PSI exam scam and Karnataka HC
PSI exam scam and Karnataka HC 
ಸುದ್ದಿಗಳು

ಬಹುಚರ್ಚಿತ ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ ಪ್ರಕರಣ: ನಾಳೆ ಆದೇಶ ಪ್ರಕಟಿಸಲಿರುವ ಕರ್ನಾಟಕ ಹೈಕೋರ್ಟ್‌

Bar & Bench

ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಮರು ಪರೀಕ್ಷೆಗೆ ಆದೇಶಿಸಿದ್ದ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದತಿ ಕೋರಿರುವ ಅರ್ಜಿಗಳಿಗೆ ಸಂಬಂಧಿಸಿದ ಬಹುನಿರೀಕ್ಷಿತ ಆದೇಶವನ್ನು ಶುಕ್ರವಾರ ಮಧ್ಯಾಹ್ನ ಕರ್ನಾಟಕ ಹೈಕೋರ್ಟ್‌ ಪ್ರಕಟಿಸಲಿದೆ.

ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಅಕ್ಟೋಬರ್‌ 26 ರಂದು ಕಾಯ್ದಿರಿಸಿರುವ ಆದೇಶವನ್ನು ನ್ಯಾಯಮೂರ್ತಿಗಳಾದ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಮಧ್ಯಾಹ್ನ 1.25ಕ್ಕೆ ಪ್ರಕಟಿಸಲಿದೆ.

ಕೋಲಾರದ ಚಂದನ್‌ ಎನ್‌ ವಿ ಸೇರಿದಂತೆ ನೂರಾರು ಅಭ್ಯರ್ಥಿಗಳು ಏಳು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ಸುದೀರ್ಘವಾಗಿ ನ್ಯಾಯಾಲಯ ನಡೆಸಿದೆ.

ಪಿಎಸ್‌ಐ ನೇಮಕಾತಿಯ ಹಗರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮರು ಪರೀಕ್ಷೆ ನಡೆಸಲು ಉದ್ದೇಶಿಸಿರುವ ತೀರ್ಮಾನದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲಾಗದು ಎಂದು ಪೀಠವು ಆಗಸ್ಟ್‌ 4ರ ವಿಚಾರಣೆಯಂದು ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದನ್ನು ಇಲ್ಲಿ ನೆನೆಯಬಹುದಾಗಿದೆ.

ಪಿಎಸ್‌ಐ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಹೊರತುಪಡಿಸಿ ಉಳಿದವರಿಗೆ ವಿಶೇಷ ಪರೀಕ್ಷೆ ನಡೆಸಲು ಏಕೆ ಸಾಧ್ಯವಿಲ್ಲ ಎಂಬುದಕ್ಕೆ ಸಂಬಂಧಿಸಿದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ರಾಜ್ಯ ಸರ್ಕಾರವು ಪೀಠಕ್ಕೆ ಸಲ್ಲಿಸಿತ್ತು.

ಪಿಎಸ್‌ಐ ನೇಮಕಾತಿ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶಕ್ಕೆ 2022ರ ಸೆಪ್ಟೆಂಬರ್‌ 28ರಂದು ಹೈಕೋರ್ಟ್‌ ತಡೆ ವಿಧಿಸಿದ್ದು, ಆ ಆದೇಶ ಚಾಲ್ತಿಯಲ್ಲಿದೆ.

ರಾಜ್ಯ ಸರ್ಕಾರವು 2022ರ ಏಪ್ರಿಲ್‌ 29ರಂದು ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವುದಾಗಿ ಆದೇಶ ಹೊರಡಿಸಿತ್ತು. ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ (ಕೆಎಟಿ) 2022ರ ಜುಲೈ 19ರಂದು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಬಾದಿತ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯವು ಆದೇಶ ಕಾಯ್ದಿರಿಸಿದೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಪಿ ಎಸ್‌ ರಾಜಗೋಪಾಲ, ಡಿ ಆರ್‌ ರವಿಶಂಕರ್‌, ಕೆ ಎನ್‌ ಫಣೀಂದ್ರ, ವಕೀಲ ಸಂತೋಷ್‌ ಕುಮಾರ್‌ ನಗರ್ಲೆ, ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ವಾದಿಸಿದ್ದರು.