M Lakshmana, Pratap Simha and Karnataka HC
M Lakshmana, Pratap Simha and Karnataka HC 
ಸುದ್ದಿಗಳು

ಬಿಜೆಪಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಮಾಧ್ಯಮ ಗೋಷ್ಠಿ ನಡೆಸದಂತೆ ಲಕ್ಷ್ಮಣ್‌ಗೆ ನಿರ್ಬಂಧ ವಿಧಿಸಿದ ಹೈಕೋರ್ಟ್‌

Siddesh M S

ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್‌ ಸಿಂಹ ವಿರುದ್ಧ ಯಾವುದೇ ಮಾಧ್ಯಮ ಗೋಷ್ಠಿ ನಡೆಸದಂತೆ ಹಾಗೂ ಮಾನಹಾನಿ ಹೇಳಿಕೆಯನ್ನು ಯಾವುದೇ ಮಾಧ್ಯಮದ ಮೂಲಕ ಪ್ರಕಟಿಸದಂತೆ ಕೆಪಿಸಿಸಿ ವಕ್ತಾರ ಎಂ ಲಕ್ಷಣ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ಗುರುವಾರ ನಿರ್ಬಂಧ ವಿಧಿಸಿದೆ.

ತಮ್ಮ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ವಿಧಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ತೆರವುಗೊಳಿಸಿ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ಮಾರ್ಚ್‌ 6ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಪ್ರತಾಪ್‌ ಸಿಂಹ ಸಲ್ಲಿಸಿದ್ದ ಮಿಸಲೇನಿಯಸ್‌ ಫಸ್ಟ್‌ ಅಪೀಲ್‌ (ಎಂಎಫ್‌ಎ) ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಆರ್‌ ನಟರಾಜ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಿತು.

Justice R Nataraj

“ದೇಶದ ಪ್ರತಿಯೊಬ್ಬ ನಾಗರಿಕನಿಗೂ ವಾಕ್‌ ಸ್ವಾತಂತ್ರ್ಯದ ಮೂಲಕ ಮೂಲಭೂತ ಹಕ್ಕು ಖಾತರಿಪಡಿಸಲಾಗಿದ್ದು, ವಾಕ್‌ ಸ್ವಾತಂತ್ರ್ಯ ಬಳಕೆ ಮಾಡುವಾಗ ಆರೋಪ ರುಜುವಾತುಪಡಿಸುವುದಕ್ಕೆ ಸೂಕ್ತವಾದ ದಾಖಲೆ ಇಲ್ಲದಿದ್ದಾಗ ಇನ್ನೊಬ್ಬ ವ್ಯಕ್ತಿಯ ವೃತ್ತಿಪರ ಘನತೆಗೆ ಯಾರೂ ಹಾನಿ ಮಾಡಲಾಗದು. ಪ್ರತಾಪ್‌ ಸಿಂಹ ಅವರ ವಿರುದ್ದ ಲಕ್ಷ್ಮಣ್‌ ಅವರು ಕಾನೂನಾತ್ಮವಾಗಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಲಾಗಿದೆ. ಆದರೆ, ಲಕ್ಷ್ಮಣ್‌ ಅವರು ಮುದ್ರಣ, ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಪ್ರತಾಪ್‌ ವಿರುದ್ಧ ಬಳಕೆ ಮಾಡಿದ್ದಾರೆ. ಹೀಗಾಗಿ, ಮುಂದೆ ಅವರು ಪ್ರತಾಪ್‌ ಸಿಂಹ ಅವರ ಮಾನಹಾನಿ ಮಾಡುವುದನ್ನು ನಿಲ್ಲಿಸಬೇಕಿದೆ” ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.

“ಪ್ರತಿವಾದಿ ಲಕ್ಷ್ಮಣ್‌ ಅವರು ಅರ್ಜಿದಾರ ಪ್ರತಾಪ್‌ ಸಿಂಹ ಅವರ ವಿರುದ್ಧ ಮೇಲ್ಮನವಿ ಇತ್ಯರ್ಥವಾಗುವವರೆಗೆ ಯಾವುದೇ ತೆರನಾದ ಮಾಧ್ಯಮ ಗೋಷ್ಠಿ/ಪ್ರಸಾರ/ಹಂಚಿಕೆಯನ್ನು ಮುದ್ರಣ, ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮ ಅಥವಾ ಇನ್ನಾವುದೇ ಮಾಧ್ಯಮದಲ್ಲಿ ಪ್ರಸಾರ/ಪ್ರಕಟ ಮಾಡಬಾರದು. ಪ್ರತಿವಾದಿ ಲಕ್ಷ್ಮಣ್‌ ಅವರು ಈ ಆದೇಶದಲ್ಲಿ ಮಾರ್ಪಾಡು ಕೋರುವ ಹಕ್ಕು ಹೊಂದಿದ್ದಾರೆ” ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದ್ದು, ಲಕ್ಷ್ಮಣ್‌ ಅವರಿಗೆ ನೋಟಿಸ್‌ ಜಾರಿ ಮಾಡಲು ಆದೇಶಿಸಿದೆ.

ಪ್ರತಾಪ್‌ ಸಿಂಹ ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ ಅರುಣ ಶ್ಯಾಮ್‌ ಅವರು “ಲಕ್ಷ್ಮಣ್‌ ಅವರು ಪ್ರತಾಪ್‌ ಸಿಂಹ ಅವರ ವಿರುದ್ಧ ದೋಷಪೂರಿತ ಮತ್ತು ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್‌ ಮುಖಂಡರಾದ ಲಕ್ಷ್ಮಣ್‌ ಅವರು ಮೇಲಿಂದ ಮೇಲೆ ಮಾಧ್ಯಮ ಗೋಷ್ಠಿ ನಡೆಸುವ ಮೂಲಕ ಪುಕಾರು ಎಬ್ಬಿಸುವ ಆರೋಪಗಳನ್ನು ಮಾಡುತ್ತಿದ್ದಾರೆ. ಇವು ಮುದ್ರಣ, ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಈ ಆರೋಪಗಳು ಪ್ರತಾಪ್‌ ಅವರ ವರ್ಚಸ್ಸಿಗೆ ಧಕ್ಕೆ ಮಾಡುವುದಲ್ಲದೇ ಅವರ ರಾಜಕೀಯ ಬದುಕಿಗೆ ಹಾನಿ ಮಾಡುತ್ತವೆ” ಎಂದು ವಾದಿಸಿದ್ದರು.

ಮುಂದುವರಿದು, “ಲಕ್ಷ್ಮಣ್‌ ಅವರು ಇದುವರೆಗೂ ಯಾವುದೇ ಪ್ರಾಧಿಕಾರ ಅಥವಾ ನ್ಯಾಯಾಲಯದಲ್ಲಿ ಪ್ರತಾಪ್‌ ಸಿಂಹ ಅವರ ವಿರುದ್ಧ ದೂರು ದಾಖಲಿಸಿಲ್ಲ. ವಾಕ್‌ ಸ್ವಾತಂತ್ರ್ಯದ ಅನುಕೂಲ ಬಳಸಿ, ಪ್ರತಾಪ್‌ ಸಿಂಹ ಅವರ ವರ್ಚಸ್ಸಿಗೆ ಹಾನಿಯುಂಟು ಮಾಡುತ್ತಿದ್ದಾರೆ. ಮಾನಹಾನಿ ಮಾಧ್ಯಮ ಗೋಷ್ಠಿ ನಡೆಸಿದ್ದಕ್ಕಾಗಿ ಲಕ್ಷ್ಮಣ್‌ ವಿರುದ್ಧ ಪ್ರತಾಪ್‌ ಸಿಂಹ ಈಗಾಗಲೇ ಎರಡು ಖಾಸಗಿ ದೂರುಗಳನ್ನು ದಾಖಲಿಸಿದ್ದು, ಅವುಗಳು ವಿಚಾರಣೆಗೆ ಬಾಕಿ ಇವೆ. ಮೊದಲಿಗೆ ವಿಚಾರಣಾಧೀನ ನ್ಯಾಯಾಲಯವು ಏಕಪಕ್ಷೀಯ ಪ್ರತಿಬಂಧಕಾದೇಶ ಮಾಡಿದ್ದು, ಆನಂತರ ಅದನ್ನು ತೆರವುಗೊಳಿಸಿದೆ. ಇದನ್ನು ಹಾಲಿ ಮೇಲ್ಮನವಿಯಲ್ಲಿ ಪ್ರಶ್ನಿಸಲಾಗಿದೆ. ವಿಚಾರಣಾಧೀನ ನ್ಯಾಯಾಲಯವು ಮಾಡಿರುವ ಆದೇಶವನ್ನು ಇನ್ನಷ್ಟೇ ಪಡೆಯಬೇಕಿದ್ದು, ಮೇಲ್ಮನವಿ ಇತ್ಯರ್ಥಕ್ಕೆ ಒಳಪಟ್ಟು ಸೂಕ್ತ ಆದೇಶ ಮಾಡಬೇಕು” ಎಂದು ಕೋರಿದ್ದರು.

Pratap Simha Vs M Lakshmana.pdf
Preview