D Devarajegowda and HC 
ಸುದ್ದಿಗಳು

ಹಾಸನ ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಅಡ್ಡಿ: ದೇವರಾಜೇಗೌಡ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

“ಜಿಲ್ಲಾಧಿಕಾರಿ ತಮ್ಮ ದೂರಿನಲ್ಲಿ ತಕ್ಷಣವೇ ಏನು ನಡೆಯಿತು ಎಂಬುದನ್ನು ಹೇಳುವಲ್ಲಿ ವಿಫಲವಾಗಿದ್ದಾರೆ. ಇಂತಹ ಕ್ರಿಮಿನಲ್‌ ಪ್ರಕರಣವನ್ನು ದಾಖಲಿಸಿರುವುದು ಕಾನೂನಿನ ದುರ್ಬಳಕೆ” ಎಂದ ನ್ಯಾಯಾಲಯ.

Bar & Bench

“ಒಬ್ಬ ಜಿಲ್ಲಾಧಿಕಾರಿಗೆ ತಮ್ಮ ಕಚೇರಿಯ ಒಳಗೆ ಯಾರಾದರೂ ಬಂದು ವಾಗ್ವಾದ ನಡೆಸಿ ಹೋದಾಗ ಅವರು ಏನು ಮಾತನಾಡಿದ್ದಾರೆ ಎಂಬುದರ ದೂರು ಕೊಡಲು ನಾಲ್ಕು ದಿನಗಳ ಸಮಯ ಬೇಕೆ?” ಎಂದು ಕರ್ನಾಟಕ ಹೈಕೋರ್ಟ್‌ ಬುಧವಾರ ಹಾಸನ ಜಿಲ್ಲಾಧಿಕಾರಿಯನ್ನು ಮೌಖಿಕವಾಗಿ ತರಾಟೆಗೆ ತೆಗೆದುಕೊಂಡಿತು.

ಹಾಸನ ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ ಆರೋಪದಡಿ ಹೈಕೋರ್ಟ್‌ ವಕೀಲ ಜಿ ದೇವರಾಜೇಗೌಡ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ರದ್ದುಗೊಳಿಸಿದೆ.

ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ ಅವರನ್ನು “ನಿಮ್ಮ ಅರ್ಜಿದಾರರು ಏಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ ಸುದ್ದಿಗೋಷ್ಠಿ ನಡೆಸಿದರು” ಎಂದು ಪೀಠ ಪ್ರಶ್ನಿಸಿತು.

ಇದಕ್ಕೆ ಅರುಣ್‌ ಶ್ಯಾಮ್‌ ಅವರು “ಪತ್ರಕರ್ತರು ಅರ್ಜಿದಾರರ ಬೈಟ್‌ ಪಡೆಯಲು ಹೊರಗೆ ಕಾದು ನಿಂತಿದ್ದರು. ಹೀಗಾಗಿ, ದೇವರಾಜೇಗೌಡ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ ಅಷ್ಟೇʼ ಎಂದರು.

ಆದರೆ, ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅಲ್ಲಗಳೆದರು ಆಗ ಪೀಠವು ಪೀಠವು “ಜಿಲ್ಲಾಧಿಕಾರಿ ತಮ್ಮ ದೂರಿನಲ್ಲಿ ತಕ್ಷಣವೇ ಏನು ನಡೆಯಿತು ಎಂಬುದನ್ನು ಹೇಳುವಲ್ಲಿ ವಿಫಲವಾಗಿದ್ದಾರೆ. ಇಂತಹ ಕ್ರಿಮಿನಲ್‌ ಪ್ರಕರಣವನ್ನು ದಾಖಲಿಸಿರುವುದು ಕಾನೂನಿನ ದುರ್ಬಳಕೆ” ಎಂಬ ಅಭಿಪ್ರಾಯದೊಂದಿಗೆ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿತು.

ಪ್ರಕರಣದ ಹಿನ್ನೆಲೆ: ವಕೀಲ ಜಿ ದೇವರಾಜೇಗೌಡ ಅವರು ಅನುಮತಿ ಇಲ್ಲದೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ನನ್ನನ್ನು ನಿಂದಿಸಿರುತ್ತಾರೆ. ಆ ಮೂಲಕ ಸಾರ್ವಜನಿಕರ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಸತ್ಯಭಾಮ ಅವರು ಹಾಸನ ನಗರ ಪೊಲೀಸ್‌ ಠಾಣೆಯಲ್ಲಿ 2024ರ ಮಾರ್ಚ್ 19ರಂದು ದೂರು ದಾಖಲಿಸಿದ್ದರು.

ಚನ್ನರಾಯಪಟ್ಟಣ ಆದ್ಯಾಸ್‌ ಬಾರ್‌ ಅಂಡ್ ರೆಸ್ಟೊರೆಂಟ್‌ ಕಳೆದ ಆರು ತಿಂಗಳಿನಿಂದ ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಬಕಾರಿ ಇಲಾಖೆ ಆಯುಕ್ತರು ತನಿಖೆ ನಡೆಸಿ ನಿಯಮ ಉಲ್ಲಂಘಿಸಿರುವುದು ದೃಢಪಟ್ಟಿದ್ದು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ವರದಿ ಮಾಡಲಾಗಿರುತ್ತದೆ. ಆದರೆ, ಜಿಲ್ಲಾಧಿಕಾರಿ ಸತ್ಯಭಾಮ, ಬಾರ್‌ ಅಂಡ್‌ ರೆಸ್ಟೊರೆಂಟ್‌ ವಿರುದ್ಧ ಕ್ರಮ ಕೈಗೊಳ್ಳುವ ಬದಲಿಗೆ, ಕಡತಗಳನ್ನು ತಮ್ಮ ಬಳಿಯೇ ಇರಿಸಿಕೊಂಡು ಅವ್ಯವಹಾರಗಳನ್ನು ಮಾಡುತ್ತಿರುವವರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದೇವರಾಜೇಗೌಡ ಅವರು 15ರ ಮಾರ್ಚ್‌ 2024ರಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ ಎಂದು ಸತ್ಯಭಾಮ ತಮ್ಮ ದೂರಿನಲ್ಲಿ ವಿವರಿಸಿದ್ದರು. ಈ ದೂರಿನ ಅನ್ವಯ ಪೊಲೀಸರು ಐಪಿಸಿ ಸೆಕ್ಷನ್ 353ರ ಅಡಿಯಲ್ಲಿ ದೇವರಾಜೇಗೌಡ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದ್ದರು. ಇದನ್ನು ರದ್ದುಪಡಿಸವಂತೆ ಕೋರಿ ದೇವರಾಜೇಗೌಡ ಈ ಅರ್ಜಿ ಸಲ್ಲಿಸಿದ್ದರು.