Karnataka High Court
Karnataka High Court 
ಸುದ್ದಿಗಳು

5 ಮತ್ತು 8ನೇ ತರಗತಿಗಳಿಗೆ ಇಲ್ಲ ಮಂಡಳಿ ಪರೀಕ್ಷೆ; ಶಿಕ್ಷಣ ಇಲಾಖೆ ಸುತ್ತೋಲೆ ರದ್ದುಪಡಿಸಿದ ಹೈಕೋರ್ಟ್

Bar & Bench

ಮಹತ್ವದ ತೀರ್ಪೊಂದರಲ್ಲಿ ಕರ್ನಾಟಕ ಹೈಕೋರ್ಟ್‌ ರಾಜ್ಯ ಪಠ್ಯಕ್ರಮದ ಐದು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ (ಪಬ್ಲಿಕ್‌) ನಡೆಸಲು ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಸಕ್ತ ಸಾಲಿಗೆ ಅನ್ವಯಿಸುವಂತೆ ರದ್ದುಪಡಿಸಿದೆ.

ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಏಕ ಸದಸ್ಯ ಪೀಠವು ಶಿಕ್ಷಣ ಇಲಾಖೆಯು ಹೊರಡಿಸಿರುವ ಆಕ್ಷೇಪಿತ ಸುತ್ತೋಲೆಯು ಕಡ್ಡಾಯ ಶಿಕ್ಷಣ ಹಕ್ಕಿನ ನಿಯಮಾವಳಿಗೆ ಅನುಗುಣವಾಗಿ ಇಲ್ಲ ಎಂದು ಹೇಳಿ ಅವುಗಳನ್ನು ರದ್ದುಪಡಿಸಿತು. ಶಿಕ್ಷಣ ಹಕ್ಕು ಕಾಯಿದೆಯ 38(4)ರ ಅಡಿ ಯಾವುದೇ ನಿಯಮ ಅಥವಾ ಸುತ್ತೋಲೆಗಳನ್ನು ಶಾಸನ ಸಭೆಯ ಮುಂದೆ ಶೀಘ್ರ ಇರಿಸಬೇಕು ಎಂದ ಪೀಠವು ಪ್ರಸಕ್ತ ಪ್ರಕರಣದಲ್ಲಿ ಇದು ಪಾಲನೆಯಾಗದಿರುವುದನ್ನು ಗಮನಿಸಿತು.

ಇದೇ ವೇಳೆ ನ್ಯಾಯಾಲಯವು ಶಿಕ್ಷಣ ಹಕ್ಕು ಕಾಯಿದೆಯ ನಿಯಮಾವಳಿಗೆ ಅನುಸಾರವಾಗಿ ಇಲಾಖೆಯು ನೂತನ ಮಾದರಿಯ ಮೌಲ್ಯಮಾಪನ ವಿಧಾನವನ್ನು ಅನುಷ್ಠಾನಗೊಳಿಸಲು ಯಾವುದೇ ಅಡ್ಡಿ ಇಲ್ಲ ಎಂದೂ ಸ್ಪಷ್ಟಪಡಿಸಿತು.

2022-23ನೇ ಶೈಕ್ಷಣಿಕ ಸಾಲಿನಲ್ಲಿ 5 ಮತ್ತು 8ನೇ ತರಗತಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ 2022ರ ಡಿಸೆಂಬರ್‌ 12 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಕ್ರಮ ಪ್ರಶ್ನಿಸಿ ಅರ್ಜಿದಾರ ಸಂಘವು ತಕರಾರು ಅರ್ಜಿ ಸಲ್ಲಿಸಿತ್ತು. ಅದನ್ನು ಫೆಬ್ರವರಿ 23ರಂದು ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠವು ಸರ್ಕಾರದ ನಿರ್ಧಾರಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು.

ಇದನ್ನು ಪ್ರಶ್ನಿಸಿ ಅರ್ಜಿದಾರರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಶೈಕ್ಷಣಿಕ ವರ್ಷದ ಅಂತ್ಯದಲ್ಲಿ ಮೌಲ್ಯಮಾಪನ ಬದಲಾವಣೆಗೆ ಸರ್ಕಾರ ಕೈಗೊಂಡಿರುವ ನಿರ್ಣಯವು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬುದು ಸಂಘದ ಆಕ್ಷೇಪಣೆಯಾಗಿತ್ತು.

ಮೇಲ್ಮನವಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರಸಕ್ತ ಶೈಕ್ಷಣಿಕ ಸಾಲಿನ ಐದು ಮತ್ತು ಎಂಟನೇ ತರಗತಿಗಳ ಪರೀಕ್ಷೆಗಳು ಮಾರ್ಚ್‌ 13ರಂದು ನಡೆಯಲಿದೆ. ಹೀಗಾಗಿ, ಅರ್ಜಿಗಳನ್ನು ಶೀಘ್ರ ವಿಚಾರಣೆ ನಡೆಸಿ ಇತ್ಯರ್ಥಪಡಿಸಬೇಕು ಎಂದು ಏಕ ಸದಸ್ಯ ಪೀಠಕ್ಕೆ ಸೂಚಿಸಿತ್ತು.