ಸುದ್ದಿಗಳು

ಸಚಿವೆ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ: ಶಾಸಕ ಸಿ ಟಿ ರವಿ ತಕ್ಷಣ ಬಿಡುಗಡೆಗೆ ಆದೇಶಿಸಿದ ಹೈಕೋರ್ಟ್‌

“ದೂರುದಾರರು ಮತ್ತು ಅರ್ಜಿದಾರರು ಇಬ್ಬರೂ ಜನಪ್ರತಿನಿಧಿಗಳು. ದುರದೃಷ್ಟಕರ ಬೆಳವಣಿಗೆ ಎಂದರೆ ಅವರಿಬ್ಬರೂ ನಮ್ಮ ನಾಯಕರು!” ಎಂದು ಬೇಸರ ವ್ಯಕ್ತಪಡಿಸಿದ ನ್ಯಾಯಾಲಯ.

Bar & Bench

ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ವಿಧಾನ ಪರಿಷತ್‌ನಲ್ಲಿ ಅಶ್ಲೀಲ ಪದ ಬಳಕೆಯ ಆರೋಪದ ಮೇಲೆ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ ಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಮಧ್ಯಂತರ ಆದೇಶ ಮಾಡಿದೆ. ಅಲ್ಲದೇ, ತನಿಖಾಧಿಕಾರಿ ಸೂಚಿಸಿದಾಗ ರವಿ ತನಿಖೆಗೆ ಹಾಜರಾಗಬೇಕು ಎಂಬ ಷರತ್ತನ್ನು ನ್ಯಾಯಾಲಯ ವಿಧಿಸಿದೆ.

ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ತನ್ನನ್ನು ಅಕ್ರಮವಾಗಿ ಬಂಧಿಸಿ, ಕಾನೂನುಬಾಹಿರವಾಗಿ ನಡೆದುಕೊಂಡಿರುವುದರಿಂದ ತಕ್ಷಣ ಬಿಡುಗಡೆಗೆ ಆದೇಶಿಸಬೇಕು ಎಂದು ಕೋರಿ ಸಿ ಟಿ ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ಜಿ ಉಮಾ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ರಾಜ್ಯದ ಜನತೆಯ ದೃಷ್ಟಿಯಿಂದ ಆರೋಪಿತ ಘಟನೆಯು ಅತ್ಯಂತ ದುರದೃಷ್ಟಕರವಾಗಿದ್ದು, ಸಿಆರ್‌ಪಿಸಿ ಸೆಕ್ಷನ್‌ 41ಎ (ಪೊಲೀಸ್‌ ನೋಟಿಸ್‌ ನೀಡುವುದು) ಅಡಿ ಪೊಲೀಸರು ಪ್ರಕ್ರಿಯೆ ಪಾಲಿಸಬೇಕಿತ್ತು. ರವಿ ಅವರು ವಿಧಾನ ಪರಿಷತ್‌ ಸದಸ್ಯರಾಗಿದ್ದು, ಅವರು ತನಿಖೆಗೆ ಲಭ್ಯವಾಗುವುದಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ. ಬೆಳಗಾವಿಯ ಸುವರ್ಣ ಸೌಧದ ವಿಧಾನ ಪರಿಷತ್‌ನಲ್ಲಿ ನಡೆದಿರುವ ಘಟನೆಯ ಬಗ್ಗೆ ಸಭಾಪತಿಗಳು ಏನನ್ನೂ ಉಲ್ಲೇಖಿಸಿಲ್ಲ. ರವಿ ಅವರು ತಕ್ಷಣ ಬಿಡುಗಡೆ ಸಂಬಂಧಿತ ಮಧ್ಯಂತರ ಕೋರಿಕೆಗೆ ಅರ್ಹರಾಗಿದ್ದಾರೆ. ಹೀಗಾಗಿ, ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು” ಎಂದು ನ್ಯಾಯಾಲಯವು ಆದೇಶಿಸಿದೆ.

ಇದಕ್ಕೂ ಮುನ್ನ, ರವಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಂದೇಶ್‌ ಚೌಟ ಅವರು “ರವಿ ಅವರನ್ನು ಬೆಳಗಾವಿ ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ. ಪೊಲೀಸ್‌ ನೋಟಿಸ್‌ ನೀಡುವುದು ಅಥವಾ ಅವರ ಬಂಧನಕ್ಕೆ ಆಧಾರ ಒದಗಿಸಿಲ್ಲ. ಇದು ಸುಪ್ರೀಂ ಕೋರ್ಟ್‌ ತೀರ್ಪುಗಳಿಗೆ ವಿರುದ್ಧವಾಗಿದೆ. ರವಿ ಅವರನ್ನು ಬಂಧಿಸಿದ ಬಳಿಕ ಪೊಲೀಸರು ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಅರ್ನಾಬ್‌ ಗೋಸ್ವಾಮಿ ಪ್ರಕರಣದ ಹಿನ್ನೆಲೆಯಲ್ಲಿ ತಕ್ಷಣ ಬಿಡುಗಡೆಗೆ ರವಿ ಅರ್ಹರಾಗಿದ್ದಾರೆ” ಎಂದರು.

ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ‌ ವಿಶೇಷ ಸರ್ಕಾರಿ ಅಭಿಯೋಜಕ -1 ಎಸ್‌ ಎ ಬೆಳ್ಳಿಯಪ್ಪ ಅವರು “ರವಿ ಅವರನ್ನು ಟ್ರಾನ್ಸಿಟ್‌ ರಿಮ್ಯಾಂಡ್‌ ಮೇಲೆ ಬೆಂಗಳೂರಿಗೆ ಕರೆತರಲಾಗುತ್ತಿದೆ. ಜಾಮೀನು ಕೋರಿ ಅವರು ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಬಾರದು. ಬಂಧನ ಅಕ್ರಮ ಎನ್ನುವುದಾದರೆ ಅವರು ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಲಿ. ಪೊಲೀಸರ ಜೊತೆ ರವಿ ಅವರು ಅಸಭ್ಯವಾಗಿ ನಡೆದುಕೊಂಡಿದ್ದಾರೆ. ತಾನೊಬ್ಬ ಸ್ವಾತಂತ್ರ್ಯ ಹೋರಾಟಗಾರ ಎಂಬಂತೆ ಭಾವಿಸದಂತಿದೆ ಅವರ ವರ್ತನೆ” ಎಂದು ಆಕ್ಷೇಪಿಸಿದರು.

ಈ ಮಧ್ಯೆ ಪೀಠವು “ರವಿ ಅವರನ್ನು ವಶಕ್ಕೆ ಪಡೆದಿರುವ ರೀತಿಯ ಬಗ್ಗೆ ಏನು ಹೇಳುತ್ತೀರಿ? ಗಂಭೀರ ಅಪರಾಧ ಪ್ರಕರಣಗಳಲ್ಲೂ ಪೊಲೀಸರು ವರ್ಷಗಟ್ಟಲೆ ಬಂಧಿಸುವುದಿಲ್ಲ. ವ್ಯಕ್ತಿಯ ಸ್ವಾತಂತ್ರ್ಯ ಹರಣವಾದಾಗ ಅದನ್ನು ರಕ್ಷಿಸುವುದು ಹೈಕೋರ್ಟ್‌ ಕರ್ತವ್ಯ. ರವಿ ಅವರನ್ನು ವಶಕ್ಕೆ ಪಡೆದಿರುವ ರೀತಿ, ಅವರು ಗಾಯಗೊಂಡಿರುವ ರೀತಿಗೆ ಏನು ಉತ್ತರಿಸುತ್ತೀರಿ. ದೂರುದಾರರು ಮತ್ತು ಅರ್ಜಿದಾರರು ಇಬ್ಬರೂ ಜನಪ್ರತಿನಿಧಿಗಳು. ದುರದೃಷ್ಟಕರ ಬೆಳವಣಿಗೆ ಎಂದರೆ ಅವರಿಬ್ಬರೂ ನಮ್ಮ ನಾಯಕರು!” ಎಂದು ಪೀಠವು ಮೌಖಿಕವಾಗಿ ಬೇಸರ ವ್ಯಕ್ತಪಡಿಸಿತು.

ಅಂತಿಮವಾಗಿ ರವಿ ಅವರನ್ನು ಬಿಡುಗಡೆಗೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.