ರಾಷ್ಟ್ರೀಯ ಸ್ವಯಂ ಸೇವಾ ಸಂಘ (ಆರ್ಎಸ್ಎಸ್) 100 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್ 13 ಅಥವಾ 16ರಂದು ಪಥಸಂಚಲನ ನಡೆಸುವುದಕ್ಕೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆರ್ಎಸ್ಎಸ್ ಹೊಸದಾಗಿ ಪ್ರಸ್ತಾವನೆ ಸಲ್ಲಿಸಿದೆ.
ಕರ್ನಾಟಕ ಹೈಕೋರ್ಟ್ನ ಕಲಬುರ್ಗಿ ಪೀಠದ ಸೂಚನೆ ಮೇರೆಗೆ ಪಥಸಂಚಲನಕ್ಕೆ ಅನುಮತಿ ನೀಡುವ ಬಗ್ಗೆ ಉಂಟಾಗಿರುವ ವಿವಾದ ಪರಿಹರಿಸಲು ರಾಜ್ಯ ಅಡ್ವೋಕೇಟ್ ಜನರಲ್ (ಎಜಿ) ಕಚೇರಿಯಲ್ಲಿ ಕೆ ಶಶಿಕಿರಣ್ ಶೆಟ್ಟಿ ಅವರ ನೇತೃತ್ವದಲ್ಲಿ ಬುಧವಾರ ಸಂಜೆ ಶಾಂತಿಸಭೆ ನಡೆಯಿತು.
ಪಥ ಸಂಚಲನಕ್ಕೆ ಅರ್ಜಿದಾರರೂ ಆಗಿರುವ ಆರ್ಎಸ್ಎಸ್ ಕಲಬುರ್ಗಿ ಜಿಲ್ಲಾ ಸಮನ್ವಯಕಾರ ಅಶೋಕ್ ಪಾಟೀಲ್ ಅವರು ಹಿರಿಯ ವಕೀಲ ಎಂ ಅರುಣ್ ಶ್ಯಾಮ್ ಅವರ ಸಮ್ಮುಖದಲ್ಲಿ ಶಶಿಕಿರಣ್ ಶೆಟ್ಟಿ ಅವರಿಗೆ ಪ್ರಸ್ತಾವ ಸಲ್ಲಿಸಿದರು. ಪ್ರಸ್ತಾವದೊಂದಿಗೆ ಪಥಸಂಚಲನ ನಡೆಸುವ ಮಾರ್ಗ, ಸ್ವಯಂ ಸೇವಕರು ನಡೆಸಲಿರುವ ಸಭೆ ಮತ್ತು ವಾಹನಗಳ ನಿಲುಗಡೆಗೆ ಜಾಗದ ಫೋಟೊಗಳನ್ನು ಸಹ ಸಲ್ಲಿಸಲಾಗಿದೆ. ಅದಕ್ಕೆ ಶಶಿಕಿರಣ್ ಶೆಟ್ಟಿ ಅವರು ಪ್ರಸ್ತಾವ ಕುರಿತಂತೆ ಜಿಲ್ಲಾಡಳಿತ ನಿರ್ಧಾರ ಕೈಗೊಳ್ಳಬೇಕಿದೆ. ಅದರಂತೆ ನಿರ್ಧಾರ ಕೈಗೊಂಡು ನವೆಂಬರ್ 7ರಂದು ಹೈಕೋರ್ಟ್ಗೆ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ನವೆಂಬರ್ 13 ಅಥವಾ 16ರಂದು ಪಥಸಂಚಲನ ನಡೆಸಲು ಉದ್ದೇಶಿಸಲಾಗಿದೆ. ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ಪಥಸಂಚಲನದಲ್ಲಿ ಚಿತ್ತಾಪುರ ತಾಲ್ಲೂಕು ಆರ್ಎಸ್ಎಸ್ ಸ್ವಯಂ ಸೇವಕರು ಮಾತ್ರ ಭಾಗವಹಿಸುತ್ತಾರೆ. ನೆರೆಯ ತಾಲ್ಲೂಕಿನವರು ಭಾಗವಹಿಸಬಾರದು ಎಂದು ಸೂಚಿಸಲಾಗಿದೆ. ಪಥಸಂಚಲನದಲ್ಲಿ 600ರಿಂದ 850 ಸ್ವಯಂ ಸೇವಕರು ಗಣವೇಶದಲ್ಲಿ ಭಾಗವಹಿಸುತ್ತಾರೆ. ಸಾಮಾನ್ಯವಾಗಿ ನಡೆಸುವ ನಾಲ್ಕು ಸಾಲಿನ ಬದಲು 3 ಸಾಲಿನಲ್ಲಿಯೇ ಮೂರು ಕಿ ಮೀ ಪಥಸಂಚನ ನಡೆಸಲಾಗುತ್ತದೆ. ಅದು ಸುಮಾರು 37ರಿಂದ 45 ನಿಮಿಷದೊಳಗೆ ಪೂರ್ಣಗೊಳ್ಳಲಿದೆ. ಈ ವೇಳೆ ಸಂಚಾರ ದಟ್ಟಣೆ ತಪ್ಪಿಸಲು ಪೊಲೀಸರಿಗೆ ಸ್ವಯಂ ಸೇವಕರು ಸಹಕಾರ ನೀಡಲಿದ್ದಾರೆ ಎಂದು ಪ್ರಸ್ತಾವದಲ್ಲಿ ತಿಳಿಸಲಾಗಿದೆ.
ಪಥಸಂಚಲನದ ವೇಳೆ ಯಾವುದೇ ಘೋಷಣೆ ಕೂಗುವುದಿಲ್ಲ. ಕೇವಲ ಬ್ಯಾಂಡ್ ವಾದ್ಯ ನುಡಿಸಲಾಗುತ್ತದೆ. ಯಾರ ಭಾವನೆಗಳಿಗೂ ಆರ್ಎಸ್ಎಸ್ ಧಕ್ಕೆ ತರುವುದಿಲ್ಲ. ಯಾರನ್ನೂ ಅಪಹಾಸ್ಯ ಮಾಡುವುದಿಲ್ಲ. ಶಾಂತಿ ಭಂಗ ತರುವುದಿಲ್ಲ. ಇಡೀ ಪಥಸಂಚಲವನ್ನು ಡ್ರೋನ್ ಕ್ಯಾಮೆರಾ ಮೂಲಕ ಚಿತ್ರೀಕರಣ ನಡೆಸಲಾಗುತ್ತದೆ. ಗೂಗಲ್ ಮ್ಯಾಪ್ ಮೂಲಕ ಫೋಟೋಗಳನ್ನು ತೆಗೆಯಲಾಗುತ್ತದೆ. ಇದಲ್ಲದೆ, ಪಥಸಂಚಲನಕ್ಕೆ ಪರವಾನಗಿ ನೀಡಲು ಜಿಲ್ಲಾಡಳಿತ ವಿಧಿಸುವ ಎಲ್ಲಾ ಷರತ್ತುಗಳನ್ನು ಪಾಲಿಸಲಾಗುವುದು. ಸ್ವಯಂಸೇವಕರ ವಾಹನಗಳನ್ನು ಬಜಾಜ್ ಕಲ್ಯಾಣ ಮಂಟಪ ಆವರಣದಲ್ಲಿ ನಿಲ್ಲಿಸಲು ಅಗತ್ಯ ಸಿದ್ಧತೆ ಮಾಡಲಾಗಿದೆ. ಪಥಸಂಚಲನದ ಕೊನೆಯಲ್ಲಿ ಬಜಾಜ್ ಕಲ್ಯಾಣ ಮಂಟಪದೊಳಗೆ ಸ್ವಯಂಸೇವಕರ ಸಭೆ ನಡೆಸಲಿದ್ದು, ಅದಕ್ಕಾಗಿ ಅಗತ್ಯ ಅನುಮತಿಯನ್ನು ಈಗಾಗಲೇ ಪಡೆಯಲಾಗಿದೆ ಎಂದು ಪ್ರಸ್ತಾವದಲ್ಲಿ ಸ್ಪಷ್ಟಪಡಿಸಲಾಗಿದೆ.
ಸಭೆಯಲ್ಲಿ ಕಲಬುರಗಿ ಜಿಲ್ಲಾಡಳಿತದ ಅಧಿಕಾರಿಗಳು, ಕಡ್ಲೂರ್ ಸತ್ಯನಾರಾಯಣಾಚಾರ್ಯ ಮತ್ತಿತರರು ಭಾಗವಹಿಸಿದ್ದರು.