ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗ ಈಚೆಗೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಆರ್ಸಿಬಿಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ, ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ನ ನಿರ್ದೇಶಕ ಸುನೀಲ್ ಮ್ಯಾಥ್ಯೂ, ಡಿಎನ್ಎನ ಮ್ಯಾನೇಜರ್ ಕಿರಣ್ ಕುಮಾರ್ ಮತ್ತು ಸಮಂತ್ ಮಾವಿನಕೆರೆ ಅವರಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ತಕ್ಷಣ ಬಿಡುಗಡೆ ಮಾಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶಿಸಿದೆ.
ತಮ್ಮ ಬಂಧನ ಅಕ್ರಮವಾಗಿರುವುದರಿಂದ ತಕ್ಷಣ ಬಿಡುಗಡೆ ಮಾಡುವ ಮೂಲಕ ಮಧ್ಯಂತರ ಪರಿಹಾರ ನೀಡಬೇಕು ಎಂಬುದರ ಸಂಬಂಧ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠವು ಇಂದು ಆದೇಶ ಪ್ರಕಟಿಸಿತು.
ಅರ್ಜಿದಾರರು ನೇರ ಅಥವಾ ಪರೋಕ್ಷವಾಗಿ ಸಾಕ್ಷಿಗಳಿಗೆ ಬೆದರಿಕೆ ಅಥವಾ ಸಾಕ್ಷಿಗಳನ್ನು ತಿರುಚಬಾರದು. ಮ್ಯಾಜಿಸ್ಟೀರಿಯಲ್ ಅಥವಾ ನ್ಯಾಯಾಂಗ ವಿಚಾರಣಾ ಆಯೋಗ ನಡೆಸುವ ತನಿಖೆಗೆ ಅರ್ಜಿದಾರರು ಸಹಕರಿಸಬೇಕು. ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಭದ್ರತೆಯನ್ನು ಅರ್ಜಿದಾರರು ಒದಗಿಸಬೇಕು. ಬಿಡುಗಡೆಯಾದ ಎರಡು ವಾರಗಳಲ್ಲಿ ವಿಚಾರಣಾಧೀನ ನ್ಯಾಯಾಲಯದ ವಶಕ್ಕೆ ಅರ್ಜಿದಾರರು ಪಾಸ್ಪೋರ್ಟ್ ಒದಗಿಸಬೇಕು. ನ್ಯಾಯಾಲಯದ ಅನುಮತಿ ಇಲ್ಲದೇ ಅರ್ಜಿದಾರರು ಹೊರ ಹೋಗುವಂತಿಲ್ಲ ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿ ಆದೇಶಿಸಿದೆ.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು “ಎಫ್ಐಆರ್ ದಾಖಲಾಗುತ್ತಿದ್ದ ಬೆನ್ನಿಗೇ ನಿಖಿಲ್ ಸೋಸಲೆ ಅವರು ಜೂನ್ 5ರ ರಾತ್ರಿ 10.56ಕ್ಕೆ ವಿಮಾನದ ಟಿಕೆಟ್ ಕಾಯ್ದಿರಿಸಿದ್ದು, ಬೆಳಗಿನ ಜಾವ 4.30ಕ್ಕೆ ವಿಮಾನ ನಿಲ್ದಾಣದಲ್ಲಿದ್ದಾಗ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಸ್ತುವಾರಿ ಡಿಸಿಪಿ ಅಕ್ಷಯ್ ಮಚೀಂದ್ರ ಸೂಚನೆಯ ಮೇರೆಗೆ ಸಿಸಿಬಿ ಪೊಲೀಸರು ಸೋಸಲೆಯನ್ನು ವಶಕ್ಕೆ ಪಡೆದು ಕಬ್ಬನ್ ಪಾರ್ಕ್ ಪೊಲೀಸರಿಗೆ ಒಪ್ಪಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್ಪೆಕ್ಟರ್ ರವಿ ಅವರು ಸೋಸಲೆಯನ್ನು ಬಂಧಿಸಿದ್ದಾರೆಯೇ ವಿನಾ ಸಿಸಿಬಿ ಅಧಿಕಾರಿಗಳಲ್ಲ” ಎಂದು ವಾದಿಸಿದ್ದರು.
“ಬಂಧಿತರೆಲ್ಲರಿಗೂ 10 ಗಂಟೆಯ ಒಳಗೆ ಬಂಧನ ಸೂಚನೆ, ಕಾರಣ, ಆಧಾರ ಸೇರಿ ಎಲ್ಲಾ ದಾಖಲೆಗಳನ್ನು ಒದಗಿಸುವ ಮೂಲಕ ಡಿ ಕೆ ಬಸು ಪ್ರಕರಣದಲ್ಲಿನ ನಿರ್ದೇಶನಗಳನ್ನು ಪಾಲಿಸಲಾಗಿದೆ. ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಐಡಿಗೆ ಜೂನ್ 5ರಂದು ವರ್ಗಾಯಿಸಲಾಗಿದೆ. ಆದರೆ, ಸಿಐಡಿ ತನಿಖೆ ಜವಾಬ್ದಾರಿ ತೆಗೆದುಕೊಂಡಿರುವುದು ಜೂನ್ 6ರಂದು. ಈ ನಡುವೆ, ಕಬ್ಬನ್ ಪಾರ್ಕ್ ಪೊಲೀಸರು ಕಾನೂನಿನ ಅನ್ವಯ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧನದಲ್ಲಿ ಯಾವುದೇ ತೆರನಾದ ಅಕ್ರಮ ನಡೆದಿಲ್ಲವಾದ್ದರಿಂದ ಅವರನ್ನು ಬಿಡುಗಡೆ ಮಾಡಬಾರದು” ಎಂದು ಕೋರಿದ್ದರು.
“ಸಾಕ್ಷ್ಯ ನಾಶ, ಅಭಿಮಾನಿಗಳಿಗೆ ಸರಿಯಾದ ರೀತಿಯಲ್ಲಿ ಉಚಿತ ಟಿಕೆಟ್ ಮಾಹಿತಿ ನೀಡದಿರುವುದು; ಜನಸಂದಣಿಯನ್ನು ನಿಯಂತ್ರಿಸಲು ಸೂಕ್ತ ವ್ಯವಸ್ಥೆ, ಅಗ್ನಿಶಾಮಕ ದಳದ ವ್ಯವಸ್ಥೆ, ಬೆಳವಣಿಗೆಗಳ ಕುರಿತು ಜನರಿಗೆ ನಿರಂತರ ಮಾಹಿತಿ ಕೊರತೆ ಸೇರಿದಂತೆ 12 ಕಾರಣಗಳ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಚಾರಕ್ಕಾಗಿ, ಬ್ರ್ಯಾಂಡ್ ಮೌಲ್ಯ ಹೆಚ್ಚಿಸಲು ಜನರ ಪ್ರಾಣಕ್ಕೆ ಕುತ್ತು ತಂದು, ಎಫ್ಐಆರ್ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಲು ಆರೋಪಿಗಳು ಪ್ರಯತ್ನಿಸಿದ್ದಾರೆ. ಇದಕ್ಕಾಗಿ ನಾಲ್ವರನ್ನು ಬಂಧಿಸಲಾಗಿದೆ” ಎಂದು ವಿವರಿಸಿದ್ದರು.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಂದೇಶ್ ಚೌಟ ಅವರು “ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನದ ನಂತರ ಆರೋಪಿಗಳನ್ನು ಬಂಧಿಸಲಾಗಿದೆ. ಸರ್ಕಾರದ ಆಕ್ಷೇಪಣೆಯಲ್ಲಿ ಈ ಕುರಿತು ನಿರ್ದಿಷ್ಟವಾಗಿ ನಿರಾಕರಿಸಲಾಗಿಲ್ಲ. ದೀಪಕ್ ಮಹಾಜನ್ ವರ್ಸಸ್ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ವ್ಯಕ್ತಿ ಸ್ವಾತಂತ್ರ್ಯ ನಿರಾಕರಿಸುವುದು ಬಂಧನವಾಗುತ್ತದೆ. ಇಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವುದು ಬಂಧನವೇ ಆಗುತ್ತದೆ. ಆ ಸಂದರ್ಭದಲ್ಲಿ ಬಂಧನದ ಆಧಾರ ನೀಡಬೇಕಿತ್ತು. ಇದನ್ನು ನೀಡದಿರುವುದು ಬಂಧನವನ್ನು ಅಕ್ರಮವಾಗಿಸುತ್ತದೆ” ಎಂದಿದ್ದರು.
“ಸಿಸಿಬಿ ಪೊಲೀಸರು ಸೋಸಲೆಯನ್ನು ವಶಕ್ಕೆ ಪಡೆದಾಗ ನೀಡಿದ ಸೂಚನೆಯಲ್ಲಿ ಸಮಯ ಉಲ್ಲೇಖಿಸಿಲ್ಲ. ಬಂಧನ ಸಮಯವನ್ನು ಉಲ್ಲೇಖಿಸಬೇಕಿರುವುದು ತನಿಖಾಧಿಕಾರಿಯೋ ಅಥವಾ ಆರೋಪಿಯೋ? ಇನ್ಸ್ಪೆಕ್ಷನ್ ಮೆಮೊದಲ್ಲಿಯೂ ಸಮಯ ಉಲ್ಲೇಖವಿಲ್ಲ. ಬಂಧನದ ಸಮಯದಲ್ಲಿ ಒದಗಿಸಬೇಕಾದ ದಾಖಲೆಗಳನ್ನು 10 ಗಂಟೆ ವಿಳಂಬವಾಗಿ ಒದಗಿಸಿದ್ದಾರೆ. ಕಡ್ಡಾಯವಾಗಿ ನೀಡಬೇಕಿರುವ ದಾಖಲೆಗಳನ್ನು ಒದಗಿಸದಿರುವುದು ಕಾನೂನಿಗೆ ವಿರುದ್ಧವಾದ ಕ್ರಮ” ಎಂದಿದ್ದರು.
ಜೂನ್ 4ರಂದು ಕಾಲ್ತುಳಿತದಲ್ಲಿ 11 ಜನ ಮೃತಪಟ್ಟು, 50ಕ್ಕೂ ಹೆಚ್ಚು ಜನರು ಗಾಯಗೊಳ್ಳಲು ಆರ್ಸಿಬಿ ಮತ್ತು ಡಿಎನ್ಎ ಸೂಕ್ತ ರೀತಿಯಲ್ಲಿ ಜನ ಸಂದಣಿ ನಿರ್ವಹಣೆ ಮಾಡದಿರುವುದೇ ಕಾರಣ ಎಂದು ಜೂನ್ 6ರಂದು ನಿಖಿಲ್, ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸಮಂತ್ ಅವರನ್ನು ಪೊಲೀಸರು ಬಂಧಿಸಿದ್ದರು. ಅಂದೇ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಈ ನಡುವೆ, ಪೊಲೀಸ್ ಕಸ್ಟಡಿಗೆ ಪಡೆಯಲು ಸಿಸಿಬಿ ಪ್ರಯತ್ನಿಸಿದ್ದರೂ ಅದು ಫಲಿಸಿರಲಿಲ್ಲ.