Currency 
ಸುದ್ದಿಗಳು

ಮೈಕ್ರೊ ಫೈನಾನ್ಸ್‌ ಸುಗ್ರೀವಾಜ್ಞೆ ಸಿಂಧುತ್ವ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌

ಸುಗ್ರೀವಾಜ್ಞೆಯ ಸಿಂಧುತ್ವ, ಮೋಟಾರು ವಾಹನ/ಆಸ್ತಿ ಹಣಕಾಸು ಉದ್ಯಮವು ಸುಗ್ರೀವಾಜ್ಞೆಯಿಂದ ಹೊರಗಿವೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಲು ನಿರ್ದೇಶಿಸುವಂತೆ ಕೋರಿ ಕರ್ನಾಟಕ ಹೈರ್‌ ಪರ್ಚೇಸ್‌ ಅಸೋಶಿಯೇಶನ್‌ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಪೀಠ.

Bar & Bench

ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಸುಗ್ರೀವಾಜ್ಞೆಯ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ಎತ್ತಿ ಹಿಡಿದಿದೆ.

ಸುಗ್ರೀವಾಜ್ಞೆಯ ಸಿಂಧುತ್ವವನ್ನು ಪ್ರಶ್ನಿಸಿ ಹಾಗೂ ಮೋಟಾರು ವಾಹನ/ಆಸ್ತಿಗೆ ಹಣಕಾಸು ಸೌಲಭ್ಯ ಒದಗಿಸುವ ಉದ್ಯಮವು ಸುಗ್ರೀವಾಜ್ಞೆಯಿಂದ ಹೊರಗಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಲು ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಕರ್ನಾಟಕ ಹೈರ್‌ ಪರ್ಚೇಸ್‌ ಅಸೋಶಿಯೇಶನ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿತು. ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು “ಮೂರು ಲಕ್ಷ ವಾರ್ಷಿಕ ಆದಾಯ ಇರುವ ಕುಟುಂಬಗಳಿಗೆ ಯಾವುದೇ ಭದ್ರತೆ ಇಲ್ಲದೆ ಸಾಲ ನೀಡುವವರಿಗೆ ಸುಗ್ರೀವಾಜ್ಞೆ ಅನ್ವಯಿಸುತ್ತದೆ. ಹಾಲಿ ಪ್ರಕರಣದಲ್ಲಿ ಬಾದಿತರಾರೂ ನ್ಯಾಯಾಲಯದ ಮುಂದೆ ಬಂದಿಲ್ಲ. ಅರ್ಜಿದಾರರು ಕಾಯಿದೆ ತಮಗೆ ಅನ್ವಯಿಸುತ್ತದೆಯೇ ಇಲ್ಲವೇ ಎಂಬುದರ ಸ್ಪಷ್ಟನೆ ಕೋರಲು ನ್ಯಾಯಾಲಯ ಮುಂದೆ ಬಂದಿದ್ದಾರೆ. ಆರ್‌ಬಿಐ ಸುತ್ತೋಲೆ ಏನು ಹೇಳುತ್ತದೆ ಅದನ್ನು ಮಾಡಲಾಗಿದೆ. ಅರ್ಜಿದಾರರಿಗೂ ಸುಗ್ರೀವಾಜ್ಞೆಗೂ ಯಾವುದೇ ಸಂಬಂಧವಿಲ್ಲ. ಸಾಲದಾತರ ಕಿರುಕುಳದಿಂದಾಗಿ 17 ಮಂದಿ ಸಾವನ್ನಪ್ಪಿದ್ದಾರೆ. ಆ ಸಂಬಂಧ ಎಫ್‌ಐಆರ್‌ ದಾಖಲಾಗಿವೆಯಷ್ಟೆ. ಬೇರೆ ಯಾವುದೇ ತೆರನಾದ ಎಫ್‌ಐಆರ್‌ ದಾಖಲಿಸಲಾಗಿಲ್ಲ. ಎನ್‌ಬಿಎಫ್‌ಸಿ ಮತ್ತು ಆರ್‌ಬಿಐ ಕಾಯಿದೆ ವ್ಯಾಪ್ತಿಯಿಂದ ಹೊರಗಿರುವವರಿಗೆ ಸುಗ್ರೀವಾಜ್ಞೆ ಅನ್ವಯಿಸುತ್ತದೆ” ಎಂದಿದ್ದರು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಉದಯ್‌ ಹೊಳ್ಳ ಅವರು “ಸಂಕಷ್ಟದಲ್ಲಿರುವ ಕುಟುಂಬಗಳನ್ನು ರಕ್ಷಿಸುವ ಉದ್ದೇಶ ಸರ್ಕಾರದ್ದಾಗಿದ್ದರೆ ಸಾಲ ನೀಡುವವರು, ಸಂಸ್ಥೆಗಳು ಮತ್ತು ಸಂಘಗಳನ್ನು ಏಕೆ ಸೇರಿಸಲಾಗಿದೆ. ಸುಗ್ರೀವಾಜ್ಞೆಯಲ್ಲಿ ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ. ವಿವೇಚನಾರಹಿತವಾಗಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಆರ್‌ಬಿಐ ನಿರ್ದೇಶನ ಪಾಲಿಸಲಾಗಿದೆ ಎಂದು ಸರ್ಕಾರ ಹೇಳುತ್ತದೆ. ಆದರೆ, ಆರ್‌ಬಿಐ ನಿರ್ದೇಶನವು ನಿಯಮ ಅಥವಾ ಶಾಸನವಲ್ಲ. ನಾವು ಖರೀದಿ ಉದ್ಯಮದಲ್ಲಿದ್ದು, ವಾಹನಗಳನ್ನೇ ಭದ್ರತೆಯನ್ನಾಗಿ ಇಟ್ಟುಕೊಳ್ಳುತ್ತೇವೆ. ಸುಗ್ರೀವಾಜ್ಞೆಯ ಸೆಕ್ಷನ್‌ 6 ಬಾಧಕವಾಗಿದೆ” ಎಂದು ವಾದಿಸಿದ್ದರು.