ಸುದ್ದಿಗಳು

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌: ವರದಿ ಸಲ್ಲಿಸಲು ವಿಚಾರಣಾ ಆಯೋಗಕ್ಕೆ ಮೂರು ವಾರ ಕಾಲಾವಕಾಶ ವಿಸ್ತರಣೆ

ನ್ಯಾಯಮೂರ್ತಿಗಳಾದ ಎಸ್‌ ಸುನೀಲ್‌ ದತ್‌ ಯಾದವ್‌ ಮತ್ತು ವಿಜಯಕುಮಾರ್‌ ಎ.ಪಾಟೀಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ಸೆಪ್ಟೆಂಬರ್‌ 22ರಿಂದ ಅನ್ವಯಿಸುವಂತೆ ಮೂರು ವಾರಗಳ ಹೆಚ್ಚುವರಿ ಕಾಲಾವಕಾಶ ನೀಡಿ ಆದೇಶ ಮಾಡಿದೆ.

Bar & Bench

ಬೆಳಗಾವಿಯ ಸುವರ್ಣ ಸೌಧದ ಬಳಿ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡುವಂತೆ ಕೋರಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿರುವ ಪ್ರಕರಣದ ತನಿಖಾ ವರದಿ ಸಲ್ಲಿಸಲು ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರೂ ಆದ ನ್ಯಾಯಾಂಗ ತನಿಖಾಧಿಕಾರಿಗೆ ಹೆಚ್ಚುವರಿಯಾಗಿ ಮೂರು ವಾರಗಳ ಕಾಲಾವಕಾಶ ನೀಡಿ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಈಚೆಗೆ ಆದೇಶಿಸಿದೆ.

ತನಿಖಾ ವರದಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಕೋರಿ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು 09.09.2025ರಂದು ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿರುವ ನ್ಯಾಯಮೂರ್ತಿಗಳಾದ ಎಸ್‌ ಸುನೀಲ್‌ ದತ್‌ ಯಾದವ್‌ ಮತ್ತು ವಿಜಯಕುಮಾರ್‌ ಎ.ಪಾಟೀಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ಸೆಪ್ಟೆಂಬರ್‌ 22ರಿಂದ ಅನ್ವಯಿಸುವಂತೆ ಮೂರು ವಾರಗಳ ಹೆಚ್ಚುವರಿ ಕಾಲಾವಕಾಶ ನೀಡಿ ಆದೇಶ ಮಾಡಿದೆ.

ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಸುವರ್ಣ ಸೌಧದ ಮುಂದೆ 10.12.2024ರಂದು ನಡೆದ ಲಾಠಿ ಚಾರ್ಜ್‌ ಘಟನೆಯನ್ನು ವಿಚಾರಣಾ ಆಯೋಗಕ್ಕೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬಾಗಲಕೋಟೆಯ ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷರಾಗಿದ್ದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ 2025ರ ಏಪ್ರಿಲ್‌ 4ರಂದು ಪುರಸ್ಕರಿಸಿತ್ತು. ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಬೇಕು. ಆಯೋಗ ರಚನೆಯಾದ ಮೂರು ತಿಂಗಳಲ್ಲಿ ವರದಿ ಸಿದ್ಧಪಡಿಸಿ, ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.

ಆದರೆ, ನ್ಯಾಯಾಂಗ ತನಿಖೆ ಬಿಟ್ಟು ಬೇರೆ ಯಾವುದೇ ತೆರನಾದ ತನಿಖೆಗೆ ನೀಡಲು ಕರ್ನಾಟಕ ಹೈಕೋರ್ಟ್‌ ಜುಲೈ 10ರಂದು ನಿರಾಕರಿಸಿತ್ತು. ಇದೇ ವೇಳೆ, ಏಕಸದಸ್ಯ ಪೀಠದ ಆದೇಶದಲ್ಲಿ ಕೆಲವು ಮಾರ್ಪಾಡು ಮಾಡಿ, ರಾಜ್ಯ ಸರ್ಕಾರದ ಮೇಲ್ಮನವಿಯನ್ನು ಇತ್ಯರ್ಥಪಡಿಸಿತ್ತು.

ನಿವೃತ್ತ ನ್ಯಾಯಮೂರ್ತಿ ಬದಲಿಗೆ ಜಿಲ್ಲಾ ನ್ಯಾಯಾಂಗದ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ರಾಜ್ಯ ಸರ್ಕಾರವು ವಿಚಾರಣಾ ಆಯೋಗ ರಚಿಸಬೇಕು. ಆರು ವಾರಗಳಲ್ಲಿ ಆಯೋಗವು ವರದಿ ಸಲ್ಲಿಸಬೇಕು ಎಂದು ವಿಭಾಗೀಯ ಪೀಠ ನಿರ್ದೇಶಿಸಿತ್ತು. ಇದರ ಭಾಗವಾಗಿ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ವರದಿ ಸಲ್ಲಿಸಲು ಹೆಚ್ಚುವರಿ ಕಾಲಾವಕಾಶ ಕೋರಿದ್ದರು. ಇದನ್ನು ಪರಿಗಣಿಸಿ ಪೀಠವು ಮೂರು ವಾರ ಅವಧಿ ವಿಸ್ತರಿಸಿದೆ.