Murder 
ಸುದ್ದಿಗಳು

ವಕೀಲ ಅಮಿತ್‌ ಕೊಲೆ ಪ್ರಕರಣ: ರಾಜೇಶ್‌ ಗೌಡ ದೋಷಿ ಎಂದ ಬೆಂಗಳೂರು ಗ್ರಾಮಾಂತರ ನ್ಯಾಯಾಲಯ; ನಾಳೆ ಶಿಕ್ಷೆ ಪ್ರಕಟ

Bar & Bench

ನೆಲಮಂಗಲದ ವಕೀಲ ಕೇಶವಮೂರ್ತಿ ಅವರ ಪುತ್ರ ವಕೀಲ ಅಮಿತ್‌ ಕೇಶವಮೂರ್ತಿ ಕೊಲೆ ಪ್ರಕರಣದಲ್ಲಿ ಆರೋಪಿ ರಾಜೇಶ್‌ ಗೌಡ ದೋಷಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ವಿಚಾರಣೆ ಪೂರ್ಣಗೊಳಿಸಿ ಈ ಕುರಿತಂತೆ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಾಧೀಶ ಹೊಸಮನಿ ಪುಂಡಲೀಕ ಅವರು ಬುಧವಾರ ಮುಕ್ತ ನ್ಯಾಯಾಲಯದಲ್ಲಿ ಪ್ರಕಟಿಸಿ, ಶಿಕ್ಷೆಯ ಪ್ರಮಾಣವನ್ನು ಗುರುವಾರ ಘೋಷಿಸುವುದಾಗಿ ತಿಳಿಸಿದರು. ಪ್ರಾಸಿಕ್ಯೂಷನ್‌ ಪರ ಹಿರಿಯ ವಕೀಲ ಸಿ ಎಚ್ ಹನುಮಂತರಾಯ ವಾದ ಮಂಡಿಸಿದ್ದರು.

ಪ್ರಕರಣ ಏನು: ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಆಚಾರ್ಯ ಎಂಜಿನಿಯರಿಂಗ್ ಕಾಲೇಜು ಬಳಿ 2017ರ ಜನವರಿ 13ರಂದು ಮಧ್ಯಾಹ್ನ 3.15ರ ಸಮಯದಲ್ಲಿ ಅಮಿತ್‌ ಕೇಶವಮೂರ್ತಿ ಅವರು ಆರೋಪಿ ರಾಜೇಶ್‌ ಅವರ ಪತ್ನಿ ಪಿಡಿಒ ಶ್ರುತಿಗೌಡ ಅವರೊಂದಿಗೆ ಸ್ವಿಫ್ಟ್ ಕಾರಿನಲ್ಲಿ ಕುಳಿತಿದ್ದರು. ಶ್ರುತಿ ಗೌಡ ಅವರಿಗೆ ಸೇರಿದ ಈ ಕಾರನ್ನು ಹಿಂಬಾಲಿಸಿಕೊಂಡು ಬಂದಿದ್ದ ರಾಜೇಶ್, ಕಾರಿನ ಬಾಗಿಲು ತೆರೆದು ತಮ್ಮ ಬಳಿ ಇದ್ದ ಪಿಸ್ತೂಲಿನಿಂದ ಅಮಿತ್‌ ಮೇಲೆ ಏಕಾಏಕಿ ಗುಂಡು ಹಾರಿಸಿ ಕೊಂದಿದ್ದರು.

ಶ್ರುತಿ ಗೌಡ ಅವರ ನಡೆ ಮತ್ತು ಚಟುವಟಿಕೆಗಳ ಮೇಲೆ ಸದಾ ಸಂಶಯ ವ್ಯಕ್ತಪಡಿಸುತ್ತಿದ್ದ ರಾಜೇಶ್‌, ಶ್ರುತಿ ಬಳಸುವ ಕಾರಿಗೆ ಜಿಪಿಎಸ್‌ ಅಳವಡಿಸಿ ಅದರ ಮುಖಾಂತರ ಅವರಿದ್ದ ಸ್ಥಳಕ್ಕೆ ಹಿಂಬಾಲಿಸಿಕೊಂಡು ಬಂದಿದ್ದರು. ಅಮಿತ್‌ ಮೃತಪಟ್ಟ ಸುದ್ದಿ ತಿಳಿದ ನಂತರ ಶ್ರುತಿಗೌಡ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಆರೋಪ ಪಟ್ಟಿಯಲ್ಲಿ ವಿವರಿಸಲಾಗಿದೆ. ಈ ಪ್ರಕರಣದ ಮತ್ತೊಬ್ಬ ಆರೋಪಿಯಾಗಿದ್ದ ರಾಜೇಶ್‌ ತಂದೆ ಗೋಪಾಲಕೃಷ್ಣ (82) ವಿಚಾರಣೆಗೂ ಮುನ್ನವೇ ಸಾವನ್ನಪ್ಪಿದ್ದರು.

ಅಮಿತ್ ಕೇಶವಮೂರ್ತಿ ಅಮೆರಿಕದಲ್ಲಿ ಎಲ್ಎಲ್ಎಂ ಸ್ನಾತಕೋತ್ತರ ಪದವಿ ಪಡೆದಿದ್ದರು. ನೆಲಮಂಗಲ ಮತ್ತು ಬೆಂಗಳೂರು ನಗರದಲ್ಲಿ ವಕೀಲಿಕೆ ನಡೆಸುತ್ತಿದ್ದರು.