ್ಯಾಧಾರಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರಿಯಾದ ಮತ್ತು ನ್ಯಾಯಸಮ್ಮತ ತೀರ್ಮಾನಕ್ಕೆ ಬರುವುದು ಸುಲಭದ ಕೆಲಸವಲ್ಲ. ಪ್ರತಿಯೊಬ್ಬ ನ್ಯಾಯಾಂಗ ಅಧಿಕಾರಿಯೂ ತನ್ನ ನ್ಯಾಯಾಲಯದ ಮಾಲೀಕನಾಗಿದ್ದು, ಪ್ರತಿ ಪ್ರಕರಣವೂ ತನ್ನದೇ ವಿಭಿನ್ನತೆ ಹೊಂದಿರುತ್ತದೆ. ಹೀಗಾಗಿ, ಗಡುವು ವಿಧಿಸಿದರೆ ವಿಚಾರಣಾಧೀನ ನ್ಯಾಯಾಲಯದ ನ್ಯಾಯಾಧೀಶರು ಅನಗತ್ಯ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ” ಎಂದು ಪೀಠ ಅಭಿಪ್ರಾಯಪಟ್ಟಿದೆ.
“ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಈಗಾಗಲೇ ಪ್ರಕರಣವನ್ನು ಸೂಕ್ತ ರೀತಿಯಲ್ಲಿ, ಕ್ಷಿಪ್ರಗತಿಯಲ್ಲಿ ವಿಚಾರಣೆ ನಡೆಸುತ್ತಿರುವುದು ಕಂಡುಬಂದಿದೆ. ಹಾಲಿ ಪ್ರಕರಣ ಸಾಕ್ಷಿಗಳ ಪಾಟಿ ಸವಾಲಿನ ಹಂತದಲ್ಲಿದ್ದು ಯಾವುದೇ ಒತ್ತಡ ಹೇರಲಾಗದು” ಎಂದು ತಿಳಿಸಿದೆ.