ಮಂಡ್ಯ, ಹೊಸಕೋಟೆ, ಚಿತ್ರದುರ್ಗ ಹಾಗೂ ಗೌರಿಬಿದನೂರು ನಗರಸಭೆಗಳಿಗೆ ಚುನಾಯಿತ ಸದಸ್ಯರ ಅವಧಿ ಪೂರ್ಣಗೊಳ್ಳುವ ತನಕ ಆ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಮಾಡದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ನಿರ್ದೇಶಿಸಿದೆ.
ಈ ವಿಚಾರವಾಗಿ ಈ ನಾಲ್ಕು ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹೊಸದಾಗಿ ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಆರ್ ನಟರಾಜ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ ಆಲಿಸಿದ ಪೀಠವು ನ್ಯಾಯಾಲಯದ ಮುಂದೆ ಬಂದಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಅವಧಿ ಮುಗಿಯುವ ತನಕ ಆಡಳಿತಾಧಿಕಾರಿಗಳನ್ನು ನೇಮಕ ಮಾಡಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿತು. ಅಲ್ಲದೇ, ಅರ್ಜಿಗಳ ಸಂಬಂಧ ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗ, ಆಯಾ ಜಿಲ್ಲಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿತು.
ಈಗ ಹೊಸದಾಗಿ ಅರ್ಜಿ ಸಲ್ಲಿಸಿರುವ ನಾಲ್ಕು ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ಈ ಹಿಂದೆ ಅರ್ಜಿ ಸಲ್ಲಿಸಿ ಆಡಳಿತಾಧಿಕಾರಿ ನೇಮಕ ಮಾಡಬಾರದು ಎಂದು ಮಧ್ಯಂತರ ಆದೇಶ ಪಡೆದುಕೊಂಡಿರುವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರಸಭೆ, ಹಾಸನ ಜಿಲ್ಲೆ ಹೊಳೆನರಸೀಪುರ ಪುರಸಭೆ, ಮಂಡ್ಯ ಜಿಲ್ಲೆ ಮಳವಳ್ಳಿ ಪುರಸಭೆ, ಕೋಲಾರ ಜಿಲ್ಲೆ ಮುಳಬಾಗಿಲು ನಗರಸಭೆ ಹಾಗೂ ಚಿಕ್ಕಬಳ್ಳಾಪುರ ನಗರಸಭೆಯ ಅರ್ಜಿಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮಂದೂಡಿತು.
ಈ ಮೇಲಿನ ನಗರ ಸ್ಥಳೀಯ ಸಂಸ್ಥೆಗಳಿಗೆ ಐದು ವರ್ಷದ ಅವಧಿಗೆ ಸಾರ್ವತ್ರಿಕ ಚುನಾವಣೆ ನಡೆದು, ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗೆ ಒಂದು ಬಾರಿಗೆ 30 ತಿಂಗಳಂತೆ ಎರಡು ಅವಧಿ ನಿಗದಿಯಾಗಿತ್ತು. ಮೊದಲ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆದು, ಸ್ಥಳೀಯ ಸಂಸ್ಥೆ ಮೊದಲ ಸಭೆ ನಡೆದ ದಿನದಿಂದ ಮುಂದಿನ ಐದು ವರ್ಷ ಚುನಾಯಿತ ಸದಸ್ಯರ ಅವಧಿ ಇರುತ್ತದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಆದರೆ, ಮೊದಲ ಅವಧಿಯ 30 ತಿಂಗಳ ಬಳಿಕ ಎರಡನೇ ಅವಧಿಯ 30 ತಿಂಗಳುಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಹುದ್ದೆಯ ಮೀಸಲಾತಿ ನಿಗದಿಯ ವಿಳಂಬದಿಂದಾಗಿ ಸುಮಾರು ಒಂದು ವರ್ಷಕ್ಕೂ ಅಧಿಕ ಅವಧಿ ಆಯಾ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಅದಾದ ಬಳಿಕ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ. ಹಾಗಾಗಿ, ಎರಡನೇ ಅವಧಿಯಲ್ಲಿ 30 ತಿಂಗಳು ಅಧಿಕಾರವಧಿ ಸಿಗುವುದಿಲ್ಲ. ಆದ್ದರಿಂದ ಆಡಳಿತಾಧಿಕಾರಿ ನೇಮಕ ಆಗಿದ್ದ ಅವಧಿಯನ್ನು ತಮ್ಮ ಒಟ್ಟು ಅಧಿಕಾರವಧಿಗೆ ಪರಿಗಣಿಸಬಾರದು. ಅದೇ ರೀತಿ ಚುನಾಯಿತ ಸದಸ್ಯರ ಅವಧಿ ಮುಗಿದಿದೆ ಎಂದು ಆಡಳಿತಾಧಿಕಾರಿಗಳನ್ನು ನೇಮಕ ಮಾಡಬಾರದು ಎಂದು ಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.