Lawyers
Lawyers 
ಸುದ್ದಿಗಳು

ಕಾನೂನು ನೆರವು ವಕೀಲರ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಸೆ.12ರವರೆಗೆ ಅವಧಿ ವಿಸ್ತರಣೆ

Bar & Bench

ಅಶಕ್ತರು ಮತ್ತು ಆರ್ಥಿಕವಾಗಿ ಸಬಲರಲ್ಲದವರಿಗೆ ನ್ಯಾಯದಾನ ಖಾತರಿಪಡಿಸುವ ನಿಟ್ಟಿನಲ್ಲಿ ಕಾನೂನು ನೆರವು ಅಭಿರಕ್ಷಕರ ವ್ಯವಸ್ಥೆ (ಎಲ್‌ಎಡಿಸಿಎಸ್‌) ಜಾರಿ ಮಾಡಲು ರಾಜ್ಯ ಕಾನೂನು ಸೇವೆ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಮುಂದಾಗಿದೆ. ಇದರ ಭಾಗವಾಗಿ ರಾಜ್ಯದ 16 ಜಿಲ್ಲೆಗಳಲ್ಲಿ ಕಾನೂನು ನೆರವು ಅಭಿರಕ್ಷಕರ ಕಚೇರಿಗೆ ಗುತ್ತಿಗೆ ಆಧಾರದಲ್ಲಿ ಎರಡು ವರ್ಷಗಳ ಅವಧಿಗೆ ಪೂರ್ಣಕಾಲಿಕ ವಕೀಲರ ನೇಮಕಾತಿಗೆ ಅರ್ಜಿ ಸಲ್ಲಿಸಲು ದಿನಾಂಕವನ್ನು ಕೆಎಸ್‌ಎಲ್‌ಎಸ್‌ಎ ವಿಸ್ತರಿಸಿದ್ದು, ಸೆಪ್ಟೆಂಬರ್‌ 12 ಕೊನೆಯ ದಿನವಾಗಿದೆ. ಈ ಹಿಂದೆ ಸೆಪ್ಟೆಂಬರ್‌ 5 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಮಗಳೂರು, ಧಾರವಾಡ, ದಾವಣಗೆರೆ, ಹಾಸನ, ಕಲಬುರ್ಗಿ, ಮಂಗಳೂರು, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯಪುರದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿಗಳಲ್ಲಿ ಸಂಜೆ 5ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕೆಎಸ್‌ಎಲ್‌ಎಸ್‌ಎ ಸದಸ್ಯ ಕಾರ್ಯದರ್ಶಿ ಎಚ್‌ ಶಶಿಧರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಯ್ಕೆ ಸಮಿತಿಯ ಮುಖ್ಯಸ್ಥರ ಮುಂದೆ ಅಭ್ಯರ್ಥಿಗಳ ಪಟ್ಟಿಯನ್ನು ಸೆಪ್ಟೆಂಬರ್‌ 14ರಂದು ಇಡಲಾಗುತ್ತದೆ. ಸೆಪ್ಟೆಂಬರ್‌ 15ರಿಂದ 19ರವರೆಗೆ ಅಭ್ಯರ್ಥಿಗಳ ಸಂದರ್ಶನ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಮತ್ತು ಅವರ ಪಡೆದ ಅಂಕಗಳ ದಾಖಲೆಯನ್ನು ಮುಚ್ಚಿದ ಲಕೋಟೆಯಲ್ಲಿ ಸೆಪ್ಟೆಂಬರ್‌ 21ಕ್ಕೆ ಕೆಎಸ್‌ಎಲ್‌ಎಸ್‌ಎ ಕಾರ್ಯಕಾರಿ ಅಧ್ಯಕ್ಷರಾದ ಹೈಕೋರ್ಟ್‌ ನ್ಯಾಯಮೂರ್ತಿ ಬಿ ವೀರಪ್ಪ ಅವರಿಗೆ ಸಲ್ಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಸಕ್ತರು www.kslsa.kar.nic.in ಗೆ ಭೇಟಿ ನೀಡಿ, ಅರ್ಜಿ ಡೌನ್‌ಲೌಡ್‌ ಮಾಡಿ ಅದನ್ನು ತುಂಬಿದ ಬಳಿಕ ಸಂಬಂಧಿತ ಜಿಲ್ಲಾ ಕಾನೂನು ಪ್ರಾಧಿಕಾರ ಕಚೇರಿಗಳಲ್ಲಿ ಸಲ್ಲಿಕೆ ಮಾಡಬೇಕು.